ಮಂಡ್ಯ ಅಭ್ಯರ್ಥಿ ಆಯ್ಕೆ ಅಧಿಕಾರ ಕುಮಾರಸ್ವಾಮಿಗೆ: ಎಚ್.ಡಿ.ದೇವೇಗೌಡ
![ಮಂಡ್ಯ ಅಭ್ಯರ್ಥಿ ಆಯ್ಕೆ ಅಧಿಕಾರ ಕುಮಾರಸ್ವಾಮಿಗೆ: ಎಚ್.ಡಿ.ದೇವೇಗೌಡ ಮಂಡ್ಯ ಅಭ್ಯರ್ಥಿ ಆಯ್ಕೆ ಅಧಿಕಾರ ಕುಮಾರಸ್ವಾಮಿಗೆ: ಎಚ್.ಡಿ.ದೇವೇಗೌಡ](/images/placeholder.jpg)
ಬೆಂಗಳೂರು,: ಮಂಡ್ಯ ಲೋಕಸಭೆ ಚುನಾವಣೆ ಹಾಗೂ ಅಲ್ಲಿನ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆಯ ಬಗ್ಗೆ ನಿರ್ಧಾರ ಕೈಗೊಳ್ಳುವ ಅಧಿಕಾರವನ್ನು ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರಿಗೆ ನೀಡಲಾಗಿದೆ ಎಂದು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.
ಮಂಗಳವಾರ ತಮ್ಮ ನಿವಾಸದಲ್ಲಿ ಮಂಡ್ಯ ಜಿಲ್ಲೆಯ ನಾಯಕರು ಜತೆ ಸಮಾಲೋಚನೆ ನಡೆದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು, ‘ಎರಡು ಚುನಾವಣೆಗಳಿಗೆ ಮಂಡ್ಯದಲ್ಲಿ ಯಾರು ಅಭ್ಯರ್ಥಿ ಆಗಬೇಕು ಎಂದು ನಾನು ಚರ್ಚೆ ಮಾಡಿದ್ದೇನೆ. ಎಲ್ಲ ನಾಯಕರ ಅಭಿಪ್ರಾಯ ಆಲಿಸಿದ್ದೇನೆ. ಈ ಬಗ್ಗೆ ಕುಮಾರಸ್ವಾಮಿ ಕೋರ್ ಕಮಿಟಿ ಹಾಗೂ ಪಕ್ಷದ ನಾಯಕರ ಜತೆ ಸಮಾಲೋಚನೆ ನಡೆಸಿ ನಿರ್ಧಾರ ಮಾಡುತ್ತಾರೆ ಎಂದರು.
ಶಿಕ್ಷಕರ ಕ್ಷೇತ್ರದಲ್ಲಿ ಕೆ.ಟಿ.ಶ್ರೀಕಂಠೇಗೌಡ ಹಾಗೂ ವಿವೇಕ್ ಹೆಸರುಗಳಿವೆ. ಇಬ್ಬರಲ್ಲಿ ಒಬ್ಬರಿಗೆ ಅವಕಾಶ ಸಿಗುತ್ತದೆ. ಇನ್ನೊಬ್ಬರಿಗೆ ಬೇರೆ ಕಡೆ ಅವಕಾಶ ಕಲ್ಪಿಸಲಾಗುವುದು. ಇಬ್ಬರಲ್ಲಿ ಯಾರು ಎನ್ನುವ ನಿರ್ಧಾರವನ್ನು ಕುಮಾರಸ್ವಾಮಿಗೆ ಬಿಡುತ್ತೇನೆ. ಅವರು ಏನು ಹೇಳುತ್ತಾರೋ ಅದರಂತೆ ಇಬ್ಬರೂ ನಡೆದುಕೊಳ್ಳಬೇಕು ಎಂದು ಹೇಳಿದರು.
ಕುಮಾರಸ್ವಾಮಿ ನಿಲ್ಲೋದಿಲ್ಲ: ಮಂಡ್ಯ ಕ್ಷೇತ್ರದಲ್ಲಿ ನಾನು ನಿಲ್ಲುವುದಿಲ್ಲ. ನಿಖಿಲ್ ಕೂಡ ನಿಲ್ಲೋದಿಲ್ಲ, ಕುಮಾರಸ್ವಾಮಿ ನಮ್ಮ ಪಕ್ಷದ ಶಾಸಕಾಂಗ ಪಕ್ಷದ ನಾಯಕರು. ಇಲ್ಲಿ ಅವರು ಸದನದ ಒಳಗೆ, ಹೊರಗೆ ಹೋರಾಟ ನಡೆಸಬೇಕಿದೆ. ಹೀಗಾಗಿ ಅವರು ಲೋಕಸಭೆಗೆ ಹೋಗುವೆ ಎಂದು ಹೇಳಲ್ಲ, ಇರುವ ವಾಸ್ತವಾಂಶವನ್ನು ಹೇಳುತ್ತೇನೆ ಎಂದು ದೇವೇಗೌಡ ಸ್ಪಷ್ಟಪಡಿಸಿದರು.
ಸಭೆಯಲ್ಲಿ ಜೆಡಿಎಸ್ ಯುವ ಘಟಕದ ನಿಖಿಲ್ ಕುಮಾರಸ್ವಾಮಿ, ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ, ಮಾಜಿ ಸಚಿವರಾದ ಸಿ.ಎಸ್.ಪುಟ್ಟರಾಜು, ಸಾ.ರಾ.ಮಹೇಶ್, ಶಾಸಕರಾದ ಮಂಜುನಾಥ್, ಮಂಜೇಗೌಡ, ಮಾಜಿ ಶಾಸಕರಾದ ರವೀಂದ್ರ ಶ್ರೀಕಂಠಯ್ಯ, ಸುರೇಶ್ ಗೌಡ, ಕೆ.ಅನ್ನದಾನಿ, ಕೆ.ಟಿ. ಶ್ರೀಕಂಠಗೌಡ, ಜಿಲ್ಲಾಧ್ಯಕ್ಷ ರಮೇಶ್, ರಾಮಚಂದ್ರ ಹಾಗೂ ವಿವೇಕ್ ಮುಂತಾದವರು ಭಾಗಿಯಾಗಿದ್ದರು.