‘ಕೆಪಿಎಸ್ಸಿ ನೇಮಕಾತಿ ಹಗರಣ’ | ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಅಮಾನತು

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ಸಿ)ದಲ್ಲಿ ನಡೆದಿರುವ ನೇಮಕಾತಿ ಹಗರಣದಲ್ಲಿ ಆರೋಪಿಯಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಮಾನತುಗೊಳಿಸಿ ಸರಕಾರ ಆದೇಶ ಹೊರಡಿಸಿದೆ.
ಕೆಪಿಎಸ್ಸಿ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಐಡಿ ನಡೆಸಲಿರುವ ಹೆಚ್ಚಿನ ತನಿಖೆ ಬಾಕಿ ಇರುವ ಹಿನ್ನೆಲೆಯಲ್ಲಿ ಈ ಅಮಾನತು ಆದೇಶ ಹೊರಡಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಟಿ.ಮಹಾಂತೇಶ್ ಆದೇಶದಲ್ಲಿ ತಿಳಿಸಿದ್ದಾರೆ.
ಅಮಾನತು ಅವಧಿಯಲ್ಲಿ, ಅಖಿಲ ಭಾರತ ಸೇವೆಗಳ (ಶಿಸ್ತು ಮತ್ತು ಮೇಲ್ಮನವಿ) ನಿಯಮಗಳ ಅನ್ವಯ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಅವರಿಗೆ ಜೀವನಾಧಾರ ಭತ್ತೆ ಪಾವತಿಸಲಾಗುವುದು. ಅಮಾನತು ಅವಧಿಯಲ್ಲಿ, ರಾಜ್ಯ ಸರಕಾರದ ಲಿಖಿತ ಅನುಮತಿ ಇಲ್ಲದೆ ಯಾವುದೇ ಸಂದರ್ಭದಲ್ಲೂ ಅಧಿಕಾರಿಯು ಕೇಂದ್ರ ಸ್ಥಾನ ವನ್ನು ತೊರೆಯುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
Next Story




