ಉಡುಪಿಯಿಂದ ಬ್ರಹ್ಮಾವರಕ್ಕೆ ಕೋರ್ಟ್ ಸ್ಥಳಾಂತರ ಪ್ರಶ್ನಿಸಿ ಪಿಐಎಲ್; ಸರಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಉಡುಪಿಯಲ್ಲಿರುವ 1ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಹಾಗೂ ಜೆಎಂಎಫ್ಸಿ ನ್ಯಾಯಾಲಯವನ್ನು ಬ್ರಹ್ಮಾವರಕ್ಕೆ ಸ್ಥಳಾಂತರ ಮಾಡುವ ಕ್ರಮ ಆಕ್ಷೇಪಿಸಿ ಸಲ್ಲಿಸಲಾಗಿರುವ ಅರ್ಜಿ ಸಂಬಂಧ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನಾಲ್ಡ್ ಪ್ರವೀಣ್ ಕುಮಾರ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ವಿಭಾಗೀಯ ನ್ಯಾಯಪೀಠದ ಗುರುವಾರ ವಿಚಾರಣೆ ನಡೆಸಿತು.
ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ, ಪ್ರತಿವಾದಿಗಳಾದ, ರಾಜ್ಯ ಕಾನೂನು ಇಲಾಖೆ, ಹಣಕಾಸು ಇಲಾಖೆ ಹಾಗೂ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಕಚೇರಿಗೆ ನೋಟಿಸ್ ಜಾರಿಗೊಳಿಸಿ, ವಿಚಾರಣೆಯನ್ನು 2026ರ ಜನವರಿ 9ಕ್ಕೆ ಮುಂದೂಡಿತು.
ಅರ್ಜಿದಾರರ ಆಕ್ಷೇಪವೇನು?
ಬ್ರಹ್ಮಾವರಕ್ಕೆ ಶಾಶ್ವತ ನ್ಯಾಯಾಲಯ ಸ್ಥಾಪನೆ ಮಾಡುವ ಕುರಿತ ಪ್ರಸ್ತಾವನೆಗೆ 2022ರಲ್ಲಿ ಕಾನೂನು ಇಲಾಖೆ ಅನುಮೋದಿಸಿದೆ. ಅದನ್ನು ಕಾರ್ಯಗತಗೊಳಿಸುವ ಬದಲು ಉಡುಪಿಯಲ್ಲಿರುವ ಹೆಚ್ಚುವರಿ ಜೆಎಂಎಫ್ಸಿ ನ್ಯಾಯಾಲಯವನ್ನು ಬ್ರಹ್ಮಾವರಕ್ಕೆ ಸ್ಥಳಾಂತರಿಸಲಾಗುತ್ತದೆ. ಇದು ಸರಕಾರದ ತೀರ್ಮಾನಕ್ಕೆ ವಿರುದ್ಧವಾಗಿದ್ದು, ಉಡುಪಿಯ ಜನರಿಗೂ ಅನನುಕೂಲವಾಗಲಿದೆ ಎಂದು ಅರ್ಜಿಯಲ್ಲಿ ಆಕ್ಷೇಪಿಸಲಾಗಿದೆ.







