ಬೆಂಗಳೂರು ವಿವಿಯ ಪಿಎಚ್ಡಿ ಪ್ರವೇಶ ಪರೀಕ್ಷೆಯಲ್ಲಿ ಅಕ್ರಮ: ಮರು ಪರೀಕ್ಷೆ ನಡೆಸಲು ಉನ್ನತ ಶಿಕ್ಷಣ ಇಲಾಖೆ ಸೂಚನೆ
ಬೆಂಗಳೂರು, ಆ.17: ಬೆಂಗಳೂರು ವಿಶ್ವವಿದ್ಯಾಲಯದ ಪಿಎಚ್ಡಿ ಪ್ರವೇಶ ಪರೀಕ್ಷೆಯಲ್ಲಿ ಅಕ್ರಮ ನಡೆದಿದ್ದು, ಈ ಕುರಿತು ಕಾನೂನು ಕ್ರಮ ಕೈಗೊಂಡು ಮರು ಪರೀಕ್ಷೆಯನ್ನು ನಡೆಸಬೇಕು ಎಂದು ಉನ್ನತ ಶಿಕ್ಷಣ ಇಲಾಖೆಯು ಬೆಂಗಳೂರು ವಿವಿಯ ಕುಲಪತಿಗಳಿಗೆ ಸೂಚನೆ ನೀಡಿದೆ.
ಜು.17ರಂದು ಪಿಎಚ್ಡಿ ಪ್ರವೇಶ ಪರೀಕ್ಷೆಯನ್ನು ನಾಗರಬಾವಿಯಲ್ಲಿರುವ ಕೆಎಲ್ಇ ಆಟ್ರ್ಸ್ ಅಂಡ್ ಕಾಮರ್ಸ್ ಕಾಲೇಜು ಮತ್ತು ಕೆಂಗೇರಿಯ ಶೇಷಾದ್ರಿಪುರಂ ಕಾಲೇಜಿನಲ್ಲಿ ನಡೆಸಲಾಗಿತ್ತು. ಈ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದರು. ಈ ಕುರಿತು ಮುಖ್ಯಮಂತ್ರಿಗಳಿಗೂ ಪತ್ರವನ್ನು ಬರೆಯಲಾಗಿದೆ. ಇದನ್ನು ಆಧಾರಿಸಿ ವಿವಿಗೆ ಸೂಚನೆ ನೀಡಲಾಗಿದೆ.
ಪರೀಕ್ಷೆಯ ದಿನದಂದು 10:30ಕ್ಕೆ ಸರಿಯಾಗಿ ಅಲ್ಲಿನ ಮೇಲ್ವಿಚಾರಕರು, ಭದ್ರತಾ ಸಿಬ್ಬಂದಿಗಳು ಪರೀಕ್ಷಾ ನಿಯಮದ ಪ್ರಕಾರ ಯಾವುದೇ ಅಭ್ಯರ್ಥಿಯ ಗುರುತಿನ ಚೀಟಿ ಮತ್ತು ಪ್ರವೇಶ ಪತ್ರವನ್ನು ಕಡ್ಡಾಯವಾಗಿ ಪರಿಶೀಲನೆ ಮಾಡಿಲ್ಲ. ಅಲ್ಲದೆ ಪರೀಕ್ಷಾ ಕೊಠಡಿಯಲ್ಲಿ ಪ್ರಶ್ನೆ ಪತ್ರಿಕೆಯ ಕವರ್ ಮೊದಲೇ ಬಿಚ್ಚಿಟ್ಟು, ನಂತರ ಅದರಲ್ಲಿನ ಪ್ರಶ್ನೆ ಪತ್ರಿಕೆಗಳನ್ನು ಕೊಟ್ಟಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ ಎಂದು ತಿಳಿಸಲಾಗಿದೆ.