ರಾಜ್ಯ ಸರಕಾರ ಕೈಗೊಳ್ಳುತ್ತಿರುವುದು ಜಾತಿಗಣತಿಯಲ್ಲ, ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ: ಸಚಿವ ಶಿವರಾಜ್ ತಂಗಡಗಿ
‘ನಾಳೆ ಹೊರಬೀಳಲಿದೆ ಅಧಿಕೃತ ಆದೇಶ’

ಶಿವರಾಜ್ ತಂಗಡಗಿ
ಬೆಂಗಳೂರು: ಕೇಂದ್ರ ಸರಕಾರ ನಡೆಸುತ್ತಿರುವುದು ಜಾತಿ ಗಣತಿ. ರಾಜ್ಯ ಸರಕಾರವು ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯನ್ನು ನಡೆಸುತ್ತಿದ್ದು, ನಾಳೆ(ಜು.24) ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ.
ಬುಧವಾರ ವಿಕಾಸಸೌಧದಲ್ಲಿ ತಮ್ಮನ್ನು ಭೇಟಿಯಾದ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಉನ್ನತಮಟ್ಟದ ಸಭೆ ನಡೆಸಿದ್ದು, ಮಹತ್ವದ ವಿಚಾರಗಳನ್ನು ಚರ್ಚೆ ನಡೆಸಲಾಗಿದೆ. ರಾಜ್ಯದಲ್ಲಿ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ವರದಿ ರಚನೆಯ ಸಿದ್ಧತೆಗಳು ಅಂತಿಮಗೊಳ್ಳುತ್ತಿದ್ದು, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರ ನೇತೃತ್ವದ ನಿಯೋಗವು ಮುಂದಿನ ಸೋಮವಾರ ತೆಲಂಗಾಣಕ್ಕೆ ತೆರಳಿ ಅಲ್ಲಿನ ಸಮೀಕ್ಷೆಯ ಪದ್ಧತಿಯನ್ನು ಅಧ್ಯಯನ ನಡೆಸಲಿದೆ ಎಂದು ಹೇಳಿದರು.
ಕಾಂತರಾಜು ವರದಿ ಸಿದ್ದಪಡಿಸಿ 10 ವರ್ಷ ಕಳೆದಿರುವುದರಿಂದ ರಾಜ್ಯದಲ್ಲಿ ಮತ್ತೊಮ್ಮೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ. ಮುಂದಿನ ಮೂರು ತಿಂಗಳಲ್ಲಿ ವರದಿ ನೀಡಬೇಕು ಎಂದು ಸಿಎಂ ಆಯೋಗಕ್ಕೆ ನಿರ್ದೇಶನ ನೀಡಿದ್ದಾರೆ ಎಂದು ಅವರು ತಿಳಿಸಿದರು.
ಸಮೀಕ್ಷೆ ನಡೆಸಲು ಶಿಕ್ಷಕರನ್ನೇ ಬಳಸಿಕೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಎಲ್ಲ ಇಲಾಖೆಯ ಅಧಿಕಾರಿಗಳು ಇದಕ್ಕೆ ಕೈಜೋಡಿಸಲಿದ್ದಾರೆ. ಮುಂದಿನ ಹಂತಗಳಲ್ಲಿ ಹೇಗೆ ಸಮೀಕ್ಷೆಯಲ್ಲಿ ಪಾಲ್ಗೊಳ್ಳಬೇಕು, ಸಮೀಕ್ಷೆಯ ಮಾದರಿ ಹೇಗಿರಬೇಕು, ಶಿಕ್ಷಕರಿಗೆ ಸಮೀಕ್ಷೆಯ ತರಬೇತಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಅಧಿಕಾರಿಗಳ ಮಟ್ಟದಲ್ಲಿ ನಿರಂತರವಾಗಿ ಸಭೆಗಳು ನಡೆಯಲಿವೆ ಎಂದರು.
ಈ ಹಿಂದೆ ಕಾಂತರಾಜು ಅಯೋಗವು ಸಮೀಕ್ಷೆ ನಡೆಸಿದ ಸಂದರ್ಭದಲ್ಲಿ ಸಮೀಕ್ಷಾ ಮಾದರಿ ಸಂಗ್ರಹಕ್ಕೆ 54 ಕಾಲಂಗಳು ಇದ್ದವು. ಅದರಂತೆ ಪ್ರತಿ ಮನೆಗೆ ತೆರಳಿ ಅವುಗಳನ್ನು ಭರ್ತಿ ಮಾಡಿ ಅದರ ಆಧಾರದ ಮೇಲೆ ಸಮೀಕ್ಷಾ ವರದಿ ರಚಿಸಲಾಗಿತ್ತು. ಈ ಬಾರಿ ಎಷ್ಟು ಮಾದರಿ ಇರಬೇಕು ಎಂಬುದರ ಬಗ್ಗೆ ನಿರ್ಧರಿಸಲು ತಜ್ಞರ ತಂಡವೊಂದನ್ನು ರಚಿಸಲು ತೀರ್ಮಾನಿಸಲಾಗಿದೆ. ಈ ಎಲ್ಲ ಪ್ರಕ್ರಿಯೆಗಳು ನಾಳೆಯಿಂದ ಪ್ರಾರಂಭವಾಗುತ್ತವೆ ಎಂದು ಹೇಳಿದರು.
