ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣ: ಡಿವೈಎಸ್ಪಿ ಕನಕಲಕ್ಷ್ಮೀ ಬಂಧನ

ಡಿವೈಎಸ್ಪಿ ಕನಕಲಕ್ಷ್ಮೀ
ಬೆಂಗಳೂರು: ಭೋವಿ ಅಭಿವೃದ್ಧಿ ನಿಗಮದ ಅಕ್ರಮ ಆರೋಪದ ತನಿಖೆ ಎದುರಿಸಿದ್ದ ವಕೀಲೆ ಎಸ್.ಜೀವಾ ಆತ್ಮಹತ್ಯೆ ಪ್ರಕರಣದಲ್ಲಿ ಸಿಐಡಿಯ ಡಿವೈಎಸ್ಪಿ ಕನಕಲಕ್ಷ್ಮೀ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.
ಭೋವಿ ಅಭಿವೃದ್ಧಿ ನಿಗಮದ ಫಲಾನುಭವಿಗಳಿಗೆ ಮೆಟಿರಿಯಲ್ಸ್ ಪೂರೈಸುತ್ತಿದ್ದ ವಕೀಲೆ ಎಸ್.ಜೀವಾ ಅವರು ನವೆಂಬರ್ 22 ರಂದು ಆತ್ಮಹತ್ಯೆಗೆ ಶರಣಾಗಿದ್ದರು. ಈ ವೇಳೆ ಡೆತ್ ನೋಟ್ ಬರೆದಿಟ್ಟಿದ್ದರು. ಆನಂತರ, ತನಿಖೆ ನಡೆಸುತ್ತಿರುವ ಡಿವೈಎಸ್ಪಿ ಕನಕಲಕ್ಷ್ಮೀ ಮಾನಸಿಕ ಕಿರುಕುಳ ನೀಡಿದ್ದಾರೆ. 25 ಲಕ್ಷ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದಾರೆ ಎಂದು ಮೃತರ ಸಹೋದರಿ ಸಂಗೀತಾ ಆರೋಪಿಸಿದ್ದರು.
ಜೀವಾ ಬರೆದಿಟ್ಟಿದ್ದ ಸುಮಾರು 10ಕ್ಕೂ ಹೆಚ್ಚು ಪುಟಗಳ ಡೆತ್ನೋಟ್ಗಳ ಸಮೇತ ಅವರ ಸಹೋದರಿ ಸಂಗೀತಾ ಬನಶಂಕರಿ ಠಾಣೆಗೆ ದೂರು ನೀಡಿದ್ದರು. ದೂರನ್ನು ಆಧರಿಸಿ ಬನಶಂಕರಿ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದರು. ಬಳಿಕ ಪ್ರಕರಣದ ತನಿಖೆಯನ್ನು ಸಿಸಿಬಿ ಪೊಲೀಸರಿಗೆ ವಹಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಸೂಚಿಸಿದ್ದರು.
ಇದಾದ ಬಳಿಕ ಪ್ರಕರಣದ ತನಿಖೆಯನ್ನು ಎಸ್ಐಟಿಗೆ ವಹಿಸಲಾಗಿತ್ತು. ತನಿಖೆ ನಡೆಸಿ ಮಂಗಳವಾರ ಸಿಐಡಿಯ ಡಿವೈಎಸ್ಪಿ ಕನಕಲಕ್ಷ್ಮೀ ಅನ್ನು ಬಂಧಿಸಲಾಗಿದೆ. ಸದ್ಯ ಬೆಂಗಳೂರಿನ ಲೋಕಾಯುಕ್ತ ನ್ಯಾಯಾಲಯ ಮಾರ್ಚ್ 24ರವರೆಗೂ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.







