ಅಧಿಕಾರಿಗಳ ಮೇಲೆ ದೂರು ಕೇಳಿ ಬಂದಾಗ ಶಾಸಕರ ಶಿಫಾರಸಿನ ಮೇರೆಗೆ ವರ್ಗಾವಣೆ ಮಾಡುವುದು ತಪ್ಪಲ್ಲ : ಹೈಕೋರ್ಟ್

ಬೆಂಗಳೂರು : ಜನ ಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸದ ಆರೋಪ ಹೊತ್ತ ಸರಕಾರಿ ಅಧಿಕಾರಿಗಳನ್ನು ಸ್ಥಳೀಯ ಶಾಸಕರ ಸಲಹೆ, ಶಿಫಾರಸಿನ ಮೇರೆಗೆ ವರ್ಗಾವಣೆ ಮಾಡಿದರೆ ತಪ್ಪಾಗುವುದಿಲ್ಲ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಕೋಲಾರ ಜಿಲ್ಲೆಯ ಬಂಗಾರಪೇಟೆ ಗ್ರೇಡ್ 1 ತಹಶೀಲ್ದಾರ್ ವೆಂಕಟೇಶಪ್ಪ ಅವರ ವರ್ಗಾವಣೆಯನ್ನು ಎತ್ತಿ ಹಿಡಿದಿದೆ.
ಅವಧಿಪೂರ್ವ ವರ್ಗಾವಣೆ ಮಾಡಿದ್ದ ಕ್ರಮ ಎತ್ತಿ ಹಿಡಿದಿದ್ದ ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ (ಕೆಎಟಿ) ಆದೇಶ ಪ್ರಶ್ನಿಸಿ ವೆಂಕಟೇಶಪ್ಪ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿರುವ ನ್ಯಾಯಮೂರ್ತಿ ಎಸ್. ಜಿ. ಪಂಡಿತ್ ಹಾಗೂ ಕೆ ವಿ ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಆದೇಶ ಮಾಡಿದೆ.
ಹೈಕೋರ್ಟ್ ಆದೇಶವೇನು?
ಅವಧಿಪೂರ್ವ ವರ್ಗಾವಣೆ ಮಾಡಿದ್ದರೂ ತಹಶೀಲ್ದಾರರಾಗಿರುವ ಅರ್ಜಿದಾರರ ವಿರುದ್ಧ ಕಚೇರಿಗೆ ಸಮಯಕ್ಕೆ ಸರಿಯಾಗಿ ಬಾರದಿರುವುದು, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದಿರುವ ಕಾರಣದಿಂದ ಸ್ಥಳೀಯರು ಶಾಸಕರಿಗೆ ದೂರು ನೀಡಿದ್ದರು. ಈ ದೂರು ಆಧರಿಸಿ ಅರ್ಜಿದಾರರನ್ನು ವರ್ಗಾವಣೆ ಮಾಡುವಂತೆ ಸ್ಥಳೀಯ ಶಾಸಕರು ಕಂದಾಯ ಸಚಿವರಿಗೆ ಮನವಿ ಮಾಡಿದ್ದರು. ಈ ವರ್ಗಾವಣೆಯನ್ನು ಕೆಎಟಿ ಎತ್ತಿಹಿಡಿದಿದೆ. ಈ ಆದೇಶದಲ್ಲಿ ಯಾವುದೇ ಕಾನೂನು ಉಲ್ಲಂಘನೆ ಹಾಗೂ ಲೋಪ ಕಂಡುಬರುತ್ತಿಲ್ಲ ಎಂದು ಹೈಕೋರ್ಟ್ ಆದೇಶದಲ್ಲಿ ಹೇಳಿದೆ.
ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದಂತೆ 2024ರ ಜೂನ್ 25ರಂದು ಹೊರಡಿಸಲಾಗಿರುವ ವರ್ಗಾವಣೆ ಮಾರ್ಗಸೂಚಿಯ ಪ್ರಕಾರ ವಿಶೇಷ ಅಥವಾ ಅಸಾಮಾನ್ಯ ಕಾರಣಗಳಿಂದ ಮುಖ್ಯಮಂತ್ರಿಗಳಿಂದ ಅನುಮೋದನೆ ಪಡೆದು ವರ್ಗಾವಣೆ ಮಾಡುವುದಕ್ಕೆ ಅವಕಾಶವಿದೆ. ಈ ಪ್ರಕರಣದಲ್ಲಿ ಮುಖ್ಯಮಂತ್ರಿಗಳಿಂದ ಅನುಮತಿ ಪಡೆದ ಬಳಿಕವೇ ವರ್ಗಾವಣೆ ಮಾಡಲಾಗಿದೆ ಎಂದು ದಾಖಲೆಗಳು ಹೇಳುತ್ತವೆ. ಹಾಲಿ ವರ್ಗಾವಣೆ ಪ್ರಕರಣದಲ್ಲಿ ದುರುದ್ದೇಶಪೂರಿತ ಎಂಬ ಆರೋಪಕ್ಕೆ ಯಾವುದೇ ಆಧಾರಗಳಿಲ್ಲ. ಅರ್ಜಿದಾರರು ವರ್ಗಾವಣೆಗೆ ಹೊಣೆಗಾರರಾಗಿದ್ದು, ಅವರನ್ನು ಕೋಲಾರ ಜಿಲ್ಲೆಯಲ್ಲಿ ಮತ್ತೊಂದು ಸ್ಥಳಕ್ಕೆ ನಿಯೋಜನೆ ಮಾಡಲಾಗಿದೆ. ಆದ್ದರಿಂದ, ಅವರಿಗೆ ಯಾವುದೇ ತೊಂದರೆಯಾಗಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ಪ್ರಕರಣವೇನು?
2024ರ ಜುಲೈ 31ರಿಂದ ಕೋಲಾರ ಜಿಲ್ಲೆಯ ಬಂಗಾರಪೇಟೆಯ ತಹಶೀಲ್ದಾರ್ ಕಚೇರಿಯಲ್ಲಿ ಅರ್ಜಿದಾರರು ಗ್ರೇಡ್ -1 ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅರ್ಜಿದಾರರ ವಿರುದ್ಧ ಸರಿಯಾದ ಸಮಯಕ್ಕೆ ಕಚೇರಿಗೆ ಹಾಜರಾಗದಿರುವುದು, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದಿರುವ ಆರೋಪವಿತ್ತು. ಈ ಹಿನ್ನೆಲೆಯಲ್ಲಿ ಬಂಗಾರಪೇಟೆ ಕ್ಷೇತ್ರದ ಶಾಸಕರು, ಕಂದಾಯ ಸಚಿವರಿಗೆ ಪತ್ರ ಬರೆದಿದ್ದರು. ಆ ಮೂಲಕ ಅರ್ಜಿದಾರರನ್ನು ವರ್ಗಾವಣೆ ಮಾಡಿ ಅವರ ಸ್ಥಾನಕ್ಕೆ ಮತ್ತೊಬ್ಬ ಅಧಿಕಾರಿಯನ್ನು ನಿಯೋಜನೆ ಮಾಡುವಂತೆ ಕೋರಿದ್ದರು. ಅದರಂತೆ, ಅರ್ಜಿದಾರರನ್ನು 2024ರ ಡಿಸೆಂಬರ್ 13ರಂದು ವರ್ಗಾವಣೆ ಮಾಡಿ ಆದೇಶಿಸಲಾಗಿತ್ತು. ಇದನ್ನು ಪ್ರಶ್ನಿಸಿ ವೆಂಕಟೇಶಪ್ಪ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ್ದ ಕೆಎಟಿ, ವರ್ಗಾವಣೆ ಆದೇಶವನ್ನು ಎತ್ತಿಹಿಡಿದಿತ್ತು.