ಸಮೀಕ್ಷೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸಲಾಗುವುದು. ಮನೆ-ಮನೆ ಸಮೀಕ್ಷೆಯ ಜೊತೆಗೆ ತಂತ್ರಜ್ಞಾನವನ್ನೂ ಬಳಸಿಕೊಳ್ಳಲಾಗುವುದು. ಒಂದು ವೇಳೆ ಸಮೀಕ್ಷೆ ಮಾಡುವವರು ತಮ್ಮ ಮನೆಗೆ ಭೇಟಿ ನೀಡಿದ ವೇಳೆ ಲಭ್ಯ ಇಲ್ಲದಿದ್ದಾಗ ಅಂತಹವರು ಸ್ವಯಂ ವಿವರಗಳನ್ನು ದಾಖಲು ಮಾಡುವುದಕ್ಕೆ ಆಪ್ ಸೇರಿ ಮುಂತಾದ ತಾಂತ್ರಿಕ ಸೌಲಭ್ಯಗಳನ್ನು ಬಳಸಿಕೊಳ್ಳಲು ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಅವರು ವಿವರಿಸಿದರು.
ದಸರಾ ರಜೆಯಲ್ಲಿ ಶಿಕ್ಷಕರನ್ನು ಬಳಕೆ ಮಾಡಿಕೊಂಡು 15ದಿನಗಳಲ್ಲಿ ಸಮೀಕ್ಷೆ ನಡೆಸಲಾಗುವುದು. ಶಾಲಾ ರಜೆ ವೇಳೆ ಯಾವುದೇ ತೊಂದರೆ ಆಗುವುದಿಲ್ಲ. ಅಗತ್ಯ ತಂತ್ರಜ್ಞಾನ ಬಳಕೆ ಮಾಡಿಕೊಂಡು ಸಮೀಕ್ಷೆ ನಡೆಸಲಾಗುವುದು. 15 ದಿನದಲ್ಲಿ ಸಮೀಕ್ಷೆ ನಡೆಸಲು ಯಾವುದೇ ತೊಂದರೆ ಆಗುವುದಿಲ್ಲ. ಏಳು ಕೋಟಿ ಜನರು ಸಮೀಕ್ಷೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.
ರಾಜ್ಯ ಸರಕಾರ ಜಾತಿ ಗಣತಿ ಮಾಡುತ್ತಿಲ್ಲ. ಜಾತಿಗಣತಿಯನ್ನು ಕೇಂದ್ರ ಸರಕಾರ ಮಾಡುತ್ತಿದೆ. ಕೇಂದ್ರ ಮಾಡುತ್ತಿರುವ ಜಾತಿಗಣತಿಗೂ ರಾಜ್ಯ ಸರಕಾರದ ಸಮೀಕ್ಷೆಗೂ ವ್ಯತ್ಯಾಸವಿದೆ. ರಾಜ್ಯ ಸರಕಾರವು ಪ್ರತಿ ವ್ಯಕ್ತಿಯ ಸಾಮಾಜಿ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಸುತ್ತದೆ. ಆ ವ್ಯಕ್ತಿಯ ಓದು, ಉದ್ಯೋಗ, ವ್ಯಾಪಾರ, ಆರ್ಥಿಕ ಸ್ಥಿತಿಗತಿ ಅರಿಯುವ ಉದ್ದೇಶ ಇದೆ. ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ಹಿಂದುಳಿದಂತಹವರು ಯಾವುದೇ ಸಮುದಾಯದರಾಗಿದ್ದರೂ ಅವರಿಗೆ ಸೌಲಭ್ಯಗಳನ್ನು ಕಲ್ಪಿಸಿ ಅವರನ್ನು ಮೇಲಕ್ಕೆತ್ತಬೇಕು ಎಂಬುದು ಸಿಎಂ ಸಿದ್ದರಾಮಯ್ಯರ ಆಸೆ ಎಂದು ಹೇಳಿದರು.
ಬಜೆಟ್ ಮೀಸಲಿಡಿ: ಕೇಂದ್ರ ಸರಕಾರವೂ ಸಿದ್ದರಾಮಯ್ಯರ ಸರಕಾರದ ಮಾದರಿಯಲ್ಲಿ ಪ್ರತಿ ವ್ಯಕ್ತಿಯ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಗತಿಯ ಸಮೀಕ್ಷೆ ನಡೆಸಬೇಕು. ಈ ಮೂಲಕ ದೇಶದ ಜನಸಂಖ್ಯೆಗೆ ಅನುಗುಣವಾಗಿ ತನ್ನ ಬಜೆಟ್ ವಿಂಗಡಿಸಬೇಕು. ಶೇ.24.1ರಷ್ಟು ಇರುವ ಎಸ್ಸಿ-ಎಸ್ಟಿ ವರ್ಗದವರಿಗೆ ಬಜೆಟ್ನ ಅನುದಾನ ಮೀಸಲಿಡಬೇಕು ಎಂದು ಅವರು ಆಗ್ರಹಿಸಿದರು.







