ಪರಿಶಿಷ್ಟರ ಒಳಮೀಸಲಾತಿ | 1,766 ಪುಟಗಳ ಅಂತಿಮ ವರದಿ ಸರಕಾರಕ್ಕೆ ಸಲ್ಲಿಸಿದ ನ್ಯಾ.ನಾಗಮೋಹನ್ ದಾಸ್ ಆಯೋಗ
ಆ.7ಕ್ಕೆ ಸಚಿವ ಸಂಪುಟದಲ್ಲಿ ಮಂಡನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಪರಿಶಿಷ್ಟ ಜಾತಿಗಳಲ್ಲಿನ ವಿವಿಧ ಸಮುದಾಯಗಳಿಗೆ ಒಳ ಮೀಸಲಾತಿ ಕಲ್ಪಿಸುವ ಸಂಬಂಧ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ಅವರ ನೇತೃತ್ವದ ಏಕಸದಸ್ಯ ಆಯೋಗವು ಶಿಫಾರಸುಗಳನ್ನು ಒಳಗೊಂಡ ತನ್ನ 1,766 ಪುಟಗಳ ಅಂತಿಮ ವರದಿಯನ್ನು ರಾಜ್ಯ ಸರಕಾರಕ್ಕೆ ಸಲ್ಲಿಕೆ ಮಾಡಿದೆ. ಜತೆಗೆ, ಈ ವರದಿಯನ್ನು ಆ.7ರಂದು ಸಚಿವ ಸಂಪುಟದಲ್ಲಿ ಮಂಡನೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.
ಸೋಮವಾರ ವಿಧಾನಸೌಧದಲ್ಲಿರುವ ಮುಖ್ಯಮಂತ್ರಿಯ ಕಚೇರಿಯಲ್ಲಿ ನ್ಯಾ.ಎಚ್.ಎನ್.ನಾಗಮೋಹನ್ದಾಸ್ ಅವರು ಸಮೀಕ್ಷೆಯ ದತ್ತಾಂಶ ಮತ್ತು ಅನುಬಂಧ ಸೇರಿ 1,766 ಪುಟಗಳು ಮತ್ತು ಆರು ಪ್ರಮುಖ ಶಿಫಾರಸುಗಳನ್ನು ಒಳಗೊಂಡ ಮಹತ್ವದ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಡಾ.ಜಿ.ಪರಮೇಶ್ವರ್, ಡಾ.ಎಚ್.ಸಿ.ಮಹದೇವಪ್ಪ, ಕೆ.ಎಚ್.ಮುನಿಯಪ್ಪ, ಶಿವರಾಜ ತಂಗಡಗಿ, ಆರ್.ಬಿ.ತಿಮ್ಮಾಪುರ್, ಪ್ರಿಯಾಂಕ್ ಖರ್ಗೆ, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸೇರಿದಂತೆ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.
ಆ ನಂತರ, ವರದಿ ಸಲ್ಲಿಕೆ ಕುರಿತು ಪ್ರಕಟನೆ ಬಿಡುಗಡೆಗೊಳಿಸಿದ ಆಯೋಗವು, ‘ಮೇ 5ರಿಂದ ಜುಲೈ 6ರ ವರೆಗೆ ರಾಜ್ಯವ್ಯಾಪಿ ನಡೆದ ಸಮೀಕ್ಷೆಯಲ್ಲಿ ಸಂಗ್ರಹಿಸಿದ ಮತ್ತು ಸರಕಾರದ ವಿವಿಧ ಇಲಾಖೆ, ನಿಗಮ ಮಂಡಳಿಗಳಿಂದ ಸಂಗ್ರಹಿಸಿದ ದತ್ತಾಂಶವನ್ನು ವಿಶ್ಲೇಷಿಸಿ, ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನದಂತೆ ಪರಿಶಿಷ್ಟ ಜಾತಿಗಳಲ್ಲಿ ಒಳ ಜಾತಿಗಳನ್ನು ವರ್ಗೀಕರಿಸಿ ಲಭ್ಯವಿರುವ ಮೀಸಲಾತಿಯನ್ನು ಆಯೋಗ ಹಂಚಿಕೆ ಮಾಡಿದೆ.
ಒಳ ಮೀಸಲಾತಿ ವರ್ಗೀಕರಣಕ್ಕೆ ಜಾತಿಗಳ ಶೈಕ್ಷಣಿಕ ಹಿಂದುಳಿದಿರುವಿಕೆ, ಸರಕಾರಿ ಉದ್ಯೋಗದಲ್ಲಿ ಅಗತ್ಯ ಪ್ರಾತಿನಿಧ್ಯದ ಕೊರತೆ, ಸಾಮಾಜಿಕ ಹಿಂದುಳಿದಿರುವಿಕೆಯ ಮಾನದಂಡಗಳನ್ನು ಪರಿಗಣಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಆ ಮಾನದಂಡಗಳ ಆಧಾರದಲ್ಲಿಯೇ ಮೀಸಲಾತಿಯನ್ನು ಹಂಚಿಕೆ ಮಾಡಲಾಗಿದೆ ಎಂದು ಆಯೋಗ ವಿವರಿಸಿದೆ.
