ಎಸ್.ಜಿ.ಸಿದ್ದರಾಮಯ್ಯ, ಮೂಡ್ನಾಕೂಡು ಚಿನ್ನಸ್ವಾಮಿ, ಸರಜೂ ಕಾಟ್ಕರ್ ಅವರಿಗೆ ʼನೃಪತುಂಗ ಪ್ರಶಸ್ತಿʼ

ಎಸ್.ಜಿ. ಸಿದ್ದರಾಮಯ್ಯ, ಮೂಡ್ನಾಕೂಡು ಚಿನ್ನಸ್ವಾಮಿ, ಸರಜೂ ಕಾಟ್ಕರ್
ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಸಹಯೋಗದಲ್ಲಿ ನೀಡುವ 'ನೃಪತುಂಗ ಸಾಹಿತ್ಯ ಪ್ರಶಸ್ತಿ'ಗೆ ಹಿರಿಯ ಸಾಹಿತಿಗಳಾದ ಫ್ರೊ.ಎಸ್.ಜಿ.ಸಿದ್ದರಾಮಯ್ಯ, ಮೂಡಾಕೂಡು ಚಿನ್ನಸ್ವಾಮಿ, ಸರಜೂ ಕಾಟ್ಕರ್ ಅವರು ಆಯ್ಕೆಯಾಗಿದ್ದಾರೆ.
ಈ ಮೂವರು ಸಾಹಿತಿಗಳನ್ನು 2023, 2024 ಮತ್ತು 2025ನೇ ಸಾಲಿಗೆ ಈ ಆಯ್ಕೆ ಮಾಡಲಾಗಿದ್ದು, ಪ್ರಶಸ್ತಿಯು ತಲಾ 7 ಲಕ್ಷ ರೂ. ನಗದು ಮತ್ತು ಪ್ರಮಾಣಪತ್ರವನ್ನು ಒಳಗೊಂಡಿದೆ.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಕನ್ನಡ ಸಾಹಿತ್ಯ ಪರಿಷತ್ ನಲ್ಲಿ ಒಂದೂವರೆ ಕೋಟಿ ರೂ. ದತ್ತಿನಿಧಿಯನ್ನು ಸ್ಥಾಪಿಸಿ, ಅದರಿಂದ ಬರುವ ಬಡ್ಡಿ ಹಣದಲ್ಲಿ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಮೃದ್ಧ ಹಾಗೂ ಮೌಲಿಕ ಕೊಡುಗೆ ನೀಡಿದ ಸಾಹಿತಿಗಳನ್ನು ನೃಪತುಂಗ ಪ್ರಶಸ್ತಿಗೆ ಆಯ್ಕೆ ಮಾಡುತ್ತಿದೆ.
ಕನ್ನಡ ಸಾಹಿತ್ಯ ಪರಿಷತ್ ಆಡಳಿತಾಧಿಕಾರಿ ಕೆ.ಎ. ದಯಾನಂದ ಅವರ ನೇತೃತ್ವದ ಸಮಿತಿ ಫ್ರೊ.ಎಸ್.ಜಿ.ಸಿದ್ದರಾಮಯ್ಯ, ಮೂಡಾಕೂಡು ಚಿನ್ನಸ್ವಾಮಿ, ಸರಜೂ ಕಾಟ್ಕರ್ ಅವರನ್ನು ನೃಪತುಂಗ ಪ್ರಶಸ್ತಿಗೆ ಆಯ್ಕೆ ಮಾಡಿದೆ ಎಂದು ಪ್ರಕಟನೆ ತಿಳಿಸಿದೆ.




