ಬೆಂಗಳೂರು: ಗೃಹ ಮಂಡಳಿ ಇಂಜಿನಿಯರ್ ನಿವಾಸದ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ಅಕ್ರಮವಾಗಿ ನಿವೇಶನ ಮಾರಾಟ ಮಾಡಿ ಸರಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿರುವ ಆರೋಪ ಹಿನ್ನೆಲೆ ಕರ್ನಾಟಕ ಗೃಹ ಮಂಡಳಿ (ಕೆಎಚ್ಬಿ) ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಸೇರಿ ಇಬ್ಬರ ನಿವಾಸಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಶೋಧ ಕಾರ್ಯ ಕೈಗೊಂಡರು.
ಕೆಎಚ್ಬಿಯ ಯಲಹಂಕ ಉಪನಗರದ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸೈಯದ್ ಅಸ್ಗರ್, ಗೋವಿಂದಯ್ಯ ಎಂಬವರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಅಧಿಕಾರಿಗಳು ಪರಿಶೀಲನೆ ಕೈಗೊಂಡಿದ್ದಾರೆ.
ಯಲಹಂಕ ಉಪನಗರದ ನಿವೇಶನ 271 ಸೆಕ್ಟರ್ಗೆ ಸಂಬಂಧಿಸಿದಂತೆ ಇಂಜಿನಿಯರ್ ಸೈಯದ್ ಅಸ್ಗರ್ ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ಖಾಸಗಿ ವ್ಯಕ್ತಿಗಳಿಗೆ ಮಾರಾಟ ಮಾಡಿದ್ದಾರೆ. ಇದರಿಂದಾಗಿ ಸರಕಾರದ ಬೊಕ್ಕಸಕ್ಕೆ ಸುಮಾರು 10 ಕೋಟಿ ರೂ. ನಷ್ಟವಾಗಿದೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರು ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದರು.
ಈ ಸಂಬಂಧ ಸೈಯದ್ ಅಸ್ಗರ್, ಗೋವಿಂದಯ್ಯ ಹಾಗೂ ಸತೀಶ್ ಹರಿಣಿ ಎಂಬವರ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಲೋಕಾಯುಕ್ತ ಅಧಿಕಾರಿಗಳು ಮೂವರ ನಿವಾಸದಲ್ಲಿ ಪರಿಶೀಲನೆ ನಡೆಸಿ ದಾಖಲೆಗಳನ್ನು ವಶಕ್ಕೆ ಪಡೆದಿದ್ದು, ಆರೋಪಿತರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ ಎಂದು ಗೊತ್ತಾಗಿದೆ.





