ದಾವಣಗೆರೆ ಉಪಚುನಾವಣೆಯ ಬೆಳವಣಿಗೆಗಳನ್ನು ಉಲ್ಲೇಖಿಸಿ ರಾಜೀನಾಮೆ ಪತ್ರದಲ್ಲಿ ಅಸಮಾಧಾನ ಹೊರಹಾಕಿದ ಜಬ್ಬಾರ್; ಪತ್ರದಲ್ಲಿ ಏನಿದೆ?

ಬೆಂಗಳೂರು : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಬಿಸಿ ಈಗ ಕಾಂಗ್ರೆಸ್ ಪಾಳಯದಲ್ಲಿ ದೊಡ್ಡ ಮಟ್ಟದ ಬಿರುಗಾಳಿ ಎಬ್ಬಿಸಿದೆ. ಉಪಚುನಾವಣೆಯ ಸಂದರ್ಭದಲ್ಲಿ ನಡೆದ ಆಂತರಿಕ ಗೊಂದಲ ಹಾಗೂ ಅಸಮಾಧಾನದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೆ.ಅಬ್ದುಲ್ ಜಬ್ಬಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಕ್ಷೇತ್ರದಲ್ಲಿ ಮುಸ್ಲಿಮರಿಗೆ ಟಿಕೆಟ್ ಕೊಡದ ಹಿನ್ನೆಲೆಯಲ್ಲಿ ಆರಂಭವಾಗಿದ್ದ ಮುನಿಸು ಚುನಾವಣೆ ಮುಗಿದ ಬಳಿಕವೂ ಮುಂದುವರಿದಿದೆ. ಸಚಿವ ಝಮೀರ್ ಅಹ್ಮದ್ ಪಕ್ಷದ ಅಭ್ಯರ್ಥಿ ಪರ ಪ್ರಚಾರ ಮಾಡಿಲ್ಲ, ಪ್ರಚಾರಕ್ಕೆ ಅಂತ ಬಂದಿದ್ದರೂ ಅವರ ನಡೆ ಯಾರಿಗೂ ಸಮಾಧಾನ ತಂದಿಲ್ಲ. ಮುಸ್ಲಿಂ ನಾಯಕರ ಮನವೊಲಿಕೆ ಮಾಡದೇ ಝಮೀರ್ ನಿರ್ಲಕ್ಷ್ಯ ಮಾಡಿದ್ದಾರೆ. ಜಮೀರ್ ಜೊತೆಗೆ ಎಂಎಲ್ಸಿ ಅಬ್ದುಲ್ ಜಬ್ಬಾರ್ ಸಹ ಪ್ರಚಾರದಿಂದ ದೂರ ಉಳಿದಿದ್ದರು. ಯಾರೆಲ್ಲ ಪ್ರಚಾರ ನಡೆಸಲಿಲ್ಲ, ಅವರ ವಿರುದ್ಧ ಕ್ರಮ ಆಗಲೇಬೇಕೆಂದು ಒಂದು ಬಣ ಪಟ್ಟು ಹಿಡಿದಿತ್ತು ಎನ್ನಲಾಗಿದೆ. ಈ ಬೆನ್ನಲ್ಲೇ ಅಬ್ದುಲ್ ಜಬ್ಬಾರ್ ರಾಜೀನಾಮೆ ಸಲ್ಲಿಸಿದ್ದಾರೆ.
ಅಬ್ದುಲ್ ಜಬ್ಬಾರ್ ಬರೆದ ರಾಜೀನಾಮೆ ಪತ್ರದಲ್ಲಿ ಏನಿದೆ?:
“ಎಚ್ಚರಿಕೆಯಿಂದ ಪರಿಶೀಲಿಸಿದ ಬಳಿಕ ಹಾಗೂ ತೀವ್ರ ದುಃಖದಿಂದ ನಾನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಈ ಪತ್ರ ಬರೆಯುತ್ತಿದ್ದೇನೆ. ದುರದೃಷ್ಟವಶಾತ್, 2026ರ ಉಪಚುನಾವಣೆಯ ವೇಳೆ ದಾವಣಗೆರೆ ಜಿಲ್ಲೆ ಹಾಗೂ ರಾಜ್ಯದಲ್ಲಿ ನಡೆದ ಇತ್ತೀಚಿನ ರಾಜಕೀಯ ಬೆಳವಣಿಗೆಗಳು ಈ ನಿರ್ಧಾರಕ್ಕೆ ಕಾರಣವಾಗಿವೆ. ಈ ಬೆಳವಣಿಗೆಗಳಿಂದ ರಾಜ್ಯಾದ್ಯಂತ ಅಲ್ಪಸಂಖ್ಯಾತರು ತೀವ್ರ ನಿರಾಶೆಗೊಂಡಿದ್ದಾರೆ.”
