ರೈತರ ಆತ್ಮಹತ್ಯೆ ಪ್ರಕರಣಗಳನ್ನು ರಾಜ್ಯ ಸರಕಾರ ಮುಚ್ಚಿಟ್ಟಿದೆ: ಎಚ್.ಡಿ. ಕುಮಾರಸ್ವಾಮಿ ಆರೋಪ

ಎಚ್.ಡಿ. ಕುಮಾರಸ್ವಾಮಿ
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ರೈತರ ಆತ್ಮಹತ್ಯೆ ಪ್ರಕರಣಗಳನ್ನು ರಾಜ್ಯ ಸರಕಾರ ಮುಚ್ಚಿಟ್ಟಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
ಮಂಗಳವಾರ ನಗರದ ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಇತ್ತೀಚೆಗೆ ನಾನು ಪತ್ರಿಕೆಯೊಂದರಲ್ಲಿ ಅನ್ನದಾತರ ಆತ್ಮಹತ್ಯೆ ಹೆಚ್ಚಳ ಎನ್ನುವ ವರದಿಯೊಂದನ್ನು ಓದಿದೆ. ಅದನ್ನು ಓದಿ ನನಗೆ ತೀವ್ರ ಆಘಾತ ಉಂಟಾಯಿತು. ಹನ್ನೆರಡು ದಿನಗಳ ಹಿಂದೆ ಪತ್ರಿಕೆಯ ಮುಖಪುಟದಲ್ಲಿ ಪ್ರಕಟವಾಗಿದ್ದ ಈ ವರದಿಯನ್ನು ಓದಿ ಈ ಸರಕಾರ ಕಣ್ತೆರೆಯುತ್ತದೆ ಎಂದು ಭಾವಿಸಿದ್ದೆ. ಆದರೆ, ಸಾಧನಾ ಸಮಾವೇಶಗಳನ್ನು ಮಾಡುವುದರಲ್ಲಿ ಸಂಭ್ರಮಿಸುತ್ತಿರುವ ಈ ಸರಕಾರಕ್ಕೆ ರೈತರ ಹಿತಾಸಕ್ತಿ ಬೇಕಾಗಿಲ್ಲ ಎಂದು ಹೇಳಿದರು.
ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ವರದಿಯ ಪ್ರಕಾರ ರಾಜ್ಯದಲ್ಲಿ 2023ರಲ್ಲಿ 2,423 ಹಾಗೂ 2024ರಲ್ಲಿ 2,971 ರೈತರು, ಕೃಷಿ ಕಾರ್ಮಿಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎರಡು ವರ್ಷಗಳಲ್ಲಿ ಒಟ್ಟು 5,394 ರೈತರು ಜೀವ ಚೆಲ್ಲಿದ್ದಾರೆ. ಮಹಾರಾಷ್ಟ್ರದ ನಂತರ ಕರ್ನಾಟಕ ರೈತರ ಆತ್ಮಹತ್ಯೆ ಪ್ರಕರಣದಲ್ಲಿ ಎರಡನೆ ಸ್ಥಾನದಲ್ಲಿದೆ. ರಾಜ್ಯ ಸರಕಾರಕ್ಕೆ ಈ ಅಂಕಿ ಅಂಶಗಳು ಗೊತ್ತಿಲ್ಲವೇ? ಅಥವಾ ಗೊತ್ತಿದ್ದರೂ ಮುಚ್ಚಿಟ್ಟಿದಿಯ ಎನ್ನುವ ಅನುಮಾನ ಕಾಡುತ್ತಿದೆ ಎಂದು ಅವರು ದೂರಿದರು.
ಈ ಸರಕಾರ ರೈತರ ಜೀವನದ ಮೇಲೆ ಸಮಾಧಿ ಕಟ್ಟಿ, ಅದರ ಮೇಲೆ ತಮ್ಮ ವೈಭವ ಪ್ರದರ್ಶನ ಮಾಡುತ್ತಿದ್ದಾರೆ. ಇವರನ್ನು ಜನ ಕ್ಷಮಿಸುವುದಿಲ್ಲ. ಒಂದೆಡೆ ರೈತರು ನಿತ್ಯವೂ ಸಾಯುತ್ತಿದ್ದಾರೆ ಇವರು ಗ್ಯಾರಂಟಿ ಹೆಸರಿನಲ್ಲಿ ಹಬ್ಬ ಮಾಡುತ್ತಿದ್ದಾರೆ. ಇವರ ಗ್ಯಾರಂಟಿಗಳು ಉತ್ತಮವಾಗಿ ಇದ್ದಿದ್ದರೆ ರೈತರು ಏಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರು ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.
ಸಮಾವೇಶದ ಹೆಸರಿನಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ ಹಲವಾರು ವಿಚಾರಗಳನ್ನು ಹೆಚ್ಚು ಪ್ರಚಾರ ಮಾಡುತ್ತಿದ್ದಾರೆ. ಕಳೆದ ವರ್ಷ ಕೂಡ ಹಕ್ಕು ಪತ್ರಗಳ ಬಗ್ಗೆಯೇ ಹೆಚ್ಚು ಚರ್ಚೆ ಮಾಡಿದ್ದರು. ನಮ್ಮ ಬಳಿ ಬರುವ ರೈತರು ಹಾಗೂ ಅನೇಕ ಜಿಲ್ಲೆಗಳಲ್ಲಿ ನಾವು ಹೋದಾಗ ಕಂದಾಯ ಇಲಾಖೆಯ ಬಗ್ಗೆಯೇ ಹೆಚ್ಚು ದೂರು, ಸಮಸ್ಯೆಗಳನ್ನು ಹೇಳಿಕೊಳ್ಳುತ್ತಾರೆ. 6ನೆ ಗ್ಯಾರಂಟಿಯಾಗಿ ಭೂ ಗ್ಯಾರಂಟಿ ಕೊಡುತ್ತಿದ್ದೇವೆ ಎಂದು ಇವರು ಪುಕ್ಕಟೆ ಪ್ರಚಾರ ಪಡೆಯುತ್ತಿದ್ದಾರೆ. ಆದರೆ ರಾಜ್ಯದಲ್ಲಿ ನಡೆಯುತ್ತಿರುವ ಸರಣಿ ರೈತ ಆತ್ಮಹತ್ಯೆ ಪ್ರಕರಣಗಳು ಇವರ ಯೋಗ್ಯತೆಯನ್ನು ಸಾರಿ ಸಾರಿ ಹೇಳುತ್ತಿವೆ ಎಂದು ಅಕ್ರೋಶ ವ್ಯಕ್ತಪಡಿಸಿದರು.
ಬಿಡದಿ ಟೌನ್ಶಿಪ್: ‘ಬಿಡದಿ ಟೌನ್ ಶಿಪ್ ವಿಚಾರವಾಗಿ ಚರ್ಚೆಗೆ ಪಂಥಾಹ್ವಾನ ನೀಡಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸವಾಲು ನಾನು ಸ್ವೀಕರ ಮಾಡುತ್ತೇನೆ. ಈ ಸಂಬಂಧ ಅವರು ಎಲ್ಲಿಗೆ ಬೇಕಾದರೂ ಕರೆಯಲಿ, ನಾನು ಚರ್ಚೆಗೆ ಸಿದ್ಧವಾಗಿದ್ದೇನೆ’ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.






