ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ರಿಝ್ವಾನ್ ಆರ್ಶದ್, ಝಮೀರ್ ಅಹ್ಮದ್ ಖಾನ್: ಕಿರು ಪರಿಚಯ ಇಲ್ಲಿದೆ....

ಬೆಂಗಳೂರು : ಡಿ.ಕೆ.ಶಿವಕುಮಾರ್ ಸಂಪುಟದ ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮವು ಲೋಕಭನದ ಗಾಜಿನ ಮನೆಯಲ್ಲಿ ಇಂದು(ಸೋಮವಾರ) ನೆರವೇರಿತು.ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋಟ್ ಅವರು 19 ಶಾಸಕರಿಗೆ ಸಚಿವರಾಗಿ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.
ರಿಝ್ವಾನ್ ಆರ್ಶದ್:
ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕ ರಿಝ್ವಾನ್ ಆರ್ಶದ್ ಅವರು ಬಿ.ಕಾಂ ಪದವೀಧರರಾಗಿದ್ದು, 1995-96ರಲ್ಲಿ ಎನ್ಎಸ್ಯುಐ ಮೂಲಕ ತಮ್ಮ ರಾಜಕೀಯ ಜೀವನ ಆರಂಭಿಸಿದರು.
ಮೈಸೂರು ವಿಶ್ವ ವಿದ್ಯಾನಿಲಯದ ಸೆನೆಟ್ ಸದಸ್ಯರಾಗಿದ್ದ ಇವರು, ವಿಧಾನ ಪರಿಷತ್ತಿನ ಸದಸ್ಯರೂ ಆಗಿದ್ದರು. ಡಿಸೆಂಬರ್ 2019ರಲ್ಲಿ ನಡೆದ ಶಿವಾಜಿನಗರ ಉಪ ಚುನಾವಣೆಯಲ್ಲಿ ಗೆದ್ದು ಪ್ರಥಮ ಬಾರಿಗೆ ಶಾಸಕರಾಗಿ ಆಯ್ಕೆಯಾದ ಇವರು ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದರು.
2014 ಮತ್ತು 2019ರಲ್ಲಿ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿಯೂ ಸ್ಪರ್ಧಿಸಿ ಬಿಜೆಪಿ ಅಭ್ಯಥಿ ಪಿ.ಸಿ.ಮೋಹನ್ ವಿರುದ್ಧ ಸೋಲು ಕಂಡಿದ್ದರು. ಮುಸ್ಲಿಮ್ ಸಮುದಾಯದ ಯುವ ನಾಯಕರಾಗಿ ಗುರುತಿಸಿಕೊಂಡಿರುವ ರಿಝ್ವಾನ್ ಅರ್ಶದ್ ಅವರು, ರಾಜಧಾನಿ ಬೆಂಗಳೂರಿನಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ ಸೇರ್ಪಡೆಯಾಗಿದ್ದಾರೆ.
ಝಮೀರ್ ಅಹ್ಮದ್ ಖಾನ್:
ಬೆಂಗಳೂರಿನ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಝೆಡ್.ಝಮೀರ್ ಅಹ್ಮದ್ ಖಾನ್, 2006ರಲ್ಲಿ ಮೊದಲ ಬಾರಿಗೆ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಸಮಿಶ್ರ ಸರಕಾರದಲ್ಲಿ ಹಜ್ ಮತ್ತು ವಕ್ಫ್ ಸಚಿವರಾಗಿದ್ದರು. 2018ರಲ್ಲಿಯೂ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಸಮಿಶ್ರ ಸರಕಾರದಲ್ಲಿ ಆಹಾರ, ನಾಗರಿಕ ಸರಬರಾಜು ಮತ್ತು ಅಲ್ಪಸಂಖ್ಯಾತರ ಕಲ್ಯಾಣ, ಇಲಾಖೆ ಸಚಿವರಾಗಿದ್ದರು. ಆನಂತರ, 2023ರಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದಲ್ಲಿ ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವರಾಗಿದ್ದರು.
ಝಮೀರ್ ಅಹ್ಮದ್ ಖಾನ್ ಅವರು, ದಾವಣಗೆರೆ ಕ್ಷೇತ್ರದ ಉಪಚುನಾವಣೆ ಅಭ್ಯರ್ಥಿ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ನೀಡಿದ್ದ ಹೇಳಿಕೆ ಪಕ್ಷದಲ್ಲಿ ಗೊಂದಲಕ್ಕೆ ಕಾರಣವಾಗಿತ್ತು. ಆ ಬಳಿಕ ಝಮೀರ್ ಅಹ್ಮದ್ರಿಗೆ ಸಚಿವ ಸ್ಥಾನ ಕೈತಪ್ಪಲಿದೆ ಎಂದು ವಿಶ್ಲೇಷಿಸಲಾಗಿತ್ತು. ಆದರೆ, ಅಂತಿಮವಾಗಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೂತನ ಸರಕಾರದಲ್ಲಿಯೂ ಸಚಿವ ಸ್ಥಾನ ಒಲಿದಿದೆ.