“ಅಲ್ಪಸಂಖ್ಯಾತ, ವಕ್ಫ್ ಮತ್ತು ವಸತಿ ಸಚಿವ ಬಿ. ಝಡ್.ಝಮೀರ್ ಅಹ್ಮದ್ ಖಾನ್ ಕಾಂಗ್ರೆಸ್ ಪಕ್ಷದ ಸ್ಟಾರ್ ಪ್ರಚಾರಕರಾಗಿದ್ದಾರೆ. ಅವರು ಭೇಟಿ ನೀಡುವ ಎಲ್ಲೆಡೆ ಅವರಿಗೆ ಅಪಾರ ಗೌರವ ಹಾಗೂ ಜನಬೆಂಬಲವಿದೆ. ಆದರೆ ಉಪಚುನಾವಣಾ ಪ್ರಚಾರಕ್ಕಾಗಿ ದಾವಣಗೆರೆಗೆ ಬರಬಾರದು ಎಂದು ಮಾಧ್ಯಮಗಳಲ್ಲಿ ಅವರನ್ನು ಎರಡು ಬಾರಿ ಅಗೌರವದಿಂದ ಉಲ್ಲೇಖಿಸಲಾಗಿದೆ. ಇದರಿಂದ ರಾಜ್ಯಾದ್ಯಂತ ಅಲ್ಪಸಂಖ್ಯಾತ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಸ್ಲಿಂ ಸಮುದಾಯದಲ್ಲಿ ಅಸಮಾಧಾನ ಉಂಟಾಗಿದೆ. ಈ ಕುರಿತು ಪಕ್ಷದಿಂದ ಯಾವುದೇ ಶಿಸ್ತು ಕ್ರಮ ಕೈಗೊಳ್ಳಲಾಗಿಲ್ಲ; ಇದುವರೆಗೆ ಕ್ಷಮೆಯಾಚನೆಯೂ ಆಗಿಲ್ಲ.”
“ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನ ತನ್ನ ಘನತೆಯನ್ನು ಕಾಪಾಡಿಕೊಂಡಿದೆ. ಆದರೆ ದಾವಣಗೆರೆ ಉಪಚುನಾವಣೆಯ ಸಂಬಂಧವಾಗಿ ಅಲ್ಪಸಂಖ್ಯಾತ ವಿಭಾಗದ ನಾಯಕರು ಮತ್ತು ಪದಾಧಿಕಾರಿಗಳನ್ನು ಸಂಪರ್ಕಿಸಿ ಅವರ ಅಭಿಪ್ರಾಯ ಪಡೆಯಲು ಪಕ್ಷದ ನಾಯಕತ್ವದಿಂದ ಯಾವುದೇ ಪ್ರಯತ್ನ ನಡೆದಿಲ್ಲ.”
“ನಾನು ವಿದ್ಯಾರ್ಥಿ ಸಂಘದಿಂದ ಪ್ರಾರಂಭಿಸಿ ದಾವಣಗೆರೆ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನ ಅಲಂಕರಿಸಿದ್ದೇನೆ. ಬಳಿಕ ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ರಾಜ್ಯಾಧ್ಯಕ್ಷನಾಗಿದ್ದೇನೆ. ದಾವಣಗೆರೆಯೊಂದಿಗೆ ನನ್ನ ದೀರ್ಘ ನಂಟಿದೆ. ಕಾಂಗ್ರೆಸ್ ಎಲ್ಲರನ್ನು ಒಳಗೊಂಡು ಕಾರ್ಯನಿರ್ವಹಿಸುವ ಪಕ್ಷ. ಆದರೆ ಇತ್ತೀಚಿನ ಘಟನೆಗಳಿಂದ ಅಲ್ಪಸಂಖ್ಯಾತ ವಿಭಾಗದ ಪದಾಧಿಕಾರಿಗಳು ದುಃಖಿತರಾಗಿದ್ದು, ನಾನೂ ಅದೇ ಭಾವನೆ ಹೊಂದಿದ್ದೇನೆ.”