ಒಳ ಮೀಸಲಾತಿಗಾಗಿ ಆಗ್ರಹಿಸಿ ನ್ಯಾಯಾಲಯಗಳ ಒಳಗೆ ಮತ್ತು ಹೊರಗೆ ದಲಿತ ಸಂಘಟನೆಗಳು ಕಳೆದ 30 ವರ್ಷಗಳಿಂದ ಹೋರಾಟ ನಡೆಸುತ್ತಲೇ ಬಂದಿವೆ. 2024ರ ಆಗಸ್ಟ್ 1ರಂದು ದವಿಂದರ್ ಸಿಂಗ್ ಪ್ರಕರಣದಲ್ಲಿ ತೀರ್ಪು ನೀಡಿದ ಸುಪ್ರೀಂ ಕೋರ್ಟ್, ಉಪವರ್ಗೀಕರಣ ಮಾಡಲು ಸಂವಿಧಾನದ ಅನುಚ್ಛೇದ 14ರಲ್ಲಿ ಅವಕಾಶವಿದೆ. ಉಪವರ್ಗೀಕರಣ ಸಾಮಾಜಿಕ ನ್ಯಾಯದ ವಿಸ್ತರಣೆಯಾಗಿದೆ. ರಾಜ್ಯ ಸರಕಾರಕ್ಕೆ ಒಳಮೀಸಲಾತಿ ನೀಡುವ ಅಧಿಕಾರವಿದೆ. ಉಪವರ್ಗೀಕರಣ ಮಾಡಿದರೆ ಮೀಸಲಾತಿ ಅನುಭವಿಸುತ್ತಿರುವ ಯಾರನ್ನೂ ಹೊರಗಿಡುವುದಿಲ್ಲ. ಅಗತ್ಯ ದತ್ತಾಂಶ ಸಂಗ್ರಹಿಸಿ ಒಳಜಾತಿಗಳ ವರ್ಗೀಕರಣ ಮಾಡಬೇಕು ಎಂದು ಹೇಳಿದೆ.
ಈ ಕಾರಣಕ್ಕೆ ರಾಜ್ಯ ಸರಕಾರ ರಾಜ್ಯದಲ್ಲಿರುವ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಯ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ನ್ಯಾ.ಎಚ್.ಎನ್.ನಾಗಮೋಹನ್ ದಾಸ್ ನೇತೃತ್ವದಲ್ಲಿ ಏಕ ಸದಸ್ಯ ಆಯೋಗವನ್ನು ರಚಿಸಿತ್ತು. ರಾಜ್ಯದಲ್ಲಿ ನಿಖರವಾದ ದತ್ತಾಂಶ ಇಲ್ಲದ ಕಾರಣ ಹೊಸತಾಗಿ ಸಮೀಕ್ಷೆ ನಡೆಸಬೇಕೆಂದು 2025ರ ಮಾರ್ಚ್ 27ರಂದು ಆಯೋಗವು ಮಧ್ಯಂತರ ವರದಿ ಸಲ್ಲಿಸಿತ್ತು.
ಅದೇ ದಿನ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಧ್ಯಂತರ ವರದಿಯನ್ನು ಒಪ್ಪಿ, ಪರಿಶಿಷ್ಟ ಜಾತಿಗಳ ಸಮೀಕ್ಷೆ ನಡೆಸಲು ಸರಕಾರ ನಿರ್ಣಯ ಕೈಗೊಂಡಿತ್ತು. ಅದೇ ರೀತಿ, ಆಯೋಗದ ಅಧ್ಯಕ್ಷ ನಾಗಮೋಹನ್ದಾಸ್ ಅವರು ಯಾವುದೇ ಸಂಭಾವನೆ ಅಥವಾ ಗೌರವಧನ ಪಡೆಯಲಿಲ್ಲ ಎಂದು ಆಯೋಗದ ಪ್ರಕಟನೆ ತಿಳಿಸಿದೆ.
ಒಪ್ಪುವುದು, ಬಿಡುವುದು ಸರಕಾರಕ್ಕೆ ಬಿಟ್ಟಿದ್ದು: ‘ಪರಿಶಿಷ್ಟರ ಒಳಮೀಸಲಾತಿಗೆ ಮತ್ತಷ್ಟು ದತ್ತಾಂಶ ಬೇಕಿತ್ತು. ಹೀಗಾಗಿ, ರಾಜ್ಯ ಸರಕಾರ ಹೊಸ ಸಮೀಕ್ಷೆಗೆ ಅವಕಾಶ ನೀಡಿತ್ತು. 60 ದಿನಗಳಲ್ಲಿ ಸಮೀಕ್ಷೆ ಮಾಡಿದ್ದೇವೆ. ಒಟ್ಟು 27 ಲಕ್ಷ ಕುಟುಂಬಗಳು ಸಮೀಕ್ಷೆಯಲ್ಲಿ ಭಾಗವಹಿಸಿವೆ. ಇದನ್ನು ಪರೀಶಿಲನೆ ಮಾಡಿ ವರದಿಯ ದತ್ತಾಂಶವನ್ನು ನೀಡಿದ್ದೇವೆ. ಈಗ ಈ ವರದಿ ಸರಕಾರದ ಆಸ್ತಿ. ಅದರಲ್ಲಿ ಏನಿದೆ? ಒಪ್ಪುವುದು, ಬಿಡುವುದು ಸರಕಾರಕ್ಕೆ ಬಿಟ್ಟ ವಿಷಯ’ ಎಂದು ನ್ಯಾ.ಎಚ್.ಎನ್.ನಾಗಮೋಹನ್ ದಾಸ್ ತಿಳಿಸಿದ್ದಾರೆ.
