ಮುಖ್ಯಮಂತ್ರಿ ಹುದ್ದೆ ಕೊಟ್ಟರೂ ನಿಭಾಯಿಸುವೆ: ಡಾ.ಜಿ. ಪರಮೇಶ್ವರ್

ಬೆಂಗಳೂರು: ‘ಮುಖ್ಯಮಂತ್ರಿ ಸ್ಥಾನವೂ ಸೇರಿದಂತೆ ಯಾವುದೇ ಹುದ್ದೆಯನ್ನು ಕೊಟ್ಟರೂ ನಿಭಾಯಿಸುವ ಸಾಮರ್ಥ್ಯ ನನಗಿದೆ’ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ತಿಳಿಸಿದ್ದಾರೆ.
ಶನಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಗೃಹ ಸಚಿವನಾಗಿ ಇದುವರೆಗೆ ನಾನು ಅತ್ಯಂತ ಸಮರ್ಥವಾಗಿ ಕಾರ್ಯನಿರ್ವಹಿಸಿದ್ದೇನೆ. ಗೃಹ ಸಚಿವನಾಗಿರುವುದಕ್ಕೆ ನನಗೆ ಯಾವುದೇ ಬೇಸರವಿಲ್ಲ. ಗೃಹ ಖಾತೆಯ ಜೊತೆಗೆ ಹೆಚ್ಚುವರಿ ಜವಾಬ್ದಾರಿ ವಹಿಸಿದರೂ ನಿರ್ವಹಿಸುತ್ತೇನೆ ಎಂದು ನುಡಿದರು.
ಗೃಹ ಖಾತೆ ಬದಲಾಯಿಸುವಂತೆ ನಾನು ಯಾರನ್ನೂ ಕೇಳಿಲ್ಲ. ಶಾಸಕರು ಸಚಿವ ಸ್ಥಾನ ನೀಡುವಂತೆ ಕೇಳುವುದರಲ್ಲಿ ಯಾವುದೇ ತಪ್ಪಿಲ್ಲ. ಎರಡು-ಮೂರು ಬಾರಿ ಶಾಸಕರಾಗಿರುವವರಿಗೆ ಸಚಿವರಾಗಬೇಕೆಂಬ ಅಪೇಕ್ಷೆ ಸಹಜ. ಹೀಗಾಗಿ ಹೈಕಮಾಂಡ್ ಮೇಲೆ ಅವರು ಒತ್ತಡ ಹೇರಬಹುದು. ಕೆಲ ಹಿರಿಯ ಸಚಿವರನ್ನು ಸಂಪುಟದಿಂದ ಕೈಬಿಡುವುದು ಹೈಕಮಾಂಡ್ಗೆ ಬಿಟ್ಟ ವಿಚಾರ ಎಂದು ಪರಮೇಶ್ವರ್ ತಿಳಿಸಿದರು.
ಬಕ್ರೀದ್ ಆಚರಣೆ ಸಂದರ್ಭದಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಮಸ್ಯೆ ಸೃಷ್ಟಿಯಾಗದಂತೆ ಪೊಲೀಸರು ಎಚ್ಚರ ವಹಿಸಲಿದ್ದಾರೆ ಎಂದ ಪರಮೇಶ್ವರ್, ರೈತರು ಹಾಗೂ ಕನ್ನಡಪರ ಸಂಘಟನೆಗಳ ಮುಖಂಡರ ಮೇಲೆ ದಾಖಲಾಗಿದ್ದ ಮೊಕದ್ದಮೆಗಳನ್ನು ಹಿಂಪಡೆಯಲಾಗಿದೆ. ಬಹಳ ಹಿಂದಿನಿಂದಲೂ ಇದು ನಡೆದುಕೊಂಡು ಬಂದಿದೆ ಎಂದರು.




