ರಾಜ್ಯಾದ್ಯಂತ 51 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಸರಕಾರ ಆದೇಶ

ಸಾಂದರ್ಭಿಕ ಚಿತ್ರ
ಬೆಂಗಳೂರು : 2025-26 ಶೈಕ್ಷಣಿಕ ಸಾಲಿಗೆ ಅನ್ವಯವಾಗುವಂತೆ ರಾಜ್ಯಾದ್ಯಂತ ಸರಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ 51 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಲು ರಾಜ್ಯ ಸರಕಾರವು ಶುಕ್ರವಾರದಂದು ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ಮೇ 29ರಂದು ಶಾಲೆಗಳು ಪುನರಾರಂಭವಾಗಲಿವೆ. ಈ ಹಿನ್ನೆಲೆಯಲ್ಲಿ ಶೈಕ್ಷಣಿಕ ಚಟುವಟಿಕೆಗಳು ನಿರಂತರವಾಗಿ ಹಾಗೂ ಸಮಯಕ್ಕೆ ಸರಿಯಾಗಿ ಆರಂಭವಾಗಲಿ ಎಂಬ ಉದ್ದೇಶ ಈ ತಾತ್ಕಾಲಿಕ ನೇಮಕಾತಿಗೆ ಆದೇಶ ಹೊರಡಿಸಿದೆ.
ರಾಜ್ಯದ ಬಹುತೇಕ ಶಾಲೆಗಳಲ್ಲಿ ಶಿಕ್ಷಕರುಗಳ ಹುದ್ದೆಗಳು ಖಾಲಿಯಿವೆ. ಹೀಗಾಗಿ ಶೈಕ್ಷಣಿಕ ಹಿತದೃಷ್ಟಿಯಿಂದ ಅತಿಥಿ ಶಿಕ್ಷಕರುಗಳನ್ನು ತಾತ್ಕಾಲಿಕವಾಗಿ ನೇರ ನೇಮಕಾತಿ ಮೂಲಕ ಶಿಕ್ಷಕರನ್ನು ಭರ್ತಿ ಮಾಡುವವರೆಗೆ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಎಂಬ ಷರತ್ತಿಗೊಳಪಟ್ಟು ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಸರಕಾರವು ಮಂಜೂರಾತಿ ನೀಡಿ ಆದೇಶಿಸಿದೆ.
51 ಸಾವಿರ ಅತಿಥಿ ಶಿಕ್ಷಕರ ಪೈಕಿ 40 ಸಾವಿರ ಶಿಕ್ಷಕರನ್ನು ಸರಕಾರಿ ಪ್ರಾಥಮಿಕ ಶಾಲೆಗಳಿಗೆ ಹಾಗೂ ಉಳಿದ 11 ಸಾವಿರ ಶಿಕ್ಷಕರನ್ನು ಸರಕಾರಿ ಪ್ರೌಢ ಶಾಲೆಗಳಿಗೆ ನೇಮಿಸಿ ಆದೇಶಿಸಿದೆ. ಅತಿಥಿ ಶಿಕ್ಷಕರಿಗೆ ನೀಡಲಾಗುವ ಗೌರವಧನದ ಪಾವತಿಗಾಗಿ ಅವಶ್ಯವಿರುವ ಅನುದಾನದ ವಿವರ ಹಾಗೂ ಅಥಿತಿ ಶಿಕ್ಷಕರ ಜಿಲ್ಲಾ, ತಾಲ್ಲೂಕುವಾರು ವಿವರಗಳೊಂದಿಗೆ ಪ್ರಸ್ತಾವವನ್ನು ಸಲ್ಲಿಸುವಂತೆ ಸೂಚನೆ ನೀಡಲಾಗಿದೆ.
ವಿದ್ಯಾರ್ಥಿಗಳು ಶಿಕ್ಷಕರ ಕೊರತೆಯಿಂದ ಶಿಕ್ಷಣದಿಂದ ವಂಚಿತರಾಗಬಾರದು ಎಂಬುದು ನಮ್ಮ ಮುಖ್ಯ ಗುರಿ. ಹೀಗಾಗಿ ಅತಿಥಿ ಶಿಕ್ಷಕರ ನೇಮಕಾತಿ ನಿರ್ಧಾರ ಶೈಕ್ಷಣಿಕ ಕೊರತೆಯನ್ನು ಪೂರೈಸಲು ಅಗತ್ಯವಾಗಿದೆ. ಹೊಸ ಶೈಕ್ಷಣಿಕ ವರ್ಷ ಆರಂಭದ ದಿನದಿಂದಲೇ ಗುಣಮಟ್ಟದ ಶಿಕ್ಷಣ ಎಲ್ಲರಿಗೂ ಲಭ್ಯವಾಗುವುದು ನಮ್ಮ ಆದ್ಯತೆ.
-ಮಧು ಬಂಗಾರಪ್ಪ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ







