ಕಾಡಿನೊಳಗಿನ ಜನವಸತಿ ಸ್ಥಳಾಂತರದ ಕುರಿತು ಪರಿಶೀಲನೆ : ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು : ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ಕಾಡಿನೊಳಗಿರುವ ಜನವಸತಿಗಳನ್ನು ಸ್ಥಳಾಂತರಿಸುವ ಕುರಿತು ಪರಿಶೀಲಿಸಲಾಗುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಕಾರ್ಕಳ ವ್ಯಾಪ್ತಿಯ ನಿವಾಸಿಗಳ ಪುನರ್ ವಸತಿ ಮತ್ತು ಪರಿಹಾರಕ್ಕೆ ಸಂಬಂಧಿಸಿದಂತೆ 2005ರ ಸರಕಾರಿ ಸುತ್ತೋಲೆ ಪುನರ್ ಪರಿಶೀಲಿಸಿ ಮರು ಆದೇಶ ಮಾಡುವಂತೆ ಕೋರಿ ಶಾಸಕ ಟಿ.ಡಿ.ರಾಜೇಗೌಡ ನೇತೃತ್ವದ ನಿಯೋಗವು ಸೋಮವಾರ ವಿಕಾಸಸೌಧದಲ್ಲಿ ಸಲ್ಲಿಸಿದ ಮನವಿ ಸ್ವೀಕರಿಸಿ ಅವರು ಮಾತನಾಡಿದರು.
ಹಿಂದೆ ವನ್ಯಜೀವಿಗಳ ಕಳ್ಳಬೇಟೆ ನಡೆಯುತ್ತಿತ್ತು. ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಇದನ್ನು ನಿಯಂತ್ರಿಸಿದ್ದು, ಉತ್ತಮ ಪರಿಸರವಿರುವುದರಿಂದ ವನ್ಯಜೀವಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಆದರೆ ಹೆಚ್ಚುತ್ತಿರುವ ವನ್ಯಜೀವಿಗಳ ಸಂಖ್ಯೆಗೆ ಅನುಗುಣವಾಗಿ ವನ ಪ್ರದೇಶ ಹೆಚ್ಚುತ್ತಿಲ್ಲ, ಇದರಿಂದ ಸಮಸ್ಯೆ ಉಲ್ಬಣಿಸುತ್ತಿದೆ ಎಂದು ಅವರು ಹೇಳಿದರು.
1972ರಲ್ಲಿ ಬಂಡೀಪುರದಲ್ಲಿ ಕೇವಲ 12 ಇದ್ದ ಹುಲಿಗಳ ಸಂಖ್ಯೆ ಇಂದು 170ಕ್ಕೂ ಹೆಚ್ಚಾಗಿದೆ, ಹೀಗಾಗಿ ದುರ್ಬಲ ಹುಲಿಗಳು ಕಾಡಿನಿಂದ ಹೊರಬರುತ್ತಿವೆ. ಹಗಲು ರಾತ್ರಿ ಇಲಾಖೆ ಶ್ರಮಿಸುತ್ತಿದ್ದರು, ಮಾನವ-ವನ್ಯಜೀವಿ ಸಂಘರ್ಷದ ಘಟನೆಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ವಿವಿಧ ಇಲಾಖೆಗಳೊಂದಿಗೆ ಸಮನ್ವಯ ಹೆಚ್ಚಿಸಲು ಮುಖ್ಯಮಂತ್ರಿ ನೇತೃತ್ವದಲ್ಲಿ ಶೀಘ್ರವೇ ಸಭೆ ನಡೆಯಲಿದೆ ಎಂದು ಈಶ್ವರ್ ಖಂಡ್ರೆ ತಿಳಿಸಿದರು.
ಅರಣ್ಯದೊಳಗಿರುವ ಜನವಸತಿಗಳನ್ನು ಸ್ಥಳಾಂತರದಿಂದ ಅರಣ್ಯವಾಸಿಗಳು ಮತ್ತು ಅವರ ಮಕ್ಕಳು ಸಮಾಜದ ಮುಖ್ಯವಾಹಿನಿಗೆ ಬರುತ್ತಾರೆ. ಜೊತೆಗೆ ಮಾನವ-ವನ್ಯಜೀವಿ ಸಂಘರ್ಷವೂ ಕಡಿಮೆ ಆಗುತ್ತದೆ. ಸ್ಥಳಾಂತರಕ್ಕೆ ಪರಿಹಾರ ನೀಡಬೇಕಾಗುತ್ತದೆ. ಇದನ್ನು ಒಂದೆ ಬಾರಿಗೆ ಮಾಡಲು ಸಾಧ್ಯವಿಲ್ಲ. ಹಂತ ಹಂತವಾಗಿ ಮಾಡಬೇಕಾಗುತ್ತದೆ. ಬಜೆಟ್ ನಲ್ಲಿ ಇದಕ್ಕೆ ಹಣ ಮೀಸಲಿಟ್ಟರೆ ಇದು ಸಾಧ್ಯವಾಗುತ್ತದೆ. ಈ ಬಗ್ಗೆ ಮುಖ್ಯಮಂತ್ರಿ ಜೊತೆ ಚರ್ಚಿಸಲಾಗುವುದು ಎಂದು ಅವರು ಹೇಳಿದರು.







