‘ಬಿಡದಿ ಟೌನ್ಶಿಪ್ ಯೋಜನೆಗೆ ವಿರೋಧ’ | ಆ.9 ರಿಂದ 11ರ ವರೆಗೆ ಜೆಡಿಎಸ್ ಪಾದಯಾತ್ರೆ : ನಿಖಿಲ್ ಕುಮಾರಸ್ವಾಮಿ

ರಾಮನಗರ: ಬಿಡದಿ ಟೌನ್ಶಿಪ್ ಯೋಜನೆಯನ್ನು ವಿರೋಧಿಸಿ ಜೆಡಿಎಸ್ ವತಿಯಿಂದ ಆ.9 ರಿಂದ 11ರವರೆಗೆ ಬೈರಮಂಗಲದಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದವರೆಗೆ 38 ಕಿ.ಮೀ ಬೃಹತ್ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.
ರವಿವಾರ ರಾಮನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬೈರಮಂಗಲದಿಂದ ಸ್ವಾತಂತ್ರ್ಯ ಉದ್ಯಾನವನದವರೆಗೆ ರೈತರ ಜೊತೆ ಪಾದಯಾತ್ರೆ ಮಾಡುತ್ತೇವೆ. ಈ ಮೂಲಕ ಸರಕಾರಕ್ಕೆ ಬಿಸಿ ಮುಟ್ಟಿಸಲು ಪ್ರಯತ್ನ ಮಾಡುತ್ತಿದ್ದೇವೆ ಎಂದು ಹೇಳಿದರು.
ಸರಕಾರಕ್ಕೆ ಕಣ್ಣು ಕಾಣುತ್ತಿಲ್ಲ, ಕಿವಿಯೂ ಕೇಳುತ್ತಿಲ್ಲ: ರೈತರು ಸಂಪೂರ್ಣವಾಗಿ ಈ ಟೌನ್ಶಿಪ್ ಯೋಜನೆಯನ್ನು ವಿರೋಧಿಸುತ್ತಿದ್ದಾರೆ. ಆದರೆ ಈ ಸರಕಾರಕ್ಕೆ ಕಣ್ಣು ಕಾಣುತ್ತಿಲ್ಲ, ಕಿವಿಯೂ ಕೇಳುತ್ತಿಲ್ಲ. ರೈತರ ವಿರುದ್ಧ ಸರಕಾರದ ನಡೆ ಇದೆ. ಹಾಗಾಗಿ ನಾವು ರೈತರ ಪರ ನಿಲ್ಲುವ ಕೆಲಸ ಮಾಡುತ್ತಿದ್ದೇವೆ ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದರು.
ಜು.30 ರಿಂದ ಆ.1 ರವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಆದರೆ ನಮ್ಮ ಅಜ್ಜಿ ಚನ್ನಮ್ಮ ಅವರ ಅಗಲಿಕೆಯ ಹಿನ್ನೆಲೆಯಲ್ಲಿ ಪಾದಯಾತ್ರೆಯನ್ನು ಮುಂದೂಡಲಾಗಿತ್ತು, ಆದರೆ ಈಗ ಆ.9 ರಿಂದ 11 ರವರೆಗೆ 3 ದಿನಗಳ ಕಾಲ ಪಾದಯಾತ್ರೆ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದರು.
ಪಾದಯಾತ್ರೆಯಲ್ಲಿ ರಾಮನಗರ ಜಿಲ್ಲೆಯ ಐದು ತಾಲೂಕಿನ ಕಾರ್ಯಕರ್ತರು, ಮುಖಂಡರು ಹಾಗೂ ರೈತರು ಪಾದಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಪಕ್ಷದ ಹಾಲಿ ಮತ್ತು ಮಾಜಿ ಶಾಸಕರು ಕೂಡ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.
ಜೊತೆಗೆ ರೈತರ ಪರವಾಗಿ ಕಾನೂನು ಹೋರಾಟವನ್ನೂ ಮಾಡುತ್ತಿದ್ದೇವೆ. ಸೋಮವಾರದಿಂದ ಈ ಪ್ರಕ್ರಿಯೆ ಆರಂಭವಾಗಲಿದ್ದು, ಯಾವೆಲ್ಲ ದಾಖಲಾತಿಗಳನ್ನು ಕೊಡಬೇಕು ಎಂಬುದರ ಕುರಿತು ವಕೀಲರಿಂದ ಮಾಹಿತಿ ಪಡೆಯುತ್ತಿದ್ದೇವೆ. ನ್ಯಾಯಾಲಯ ಕೂಡ ರೈತರ ಪರವಾಗಿ ನಿಲ್ಲುವ ಭರವಸೆ ಇದೆ ಎಂದು ಅವರು ತಿಳಿಸಿದರು.
ಬಿಡದಿ ಪಾದಯಾತ್ರೆ ವಿಚಾರದಲ್ಲಿ ಬಿಜೆಪಿಯ ಯಾರೂ ನಮ್ಮ ಜೊತೆ ಚರ್ಚೆ ಮಾಡಿಲ್ಲ. ಈ ಬಗ್ಗೆ ಕುಮಾರಸ್ವಾಮಿ ಅವರ ಜೊತೆಯಾಗಲಿ, ನನ್ನ ಜೊತೆಯಾಗಲಿ ಚರ್ಚೆ ಮಾಡಿಲ್ಲ ಎಂದು ಪ್ರಶ್ನೆಯೊಂದಕ್ಕೆ ಅವರು ಅವರು ಉತ್ತರಿಸಿದರು.
ಆ.13 ಕರ್ನಾಟಕ ಬಂದ್ಗೆ ಬೆಂಬಲ: ಆ.13ರಂದು ಕರ್ನಾಟಕ ಬಂದ್ಗೆ ಹಲವಾರು ಸಂಘಟನೆಗಳು, ರೈತಪರ ಹೋರಾಟಗಾರರು ಕರೆ ಕೊಟ್ಟಿದ್ದಾರೆ. ಯಾವಾಗ ಸರಕಾರಗಳು ಸರಿಯಾಗಿ ಸ್ಪಂದಿಸುವುದಿಲ್ಲವೋ ಆಗ ಬಂದ್ಗಳು ಆಗುತ್ತವೆ. ಹಾಗಾಗಿ ಅವರ ಜೊತೆಯಲ್ಲಿ ಜೆಡಿಎಸ್ ಕೂಡ ನಿಲ್ಲುತ್ತದೆ. ಕರ್ನಾಟಕ ಬಂದ್ಗೆ ಬೆಂಬಲ ವ್ಯಕ್ತಪಡಿಸುತ್ತೇವೆ ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದರು.






