ಎಸ್ಐಆರ್ ಮುಗಿದ ಬಳಿಕ ಜಿಬಿಎ ಚುನಾವಣೆಗೆ ಹೊಸ ಮತದಾರರ ಪಟ್ಟಿ ಪ್ರಕಟ; ಹೈಕೋರ್ಟ್ಗೆ ರಾಜ್ಯ ಚುನಾವಣಾ ಆಯೋಗದ ಮಾಹಿತಿ

ಬೆಂಗಳೂರು : ಭಾರತ ಚುನಾವಣಾ ಆಯೋಗ ಸದ್ಯ ರಾಜ್ಯದಲ್ಲಿ ನಡೆಸುತ್ತಿರುವ 'ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ' (ಎಸ್ಐಆರ್) ಪ್ರಕ್ರಿಯೆ ಮುಗಿದ ಬಳಿಕ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಚುನಾವಣೆಗೆ ಹೊಸದಾಗಿ ಮತದಾರರ ಪಟ್ಟಿ ಪ್ರಕಟಿಸಲಾಗುವುದು ಎಂದು ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್ ಗೆ ತಿಳಿಸಿದೆ.
ಮುಂಬರಲಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ)ದ ಚುನಾವಣೆಗಾಗಿ ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿರುವ ಮತದಾರರ ಪಟ್ಟಿಯಲ್ಲಿ ಸಾಕಷ್ಟು ಲೋಪಗಳಿವೆ ಎಂದು ಆರೋಪಿಸಿ ಬೆಂಗಳೂರು ನವನಿರ್ಮಾಣ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಕೆ.ಎಸ್. ಹೇಮಲೇಖಾ ಅವರಿದ್ದ ವಿಭಾಗೀಯ ನ್ಯಾಯಪೀಠ ಶನಿವಾರ ವಿಚಾರಣೆ ನಡೆಸಿತು.
ರಾಜ್ಯ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್. ಫಣೀಂದ್ರ ವಾದ ಮಂಡಿಸಿ, ಜಿಬಿಎ ಚುನಾವಣೆಗಾಗಿ ಮತದಾರರ ಪಟ್ಟಿ ಪ್ರಕಟಿಸಲಾಗಿತ್ತು. ಕೆಲ ದೂರುಗಳು ಬಂದ ಹಿನ್ನಲೆಯಲ್ಲಿ 33 ವಾರ್ಡ್ಗಳಲ್ಲಿ ಎಸ್ಐಆರ್ ನಡೆಸಲು ನಿರ್ಧರಿಸಲಾಗಿತ್ತು. ಆದರೆ, ಜಿಬಿಎ ಸೇರಿ ರಾಜ್ಯವ್ಯಾಪಿ ಎಸ್ಐಆರ್ ನಡೆಯುತ್ತಿರುವ ಹಿನ್ನೆಲೆಯಲ್ಲಿನ ರಾಜ್ಯ ಚುನಾವಣಾ ಆಯೋಗದ ಎಸ್ಐಆರ್ ತಡೆ ಹಿಡಿಯಲಾಯಿತು ಎಂದು ನ್ಯಾಯಪೀಠಕ್ಕೆ ವಿವರಿಸಿದರು.
ಮುಂದುವರಿದು, ಹಾಲಿ ಅರ್ಜಿಯಲ್ಲಿ ಎತ್ತಿರುವ ಆಕ್ಷೇಪಣೆ ಹಾಗೂ ದೂರುಗಳನ್ನು ಈಗಾಗಲೇ ಪರಿಗಣಿಸಲಾಗಿದೆ. ಮೇಲಾಗಿ, ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ಮುಗಿದ ಬಳಿಕ ಜಿಬಿಎ ಚುನಾವಣೆಗೆ ಹೊಸದಾಗಿ ಮತದಾರರ ಪಟ್ಟಿ ಪ್ರಕಟಿಸಲಾಗುವುದು ಎಂದು ತಿಳಿಸಿದರು.
ಇದನ್ನು ದಾಖಲಿಸಿಕೊಂಡ ನ್ಯಾಯಪೀಠ, ಅರ್ಜಿದಾರರು ಹಲವು ಆಕ್ಷೇಪ ಹಾಗೂ ಅನುಮಾನಗಳನ್ನು ವ್ಯಕ್ತಪಡಿಸಿದ್ದಾರೆ. ಇವುಗಳನ್ನು ಈಗಾಗಲೇ ಪರಿಗಣಿಸಲಾಗಿದೆ ಎಂದು ರಾಜ್ಯ ಚುನಾವಣಾ ಆಯೋಗದ ಪರ ವಕೀಲರು ಹೇಳಿದ್ದಾರೆ. ಎಸ್ಐಆರ್ ಪ್ರಕ್ರಿಯೆ ಮುಗಿದ ಬಳಿಕ ಹೊಸ ಮತದಾರರ ಪಟ್ಟಿ ಪ್ರಕಟಿಸುವುದಾಗಿಯೂ ಆಯೋಗ ತಿಳಿಸಿದೆ. ಆದ್ದರಿಂದ, ಆ ಸಂದರ್ಭದಲ್ಲಿ ಅರ್ಜಿದಾರರ ಆಕ್ಷೇಪಗಳಲ್ಲಿ ಅವಶ್ಯಕವೆನಿಸುವುದನ್ನು ಆಯೋಗ ಪರಿಗಣಿಸಬಹುದು ಎಂದು ತಿಳಿಸಿ, ಅರ್ಜಿ ಇತ್ಯರ್ಥಪಡಿಸಿತು.