ಆ.7ರಂದು ಸಂಪುಟದಲ್ಲಿ ಮಂಡನೆ: ‘ನ್ಯಾ.ಎಚ್.ಎನ್.ನಾಗಮೋಹನ್ ದಾಸ್ ನೇತೃತ್ವದ ಆಯೋಗವು ಒಳ ಮೀಸಲಾತಿ ಕುರಿತ ವರದಿ ನೀಡಿದೆ. ಅದರಲ್ಲಿ ಏನಿದೆ ಎಂದು ನೋಡಿಲ್ಲ. ಪರಿಶೀಲನೆ ನಡೆಸಿ ಆ.7ರಂದು ನಡೆಯಲಿರುವ ಸಚಿವ ಸಂಪುಟದಲ್ಲಿ ವರದಿಯನ್ನು ಮಂಡಿಸಿ ಚರ್ಚೆ ಮಾಡುತ್ತೇವೆ’
-ಸಿದ್ದರಾಮಯ್ಯ, ಮುಖ್ಯಮಂತ್ರಿ
‘ಆಧುನಿಕವಾಗಿ ತಾಂತ್ರಿಕತೆಯನ್ನು ಬಳಸಿಕೊಂಡು ವ್ಯವಸ್ಥಿತವಾದ ವರದಿಯನ್ನು ಸರಕಾರಕ್ಕೆ ಸಲ್ಲಿಸಿದ್ದಾರೆ. ವರದಿಯಲ್ಲಿ ಯಾವ ಅಂಶಗಳಿವೆ ಎಂಬುದು ಗೊತ್ತಿಲ್ಲ. ವರದಿಯನ್ನು ಮುಂದಿನ ಸಚಿವ ಸಂಪುಟದ ಮುಂದೆ ಇಡಬೇಕು ಎಂದು ಮುಖ್ಯಮಂತ್ರಿ ಈಗಾಗಲೇ ಸೂಚನೆಯನ್ನು ಕೂಡ ಕೊಟ್ಟಿದ್ದಾರೆ. ತದನಂತರ ವರದಿ ಅನುಷ್ಠಾನ ಮಾಡುವ ಸಂಬಂಧ ಚರ್ಚೆ ಮಾಡಲಾಗುವುದು’
-ಡಾ.ಜಿ.ಪರಮೇಶ್ವರ್, ಗೃಹ ಸಚಿವ
‘ಪರಿಶಿಷ್ಟರ ಒಳಮಿಸಲಾತಿ ಕಲ್ಪಿಸುವ ಸಂಬಂಧದ ನ್ಯಾ.ನಾಗಮೋಹನ್ ದಾಸ್ ಅವರ ಆಯೋಗವು ನೀಡಿರುವ ವರದಿ ಜಾರಿಯಾಗುತ್ತದೆ ಎಂಬ ವಿಶ್ವಾಸ ನನಗಿದೆ’
-ಕೆ.ಎಚ್.ಮುನಿಯಪ್ಪ, ಸಚಿವ
‘ನ್ಯಾ.ನಾಗಮೋಹನ್ ದಾಸ್ ಅವರ ತಂಡ ಅಲ್ಪಾವಧಿಯಲ್ಲಿ ವರದಿ ಕೊಟ್ಟಿದ್ದಾರೆ. ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ’
-ಆರ್.ಬಿ.ತಿಮ್ಮಾಪುರ್, ಸಚಿವ
► 1766 ಪುಟಗಳು ಹಾಗೂ 6 ಶಿಫಾರಸುಗಳನ್ನೊಳಗೊಂಡ ವರದಿ ಸಲ್ಲಿಕೆ
► 2025 ಮೇ.5 ರಿಂದ ಜುಲೈ 6 ರವರೆಗೆ ನಡೆದ ಸಮಗ್ರ ಸಮೀಕ್ಷೆ
►ರಾಜ್ಯದ ಪರಿಶಿಷ್ಟ ಜಾತಿಯ 27,24,768 ಕುಟುಂಬಗಳು ಮತ್ತು 1,07,01,982 ಜನರು ಸಮೀಕ್ಷೆಯಲ್ಲಿ ಭಾಗಿ







