ದಿಲ್ಲಿ ಪ್ರತಿಭಟನೆಗೆ ತೆರಳುತ್ತಿದ್ದ ರಾಜ್ಯದ ರೈತರನ್ನು ಬಂಧಿಸಿದ ಮಧ್ಯ ಪ್ರದೇಶ ಪೊಲೀಸರು : ಸಿಎಂ ಸಿದ್ದರಾಮಯ್ಯ ಖಂಡನೆ
"ನಮ್ಮ ರೈತರನ್ನು ಬಂಧಿಸಿರುವ ದುಷ್ಕೃತ್ಯದ ಹಿಂದಿನ ಕ್ರಿಮಿನಲ್ ಮೆದುಳು ಮೋದಿ ನೇತೃತ್ವದ ಬಿಜೆಪಿ ಸರಕಾರ"
![ದಿಲ್ಲಿ ಪ್ರತಿಭಟನೆಗೆ ತೆರಳುತ್ತಿದ್ದ ರಾಜ್ಯದ ರೈತರನ್ನು ಬಂಧಿಸಿದ ಮಧ್ಯ ಪ್ರದೇಶ ಪೊಲೀಸರು : ಸಿಎಂ ಸಿದ್ದರಾಮಯ್ಯ ಖಂಡನೆ ದಿಲ್ಲಿ ಪ್ರತಿಭಟನೆಗೆ ತೆರಳುತ್ತಿದ್ದ ರಾಜ್ಯದ ರೈತರನ್ನು ಬಂಧಿಸಿದ ಮಧ್ಯ ಪ್ರದೇಶ ಪೊಲೀಸರು : ಸಿಎಂ ಸಿದ್ದರಾಮಯ್ಯ ಖಂಡನೆ](https://www.varthabharati.in/h-upload/2024/02/12/1242962-1213836-fyrfnwrxwai-n2f.webp)
ಬೆಂಗಳೂರು: ದಿಲ್ಲಿಯಲ್ಲಿ ನಾಳೆ ನಡೆಯಲಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದ ಹುಬ್ಬಳ್ಳಿಯ ರೈತರನ್ನು ಭೋಪಾಲ್ ನಲ್ಲಿ ಬಂಧಿಸಿರುವ ಮಧ್ಯಪ್ರದೇಶ ಸರಕಾರದ ಕ್ರಮ ಅತ್ಯಂತ ಖಂಡನೀಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಸಂಬಂಧ ʼಎಕ್ಸ್ʼ ಪೋಸ್ಟ್ ನಲ್ಲಿ ಬರೆದುಕೊಂಡಿರುವ ಅವರು, "ಬಂಧಿತರಾದ ರಾಜ್ಯದ ನಮ್ಮ ಎಲ್ಲ ರೈತರನ್ನು ತಕ್ಷಣ ಬಿಡುಗಡೆಗೊಳಿಸಿ ನಾಳೆ ದಿಲ್ಲಿಯ ಜಂತರ್ ಮಂತರ್ ನಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗವಹಿಸಿಲು ಅವಕಾಶ ನೀಡಬೇಕು" ಎಂದು ಮಧ್ಯಪ್ರದೇಶ ಸರಕಾರವನ್ನು ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
"ಬಂಧಿಸಿರುವುದು ಮಧ್ಯಪ್ರದೇಶದ ಸರಕಾರವಾದರೂ ಈ ದುಷ್ಕೃತ್ಯದ ಹಿಂದಿನ ಕ್ರಿಮಿನಲ್ ಮೆದುಳು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರಕಾರ ಎನ್ನುವುದು ಸ್ಪಷ್ಟ" ಎಂದು ಹೇಳಿದ್ದಾರೆ.
"ಈ ರೀತಿ ಬಂಧಿಸಿ, ಬೆದರಿಸಿ ರೈತರ ಹೋರಾಟವನ್ನು ಹತ್ತಿಕ್ಕಲಾಗದು. ಇಂತಹ ದಬ್ಬಾಳಿಕೆಯಿಂದ ಇನ್ನಷ್ಟು ರೈತರು ಬೀದಿಗಿಳಿಯಬಹುದೇ ಹೊರತು ಮಣ್ಣಿನ ಮಕ್ಕಳ ಹೋರಾಟ ನಿಲ್ಲದು. ಶಾಂತಿ-ಸುವ್ಯವಸ್ಥೆಯ ಕಾಳಜಿಯನ್ನು ಕೇಂದ್ರ ಸರಕಾರ ಹೊಂದಿದ್ದರೆ ತಕ್ಷಣ ರೈತರ ಬೇಡಿಕೆಗಳನ್ನು ಈಡೇರಿಸಿ ಸಮಸ್ಯೆ ಬಗೆಹರಿಸಬೇಕೇ ಹೊರತು ಈ ರೀತಿ ದಮನ-ದೌರ್ಜನ್ಯ ನಡೆಸಿ ರೈತರ ಬಾಯಿ ಮುಚ್ಚಿಸುವುದಲ್ಲ" ಎಂದು ಟೀಕಿಸಿದರು.
"ಕೇಂದ್ರದಲ್ಲಿ ಇರಲಿ, ರಾಜ್ಯಗಳಲ್ಲಿ ಇರಲಿ ಬಿಜೆಪಿ ಕೈಗೆ ಅಧಿಕಾರ ಬಂದ ಕೂಡಲೇ ಅವರು ಮೊದಲು ದಂಡ ಪ್ರಯೋಗ ಮಾಡುವುದು ಅನ್ನದಾತರ ಮೇಲೆ ಎನ್ನುವುದಕ್ಕೆ ಇತಿಹಾಸ ಸಾಕ್ಷಿ. ಕರ್ನಾಟಕದಲ್ಲಿ ಮೊದಲ ಬಾರಿ ಅಧಿಕಾರಕ್ಕೆ ಬಂದಿದ್ದ ಬಿಜೆಪಿ ಗೊಬ್ಬರ ಕೇಳಿದ್ದ ರೈತರನ್ನು ನಿರ್ದಯವಾಗಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರಕಾರ ಗುಂಡಿಕ್ಕಿ ಕೊಂದಿತ್ತು. ಕೇಂದ್ರದ ನರೇಂದ್ರ ಮೋದಿಯವರ ಸರಕಾರ ದೆದಿಲ್ಲಿ ಮತ್ತು ಉತ್ತರಪ್ರದೇಶಲ್ಲಿ ಪ್ರತಿಭಟನಾನಿರತ ರೈತರ ಮೇಲೆ ನಡೆಸಿದ್ದ ದೌರ್ಜನ್ಯದಲ್ಲಿ ಹಲವಾರು ರೈತರು ಸಾವಿಗೀಡಾಗಿದ್ದರು" ತಿಳಿಸಿದ್ದಾರೆ.
"ನರೇಂದ್ರ ಮೋದಿ ಅವರ ಸರಕಾರದ ಈಗಿನ ಕ್ರಮಗಳನ್ನು ನೋಡಿದರೆ ರೈತರನ್ನು ಬೆದರಿಸಿ ತಲೆ ಎತ್ತದಂತೆ ಮಾಡುವುದೇ ಮುಖ್ಯ ಉದ್ದೇಶವಿದ್ದಂತೆ ಕಾಣುತ್ತಿದೆ" ಎಂದು ಆತಂಕ ವ್ಯಕ್ತಪಡಿಸಿದ್ದಾರೆ.