ಖರ್ಗೆ ಭಾಷಣದ ಸ್ಥಳದಲ್ಲಿ ʼಶುದ್ದೀಕರಣʼ ಆರೋಪ: ಮೇಲ್ಮನೆಯಲ್ಲಿ ಖಂಡನಾ ನಿರ್ಣಯ ಅಂಗೀಕಾರ

ಬೆಂಗಳೂರು : ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಹೋಮ-ಹವನದ ಮೂಲಕ ಶುದ್ದೀಕರಿಸಿ ಸಾರ್ವಜನಿಕವಾಗಿ ಅಸ್ಪೃಶ್ಯತೆ ಆಚರಣೆ ಮಾಡಿರುವುದನ್ನು ಖಂಡಿಸಿ ವಿಧಾನ ಪರಿಷತ್ತಿನಲ್ಲಿ ಸೋಮವಾರ ಮಂಡಿಸಿದ ಖಂಡನಾ ನಿರ್ಣಯ ಅಂಗೀಕಾರಗೊಂಡಿದೆ.
ಕಾಂಗ್ರೆಸ್ ಸದಸ್ಯ ಎಫ್.ಎಚ್.ಜಕ್ಕಪ್ಪನವರ್ ನಿರ್ಣಯವನ್ನು ಮಂಡಿಸಿ, ಆ.8ರಂದು ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ಸಾರ್ವಜನಿಕ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಮಾತನಾಡಿ ತೆರಳಿದ ಬಳಿಕ, ಕೆಲವರು ಆ.10ರಂದು ಅದೇ ಸ್ಥಳದಲ್ಲಿ ಶುದ್ಧೀಕರಣ ಹವನ ನಡೆಸಿದ್ದಾರೆ. ಇದು ಅಸ್ಪೃಶ್ಯತೆ ಕರಾಳತೆಯಾಗಿದ್ದು, ಈ ಘಟನೆಯ ಕುರಿತು ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ನಿರ್ಣಯ ಮಂಡನೆಯ ಸಂದರ್ಭದಲ್ಲಿ ಆಡಳಿತ ಪಕ್ಷದ ಸದಸ್ಯರು ಎದ್ದು ನಿಂತು, ದಲಿತ ಸಮುದಾಯವನ್ನು ಸಾರ್ವಜನಿಕವಾಗಿ ಅವಮಾನಿಸುವ ಹಾಗೂ ಹೊರಗಿಡುವ ಪ್ರಯತ್ನ ನಡೆದಿದೆ ಎಂದು ಆರೋಪಿಸಿದರು.
ಇದೇ ವೇಳೆಯಲ್ಲಿ, ಸಭಾನಾಯಕ ಡಾ.ಯತೀಂದ್ರ ಮಾತನಾಡಿ, ವಾಲ್ಮೀಕಿ ನಿಗಮದ ವಿಚಾರವಾಗಿ ಮಾತನಾಡುವ ಬಿಜೆಪಿಯವರು, ಸಾರ್ವಜನಿಕವಾಗಿ ಅಸ್ಪೃಶ್ಯತೆ ಆಚರಣೆ ನಡೆದಿರುವ ಬಗ್ಗೆ ಏಕೆ ಮೌನವಾಗಿದ್ದಾರೆ? ಯಾವ ನೈತಿಕತೆಯ ಆಧಾರದಲ್ಲಿ ವಾಲ್ಮೀಕಿ ನಿಗಮದ ಬಗ್ಗೆ ಮಾತನಾಡುತ್ತೀರಿ? ಎಂದು ಪ್ರಶ್ನಿಸಿದರು.
ಇದಕ್ಕೆ ಪ್ರತಿಯಾಗಿ ಬಿಜೆಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರ ನಡುವೆ ಆರೋಪ-ಪ್ರತ್ಯಾರೋಪ ನಡೆಯಿತು. ಕೆಲಕಾಲ ಸದನದಲ್ಲಿ ಗದ್ದಲದ ವಾತಾವರಣ ನಿರ್ಮಾಣವಾಯಿತು. ನಂತರ ಉಭಯ ಪಕ್ಷಗಳ ಸದಸ್ಯರ ವಾಗ್ವಾದದ ನಡುವೆಯೇ ಸಭಾಪತಿ ಸಲೀಂ ಅಹ್ಮದ್ ಖಂಡನಾ ನಿರ್ಣಯವನ್ನು ಅಂಗೀಕರಿಸಿದರು.






