ಮೇ 30ಕ್ಕೆ ‘ಬೆಲೆ ಏರಿಕೆ-ಎಸ್ಐಆರ್’ ವಿರುದ್ದ ಪ್ರತಿಭಟನೆ : ಕೆ.ಎಚ್.ಮುನಿಯಪ್ಪ

ಬೆಂಗಳೂರು : ಕೇಂದ್ರ ಸರಕಾರದ ಬೆಲೆ ಏರಿಕೆ ಹಾಗೂ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ(ಎಸ್ಐಆರ್) ವಿರುದ್ಧ ಮೇ 30ರಂದು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದೇವೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.
ಸೋಮವಾರ ದೇವನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದ ಬಿಜೆಪಿ ನೇತೃತ್ವದ ಸರಕಾರವು ಎಸ್ಐಆರ್ ಪರಿಶೀಲನೆಯ ಮೂಲಕ ಮತದಾರರ ಪಟ್ಟಿಯಿಂದ ಸಾರ್ವಜನಿಕರ ಹೆಸರನ್ನು ಕೈಬಿಡುವ ಮೂಲಕ ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದಶಕಗಳಿಂದ ಮತ ಚಲಾಯಿಸುತ್ತಿರುವವರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವ ಕಾರ್ಯಕ್ರಮ ಅನ್ಯಾಯಯುತವಾದುದು. ಇದು ಸಂವಿಧಾನಕ್ಕೆ ಮಾಡುತ್ತಿರುವ ದ್ರೋಹ. ಈ ಅಕ್ರಮಗಳ ವಿರುದ್ಧ ಮತ್ತು ದೇಶದಲ್ಲಿ ಹೆಚ್ಚುತ್ತಿರುವ ಬೆಲೆ ಏರಿಕೆಯನ್ನು ಖಂಡಿಸಿ ಕಾಂಗ್ರೆಸ್ ಪಕ್ಷದಿಂದ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಮುನಿಯಪ್ಪ ತಿಳಿಸಿದರು.
ಪಕ್ಷದ ಉನ್ನತ ನಾಯಕರ ಮಾರ್ಗದರ್ಶನದಲ್ಲಿ ಬೂತ್ ಮಟ್ಟದ ಕಾರ್ಯಕರ್ತರು ಮತದಾರರ ಪಟ್ಟಿ ಪರಿಶೀಲನೆ ಮತ್ತು ಜನಜಾಗೃತಿ ಅಭಿಯಾನ ಕೈಗೊಳ್ಳಲಿದ್ದಾರೆ. ಒಬ್ಬ ವ್ಯಕ್ತಿ ತನ್ನ ಗ್ರಾಮದಲ್ಲಿ ಅಥವಾ ತನ್ನ ನಗರದಲ್ಲಿ ಹತ್ತಾರು ವರ್ಷಗಳಿಂದ ವಾಸ ಮಾಡುತ್ತಾ, ಹತ್ತಾರು ಚುನಾವಣೆಗಳಲ್ಲಿ ಮತದಾನ ಮಾಡಿರುತ್ತಾನೆ. ಅಂತಹವರ ಮತವನ್ನು ಕಸಿಯುವಂತಹ ಕಾರ್ಯಕ್ರಮವೆ ಎಸ್ಐಆರ್ ಎಂದು ಅವರು ಕಿಡಿಗಾರಿದರು.
ಕಾಂಗ್ರೆಸ್ ಪಕ್ಷ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ನೇತೃತ್ವದಲ್ಲಿ ಇವತ್ತು ಎಲ್ಲ ಕಾರ್ಯದರ್ಶಿಗಳ ಜೊತೆ ಎರಡು ದಿನಗಳ ಕಾರ್ಯಾಗಾರ ಮಾಡಿದ್ದೇವೆ. ಶಾಸಕರು, ಪರಾಜಿತ ಅಭ್ಯರ್ಥಿಗಳು, ಸಚಿವರು ಎಲ್ಲರೂ ಸೇರಿದ್ದರು ಎಂದು ಮುನಿಯಪ್ಪ ತಿಳಿಸಿದರು.
ಇವತ್ತು ಎಲ್ಲ ಮುಂಚೂಣಿ ಘಟಕಗಳು, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಕೆಪಿಸಿಸಿ ಪದಾಧಿಕಾರಿಗಳು, ಗ್ಯಾರಂಟಿ ಸಮಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ನಿಗಮ, ಮಂಡಳಿಗಳ ಅಧ್ಯಕ್ಷರು ಎಲ್ಲರೂ ಜಿಲ್ಲಾ ಕೇಂದ್ರಗಳಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.






