ನಾಳೆ ಎಲ್ಲ ಹೇಳ್ತೀನಿ : ದೆಹಲಿ ಭೇಟಿ ಕುರಿತು ಸಿದ್ದರಾಮಯ್ಯ ಪ್ರತಿಕ್ರಿಯೆ

ಬೆಂಗಳೂರು : ರಾಜ್ಯ ಕಾಂಗ್ರೆಸ್ನಲ್ಲಿ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿರುವ ನಡುವೆಯೇ, ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲು ಒಪ್ಪಿದ್ದಾರೆ ಎನ್ನುವ ವರದಿ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ಹೈಕಮಾಂಡ್ ನಾಯಕರ ಜೊತೆ ದೆಹಲಿಯಲ್ಲಿ ನಡೆದ ಮಹತ್ವದ ಸಭೆಯ ಬಳಿಕ ಮಧ್ಯರಾತ್ರಿಯೇ ಬೆಂಗಳೂರಿಗೆ ವಾಪಸ್ ಆದ ಸಿದ್ದರಾಮಯ್ಯ, ಇಂದು ಬೆಳಗ್ಗೆ ಆಪ್ತ ಸಚಿವರ ಜೊತೆ ಚರ್ಚೆ ನಡೆಸಿ ವಿಧಾನಸೌಧಕ್ಕೆ ಆಗಮಿಸಿದರು. ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರ ಪುಣ್ಯತಿಥಿ ಹಿನ್ನೆಲೆಯಲ್ಲಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ಈ ವೇಳೆ ಮಾತನಾಡಿದ ಸಿಎಂ, ದೇಶಕ್ಕೆ ಸ್ವಾತಂತ್ರ್ಯ ಬಂದ ಬಳಿಕ ಮೊದಲ ಪ್ರಧಾನಿಯಾಗಿ ನೆಹರೂ ಉತ್ತಮ ಆಡಳಿತ ನೀಡಿದ್ದಾರೆ. ಆಧುನಿಕ ಭಾರತದ ನಿರ್ಮಾಣದಲ್ಲಿ ಅವರ ಪಾತ್ರ ದೊಡ್ಡದು ಎಂದು ಹೇಳಿದರು.
ಆದರೆ, ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಜೊತೆ ನಡೆದ ಸಭೆ ಹಾಗೂ ರಾಜೀನಾಮೆ ಕುರಿತ ಪ್ರಶ್ನೆ ಕೇಳುತ್ತಿದ್ದಂತೆ ಸಿದ್ದರಾಮಯ್ಯ ಉತ್ತರಿಸಲು ನಿರಾಕರಿಸಿದರು.
ರಾಜಕೀಯ ಬೆಳವಣಿಗೆ ಬಗ್ಗೆ ನಾಳೆ ಮಾತನಾಡುತ್ತೇನೆ. ದೆಹಲಿ ಭೇಟಿ ಹಾಗೂ ಹೈಕಮಾಂಡ್ ಚರ್ಚೆ ಸೇರಿದಂತೆ ಎಲ್ಲ ವಿಚಾರಕ್ಕೂ ನಾಳೆಯೇ ಪ್ರತಿಕ್ರಿಯೆ ನೀಡುತ್ತೇನೆ ಎಂದು ಹೇಳುವ ಮೂಲಕ ಕುತೂಹಲ ಇನ್ನಷ್ಟು ಹೆಚ್ಚಿಸಿದರು.






