ಪತ್ರಿಕಾ ವಿತರಕರಿಗೆ ನೆರವು ಯೋಜನೆ ಜಾರಿಗೆ ಕಾರ್ಮಿಕ ಇಲಾಖೆ ಆದೇಶ

ಬೆಂಗಳೂರು: ಪತ್ರಿಕಾ ವಿತರಕರ ಸಮಸ್ಯೆಗೆ ಸ್ಪಂದಿಸಿದ ಸರಕಾರ, ಅಪಘಾತದಲ್ಲಿ ಮೃತಪಟ್ಟವರಿಗೆ 2ಲಕ್ಷ ರೂ. ಹಾಗೂ ವೈದ್ಯಕೀಯ ಚಿಕಿತ್ಸೆಗಾಗಿ 1ಲಕ್ಷ ರೂ.ನೆರವು ನೀಡಲು ಕ್ರಮ ಕೈಗೊಂಡಿದೆ. ಇದಕ್ಕಾಗಿ ಕರ್ನಾಟಕ ರಾಜ್ಯ ದಿನಪತ್ರಿಕೆ ವಿತರಣಾ ಕಾರ್ಮಿಕರ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆಯನ್ನು ಅನುಷ್ಠಾನ ಗೊಳಿಸಿರುವ ಆದೇಶವನ್ನು ಕಾರ್ಮಿಕ ಇಲಾಖೆ ಹೊರಡಿಸಿದೆ.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಮತ್ತು ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನು ಭೇಟಿ ಮಾಡಿ ಸಲ್ಲಿಸಿದ ಮನವಿ ಹಿನ್ನೆಲೆಯಲ್ಲಿ ಕಾರ್ಮಿಕ ಇಲಾಖೆ ಈ ಬಗ್ಗೆ ಆದೇಶ ಹೊರಡಿಸಿದೆ. ಪತ್ರಿಕಾ ವಿತರಕರು ಕಾರ್ಮಿಕರಾಗಿದ್ದು, ಅವರಿಗೆ ಕನಿಷ್ಠ ಸೌಲಭ್ಯ ಒದಗಿಸುವಂತೆ ತುಮಕೂರು ಮತ್ತು ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಗೆ ಒತ್ತಾಯಿಸಲಾಗಿತ್ತು.
ಬಹಳ ವರ್ಷಗಳ ಕನಸು ಇದೀಗ ನನಸಾಗಿದೆ. ಪತ್ರಿಕಾ ವಿತರಕರ ಬೇಡಿಕೆ ಈಡೇರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರ್ಮಿಕ ಸಚಿವ ಸಂತೋಷ್ ಲಾಡ್, ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಮತ್ತು ಎಲ್ಲ ಹಂತದಲ್ಲಿಯೂ ಜೊತೆಯಾಗಿ ಸಹಕಾರ ನೀಡಿದ ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರುಗೆ ಕರ್ನಾಟಕ ಪತ್ರಿಕಾ ವಿತರಕರ ಒಕ್ಕೂಟ ಅಭಿನಂದನೆಗಳನ್ನು ಸಲ್ಲಿಸಿದೆ.
ಮೊದಲ ಹೆಜ್ಜೆ: ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ 2022ರ ಜುಲೈ 2ರ ಬೆಳಗ್ಗೆ ಸೈಕಲ್ನಲ್ಲಿ ಪತ್ರಿಕೆ ಹಂಚುತ್ತಿದ್ದಾಗ ಸಾರಿಗೆ ಸಂಸ್ಥೆ ಬಸ್ ಡಿಕ್ಕಿ ಹೊಡೆದ ಪರಿಣಾಮವಾಗಿ ವಿತರಕ ಗಣೇಶ್ ಮೃತಪಟ್ಟಿದ್ದ. ಈ ಕುಟುಂಬಕ್ಕೆ ಪರಿಹಾರ ಕೊಡಿಸಲು ಆಗ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಹೋರಾಟದ ಪರಿಣಾಮವಾಗಿ ಕಾರ್ಮಿಕ ಇಲಾಖೆಯಿಂದ ಮೊದಲ ಬಾರಿಗೆ 2ಲಕ್ಷ ರೂ.ಪರಿಹಾರವನ್ನು ಗಣೇಶ್ ಕುಟುಂಬಕ್ಕೆ ಕೊಡಿಸಲು ಸಾಧ್ಯವಾಗಿತ್ತು. ಈ ಪ್ರಕರಣ ಮಹತ್ವದ ಮತ್ತು ಭರವಸೆಯ ಮೆಟ್ಟಿಲಾಯಿತು ಎಂದು ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯಾಧ್ಯಕ್ಷ ಕೆ.ಶಂಭುಲಿಂಗ ತಿಳಿಸಿದ್ದಾರೆ.