“ಮುಸ್ಲಿಂ ಅಲ್ಪಸಂಖ್ಯಾತರು, ಸಮುದಾಯದ ಹಾಗೂ ಧಾರ್ಮಿಕ ನಾಯಕರು ದಾವಣಗೆರೆಯಷ್ಟೇ ಅಲ್ಲ, ರಾಜ್ಯಾದ್ಯಂತ ನಿರಾಶೆಗೊಂಡಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ನಾನು ಹುದ್ದೆಯಲ್ಲಿ ಮುಂದುವರಿಯುವುದು ಸೂಕ್ತವಲ್ಲ ಎಂದು ಭಾವಿಸಿದ್ದೇನೆ.”
“ಕೆಲವು ನಾಯಕರನ್ನು ಬದಿಗಿಟ್ಟು ಅಲ್ಪಸಂಖ್ಯಾತರೊಳಗೆ ಪ್ರತ್ಯೇಕ ಗುಂಪು ರಚಿಸುವ ಪ್ರಯತ್ನ ನಡೆದಿದೆ. ಇದರಿಂದ ಸಮಸ್ಯೆ ಇನ್ನಷ್ಟು ಉಲ್ಬಣಗೊಂಡಿದೆ. ನಾನು ಸುಮಾರು 45 ವರ್ಷಗಳಿಂದ ಕಾಂಗ್ರೆಸ್ ನಲ್ಲಿದ್ದೇನೆ. ನನ್ನ ಅನುಭವದಲ್ಲಿ ಇದು ಸರಿಯಾದ ಕ್ರಮವಲ್ಲ; ಭವಿಷ್ಯದಲ್ಲಿಯೂ ಉತ್ತಮ ಫಲಿತಾಂಶ ನೀಡುವುದಿಲ್ಲ.”
“ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸುವುದು ನನಗೆ ಗೌರವವಾಗಿದೆ. 2023ರ ವಿಧಾನಸಭಾ ಚುನಾವಣೆಗಳು ಹಾಗೂ ನಂತರದ ಸಂಸತ್ ಚುನಾವಣೆಯಲ್ಲಿಯೂ ಪಕ್ಷಕ್ಕೆ ಅಗತ್ಯವಿದ್ದಾಗಲೆಲ್ಲಾ ನನ್ನ ಸಾಮರ್ಥ್ಯಕ್ಕೆ ತಕ್ಕಂತೆ ಕೆಲಸ ಮಾಡಿ ಫಲಿತಾಂಶಗಳನ್ನು ತೋರಿಸಿದ್ದೇನೆ.”
"ನಾನು ಇಡೀ ರಾಜ್ಯದಲ್ಲಿ ಸಂಚರಿಸಿ ಅಲ್ಪಸಂಖ್ಯಾತರನ್ನು ಕಾಂಗ್ರೆಸ್ ಮೌಲ್ಯಗಳು ಮತ್ತು ತತ್ವಗಳತ್ತ ಸೆಳೆಯಲು ಕೆಲಸ ಮಾಡಿದ್ದೇನೆ. ಅದರ ವಿವರಗಳು ಸಾರ್ವಜನಿಕವಾಗಿ ಲಭ್ಯವಿವೆ. ಅಲ್ಪಸಂಖ್ಯಾತ ಮತದಾರರು ಮತ್ತು ಪದಾಧಿಕಾರಿಗಳು ನಮ್ಮ ಕಾಂಗ್ರೆಸ್ ಪಕ್ಷದ ಬೆನ್ನೆಲುಬಾಗಿದ್ದಾರೆ ಎಂದು ಜಬ್ಬಾರ್ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.






