ಪ.ಬಂಗಾಳ, ಅಸ್ಸಾಂ ಮಾದರಿಯಲ್ಲೇ ಕರ್ನಾಟಕದಲ್ಲೂ ಆಯೋಗ ದುರುಪಯೋಗಪಡಿಸಿಕೊಂಡು ಗೆಲ್ಲಲು ಹುನ್ನಾರ : ಪ್ರಿಯಾಂಕ್ ಖರ್ಗೆ

ಬೆಂಗಳೂರು : ‘ಪಶ್ಚಿಮ ಬಂಗಾಳ, ಅಸ್ಸಾಂ ಮಾದರಿಯಲ್ಲೇ ಚುನಾವಣಾ ಆಯೋಗವನ್ನು ದುರುಪಯೋಗಪಡಿಸಿಕೊಂಡು ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲೂ ಗೆಲ್ಲಲು ಬಿಜೆಪಿ ಹುನ್ನಾರ ನಡೆಸಲಿದೆ’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ಎಚ್ಚರಿಸಿದ್ದಾರೆ.
ಮಂಗಳವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಚುನಾವಣಾ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ನಾಶ ಮಾಡಿದ್ದಾರೆ. ಚುನಾವಣಾ ಆಯೋಗವನ್ನು ತನ್ನ ಜೇಬಿನಲ್ಲಿ ಇಟ್ಟುಕೊಂಡು ದುರುಪಯೋಗಪಡಿಸಿಕೊಂಡಿದ್ದಾರೆ. ಅಸ್ಸಾಂ ಮತ್ತು ಪಶ್ಚಿಮ ಬಂಗಾಲದಲ್ಲಿ ಬಿಜೆಪಿಯ ಗೆಲುವಲ್ಲ, ಚುನಾವಣಾ ಆಯೋಗದ ಗೆಲುವು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಹಾರಾಷ್ಟ್ರ, ಮಧ್ಯಪ್ರದೇಶ, ಹರ್ಯಾಣ ಮಾದರಿಯಲ್ಲೇ ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲೂ ವ್ಯವಸ್ಥೆಯನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಅಸ್ಸಾಂನಲ್ಲಿ ಕ್ಷೇತ್ರ ಪುನರ್ ವಿಂಗಡಣೆಯ ಮೂಲಕ ಗೊಂದಲ ಮೂಡಿಸಲಾಗಿದೆ. ಪಶ್ಚಿಮ ಬಂಗಾಳದಲ್ಲಿ ಮತದಾರ ಪಟ್ಟಿ ವಿಶೇಷ ಪರಿಷ್ಕರಣೆ(ಎಸ್ಐಆರ್) ಹೆಸರಿನಲ್ಲಿ ಒಂದು ಕೋಟಿ ಮತದಾರರನ್ನು ಪಟ್ಟಿಯಿಂದ ತೆಗೆದು ಹಾಕಲಾಗಿದೆ. 28ಲಕ್ಷ ಜನ ಅರ್ಹರು ನ್ಯಾಯಾಧೀಕರಣಕ್ಕೆ ಮೇಲ್ಮನವಿ ಸಲ್ಲಿಸಿದರು, ಆದರೆ ಅವರ ವಾದವನ್ನೇ ಆಲಿಸಲಿಲ್ಲ ಎಂದು ಅವರು ಆರೋಪಿಸಿದರು.
ತಮಿಳುನಾಡಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿರೀಕ್ಷೆಗಿಂತ ಕಡಿಮೆ ಸ್ಥಾನಗಳು ಬಂದಿವೆ. ಆದರೆ ಜನರ ತೀರ್ಪಿಗೆ ತಲೆಬಾಗಲೇಬೇಕಿದೆ. ಸಂಪೂರ್ಣವಾಗಿ ಯಾರಿಗೂ ಬಹುಮತ ಬಂದಿಲ್ಲ. ಮುಂದಿನ ದಿನಗಳಲ್ಲಿ ಏನು ಮಾಡಬೇಕು ಎಂಬುದನ್ನು ಹೈಕಮಾಂಡ್ ನಾಯಕರ ಚರ್ಚೆ ಮಾಡಿ ನಿರ್ಧಾರ ಮಾಡಲಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು.
ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ಗೆ ಇನ್ನೂ ಹೆಚ್ಚಿನ ಮತಗಳು ಬರಬೇಕಿತ್ತು. ಆದರೆ, ಕಾಂಗ್ರೆಸ್ ಪಕ್ಷಕ್ಕೆ ಗೆಲುವು ಸಿಕ್ಕಿದೆ. ಒಂದು ಮತದಿಂದ ಗೆದ್ದಿದ್ದರೂ ವಿಧಾನಸೌಧದಲ್ಲಿ ಶಾಸಕರಾಗಿರುತ್ತಾರೆ. ಅಂತರ ಕಡಿಮೆಯಾಗಿರುವುದಕ್ಕೆ ಪಕ್ಷದ ಆಂತರಿಕವಾಗಿ ಚರ್ಚೆ ನಡೆಸಲಾಗುವುದು ಎಂದು ಅವರು ತಿಳಿಸಿದರು.






