ಚಿತ್ತಾಪುರದಲ್ಲಿ ಪಥ ಸಂಚಲನಕ್ಕೆ ಅನುಮತಿ; ಆರೆಸ್ಸೆಸ್ಗೆ ಈಗ ಸಂವಿಧಾನದ ಶಕ್ತಿ ಅರ್ಥವಾಗಿದೆ : ಪ್ರಿಯಾಂಕ್ ಖರ್ಗೆ

ಪ್ರಿಯಾಂಕ್ ಖರ್ಗೆ | PC : PTI
ಬೆಂಗಳೂರು : ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರೆಸ್ಸೆಸ್ ನಡೆಸಲು ಉದ್ದೇಶಿಸಿದ್ದ ಪಥ ಸಂಚಲನಕ್ಕೆ ಹೈಕೋರ್ಟ್ ಷರತ್ತುಬದ್ಧ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿರುವ ಸಚಿವ ಪ್ರಿಯಾಂಕ್ ಖರ್ಗೆ, ʼಆರೆಸ್ಸೆಸ್ಗೆ ಈಗ ಸಂವಿಧಾನದ ಶಕ್ತಿ ಅರ್ಥವಾಗಿದೆʼ ಎಂದು ಹೇಳಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಬರೆದುಕೊಂಡಿರುವ ಅವರು, ಯಾವ ಸಂಘಗಳೇ ಆಗಲಿ ಸಂವಿಧಾನದ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ನಿಯಮಗಳಿಗೆ ಅತೀತರಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಸಂವಿಧಾನಕ್ಕೆ ತಲೆಬಾಗಿದರೆ ಮಾತ್ರ ಬದುಕು ಸುಂದರ. ಸಂವಿಧಾನಕ್ಕೆ ಸವಾಲು ಹಾಕಿದರೆ ಬದುಕು ದುಸ್ಥರ!. ಆರೆಸ್ಸೆಸ್ ಎಂಬ ಸಂಘಟನೆಗೆ ಈ ಸತ್ಯದ ಅರಿವಾಗಿದೆ ಎಂದು ಭಾವಿಸಿದ್ದೇನೆ. ಸಂವಿಧಾನ, ಕಾನೂನುಗಳು ನಮಗೆ ಅನ್ವಯಿಸುವುದಿಲ್ಲ ಎಂಬಂತೆ ನಡೆದುಕೊಳ್ಳುತ್ತಿದ್ದ ಆರೆಸ್ಸೆಸ್ಗೆ ಈಗ ಸಂವಿಧಾನದ ಶಕ್ತಿ ಅರ್ಥವಾಗಿದೆ ಎಂದು ಉಲ್ಲೇಖಿಸಿದ್ದಾರೆ.
ಯಾವುದೇ ಸಂಘಗಳು, ವ್ಯಕ್ತಿಗಳು ಇದನ್ನು ಅರ್ಥೈಸಿಕೊಂಡು ನೀತಿ, ನಿಯಮಗಳಿಗೆ ಬದ್ಧರಾಗಿ ನಡೆಯಬೇಕು. ಸರಕಾರ ಮತ್ತು ಕಲಬುರಗಿ ಜಿಲ್ಲಾಡಳಿತ ರೂಪಿಸಿರುವ ಮಾನದಂಡಗಳನ್ನು ಒಪ್ಪಿ, ನಿಯಮಗಳಿಗೆ ಅನುಸಾರವಾಗಿ ಆರೆಸ್ಸೆಸ್ ತಮ್ಮ ಕಾರ್ಯಕ್ರಮ ನಡೆಸಬೇಕು ಇದರ ಹೊರತಾಗಿ ಯಾವುದೇ ಅತಿ ಬುದ್ದಿವಂತಿಕೆಗೂ ಅವಕಾಶವಿಲ್ಲ ಎಂದು ಹೇಳಿದ್ದಾರೆ.
"300 ಜನರು ಮಾತ್ರ ಭಾಗವಹಿಸಬೇಕು, ಸರಕಾರ ನಿಗದಿಪಡಿಸಿದ ಸ್ಥಳಗಳಲ್ಲಿ ಮಾತ್ರ ಅವಕಾಶ, ಚಿತ್ತಾಪುರದ ಹೊರಗಿನವರು ಭಾಗಿಯಾಗುವಂತಿಲ್ಲ, ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ಮಾಡಿಕೊಡುವಂತಿಲ್ಲ". ಈ ನಿಯಮಗಳ ಮೂಲಕ ಸರಕಾರ ತೋರಿದ ಉದಾರತೆಯನ್ನು, ಕಲಬುರಗಿ ಜಿಲ್ಲಾಡಳಿತ ತೋರಿದ ಸಹನೆಯನ್ನು ಗೌರವಿಸಿ ತಮ್ಮ ಕಾರ್ಯಕ್ರಮವನ್ನು ಪೂರೈಸಿಕೊಳ್ಳಬೇಕು ಎಂದಿದ್ದಾರೆ.







