NEET ಸೀಟು | ದಲ್ಲಾಳಿಗಳ ಮೋಸಕ್ಕೆ ಬಲಿಯಾಗಬೇಡಿ : ಸಚಿವ ಶರಣಪ್ರಕಾಶ್ ಪಾಟೀಲ್
"ಕೆಇಎ ವತಿಯಿಂದಲೇ ಸೀಟುಗಳ ಹಂಚಿಕೆ ಕ್ರಮಬದ್ಧವಾಗಿ ಆಗುತ್ತದೆ"

ಡಾ.ಶರಣಪ್ರಕಾಶ್ ಪಾಟೀಲ್
ಬೆಂಗಳೂರು : ವೈದ್ಯರಾಗಬೇಕೆಂಬ ಭವಿಷ್ಯದ ಕನಸು ಹೊತ್ತು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಯಾವುದೇ ಕಾರಣಕ್ಕೂ ಮಧ್ಯವರ್ತಿಗಳ ಮೋಸದ ಜಾಲಕ್ಕೆ ಬೀಳಬಾರದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಕರೆ ನೀಡಿದ್ದಾರೆ.
ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಚಿವರು, ಅತ್ಯುತ್ತಮವಾಗಿ ಓದಿ, ಪರೀಕ್ಷೆ ಬರೆದಿರುವ ಆಕಾಂಕ್ಷಿಗಳು, ಸೀಟು ಪಡೆಯಲೇಬೇಕು ಎಂಬ ಆತಂಕದಿಂದ ಮೋಸದ ಜಾಲಕ್ಕೆ ಬೀಳಬಾರದು ಎಂದು ಎಚ್ಚರಿಸಿದ್ದಾರೆ.
ವೈದ್ಯಕೀಯ ಸೀಟು ಕೊಡಿಸುತ್ತೀವೆ, ಆ ಕಾಲೇಜಿನಲ್ಲಿ ಸೀಟು ಸಿಗುತ್ತೆ, ನಮಗೆ ಅವರು ಗೊತ್ತಿದ್ದಾರೆ, ಇವರು ಗೊತ್ತಿದ್ದಾರೆ ಎಂದು ಹೇಳಿ ಸೀಟು ಕೊಡಿಸುವ ಭರವಸೆ ನೀಡಿ ಮರಳು ಮಾಡುವವರ ಸಂಖ್ಯೆ ಹೆಚ್ಚಾಗಿದೆ ಎಂದು ತಿಳಿಸಿದರು.
ನೀಟ್ ಫಲಿತಾಂಶಗಳು ಈಗಾಗಲೇ ಪ್ರಕಟವಾಗಿವೆ. ಕರ್ನಾಟಕದಲ್ಲಿ 1,47,782 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. 1,42,369 ವಿದ್ಯಾರ್ಥಿಗಳು ಹಾಜರಾಗಿದ್ದರು, ಈ ಪೈಕಿ 83,582 ಅರ್ಹತೆ ಪಡೆದುಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಕೆಇಎಯಿಂದ ಸೀಟು ಹಂಚಿಕೆ :
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವತಿಯಿಂದಲೇ ಸೀಟುಗಳ ಹಂಚಿಕೆ ಕ್ರಮಬದ್ಧವಾಗಿ ಆಗುತ್ತದೆ. ಅದರಂತೆ ನಿಯಮಗಳನ್ನು ಪಾಲಿಸಿ. ವಿದ್ಯಾರ್ಥಿಗಳು ಮತ್ತು ಪೋಷಕರು ಇದನ್ನು ತಪ್ಪದೇ ತಿಳಿದುಕೊಳ್ಳಬೇಕು ಎಂದು ಸಚಿವರು ವಿವರಿಸಿದ್ದಾರೆ.
ದಲ್ಲಾಳಿಗಳಿಗೆ ಎಚ್ಚರಿಕೆ :
ಸೀಟು ಕೊಡಿಸುತ್ತೇನೆಂದು ವಿದ್ಯಾರ್ಥಿಗಳು ಅಥವಾ ಪೋಷಕರನ್ನು ದಿಕ್ಕು ತಪ್ಪಿಸಿ ಮೋಸ ಮಾಡಿದವರು ಕಂಡುಬಂದರೆ, ಅಂಥ ದಲ್ಲಾಳಿಗಳನ್ನು ಪತ್ತೆ ಹಚ್ಚಿ, ಕಾನೂನು ರೀತಿಯಲ್ಲಿ ಕಠಿಣ ಕ್ರಮ ಜಾರಿಗೊಳಿಸಲಾಗುವುದು. ವಿದ್ಯಾರ್ಥಿಗಳು ಮತ್ತು ಪೋಷಕರ ಭವಿಷ್ಯದ ಜೊತೆ ಚೆಲ್ಲಾಟವಾಡುವುದನ್ನು ಸಹಿಸುವುದಿಲ್ಲ. ಮಧ್ಯವರ್ತಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ.