ಅರ್ಜಿದಾರರ ವಾದವೇನು?
2024ರ ಜುಲೈ 31ರಿಂದ ಕೋಲಾರ ಜಿಲ್ಲೆಯ ಬಂಗಾರಪೇಟೆಯ ತಹಶೀಲ್ದಾರ್ ಕಚೇರಿಯಲ್ಲಿ ಗ್ರೇಡ್ -1 ತಹಶೀಲ್ದಾರ್ ಆಗಿ ಸೇವೆ ಸಲ್ಲಿಸುತ್ತಿದ್ದ ವೆಂಕಟೇಶಪ್ಪ ಅವರನ್ನು 2024ರ ಡಿಸೆಂಬರ್ 31ರಂದು ಕೋಲಾರ ಜಿಲ್ಲಾಧಿಕಾರಿ ಕಚೇರಿಗೆ ನಿಗದಿತ ಅವಧಿಗೂ ಮುನ್ನ ವರ್ಗಾವಣೆ ಮಾಡಲಾಗಿದೆ. ಎ ಶ್ರೇಣಿಯ ಸರ್ಕಾರಿ ಅಧಿಕಾರಿಯನ್ನು ಕನಿಷ್ಠ 2 ವರ್ಷಗಳ ಕಾಲ ವರ್ಗಾವಣೆ ಮಾಡುವಂತಿಲ್ಲ. ಆದರೆ, ಇಲ್ಲಿ ಅಧಿಕಾರ ಸ್ವೀಕರಿಸಿದ ಆರು ತಿಂಗಳಿಗೂ ಮೊದಲೇ ವರ್ಗಾವಣೆ ಮಾಡಲಾಗಿದೆ. ಶಾಸಕರ ಮನವಿಯ ಮೇರೆಗೆ ವರ್ಗಾವಣೆ ನಡೆದಿದ್ದು, ಇದರಲ್ಲಿ ಸಾರ್ವಜನಿಕ ಹಿತಾಸಕ್ತಿ ಇಲ್ಲ. ಆದ್ದರಿಂದ, ಅರ್ಜಿದಾರರ ಅವಧಿಪೂರ್ವ ವರ್ಗಾವಣೆ ಆದೇಶ ರದ್ದಪಡಿಸಬೇಕು ಎಂದು ವೆಂಕಟೇಶಪ್ಪ ಪರ ವಕೀಲ ಜಯಂತ್ ದೇವ್ ಕುಮಾರ್ ಮನವಿ ಮಾಡಿದ್ದರು.
ಇದಕ್ಕೆ ಆಕ್ಷೇಪಿಸಿದ್ದ ಹೆಚ್ಚುವರಿ ಅಡ್ವೊಕೇಟ್ ಜನರಲ್ ರೊಬೆನ್ ಜಾಕಬ್ ಅವರು, ತಹಶೀಲ್ದಾರ್ ಆಗಿದ್ದ ಅರ್ಜಿದಾರರು ಸಾರ್ವಜನಿಕರ ಸಮಸ್ಯೆಗಳನ್ನು ಸರಿಯಾಗಿ ಆಲಿಸುತ್ತಿರಲಿಲ್ಲ. ಈ ಕಾರಣದಿಂದ ಅವರನ್ನು ವರ್ಗಾವಣೆ ಮಾಡಲಾಗಿದೆ. ಈ ವರ್ಗಾವಣೆ ಆದೇಶವನ್ನು ಮುಖ್ಯಮಂತ್ರಿ ಅನುಮೋದಿಸಿದ್ದು, ವರ್ಗಾವಣೆ ಆದೇಶದಲ್ಲಿ ಯಾವುದೇ ದೋಷ ಇಲ್ಲ. ಆದ್ದರಿಂದ, ಅರ್ಜಿ ವಜಾಗೊಳಿಸಬೇಕು ಎಂದು ಕೋರಿದ್ದರು.







