ಮಹಿಳೆಯರಿಗೆ ಪ್ರತ್ಯೇಕ ‘ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ’ ಆರಂಭ: ಸಚಿವ ಡಾ.ಶರಣಪ್ರಕಾಶ್ ಪಾಟೀಲ್

ಬೆಂಗಳೂರು: ಮಹಿಳೆಯರು ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಬಡ್ಡಿ ದಂಧೆಯ ಸುಳಿಗೆ ಸಿಲುಕುತ್ತಿದ್ದಾರೆ. ಇದನ್ನು ತಪ್ಪಿಸಲು ಸರಕಾರವೇ ಕನಿಷ್ಠ ಬಡ್ಡಿದರದಲ್ಲಿ ಸಾಲ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಶೀಘ್ರದಲ್ಲೇ ಮಹಿಳೆಯರಿಗಾಗಿ ಪ್ರತ್ಯೇಕ ‘ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ’ಯನ್ನು ಆರಂಭಿಸಲಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ.
ಶನಿವಾರ ಇಲ್ಲಿನ ಜಯಮಹಲ್ ಪ್ಯಾಲೇಸ್ ಆವರಣದಲ್ಲಿ ಕೇಂದ್ರ ಸರಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯ, ಕೌಶಲ್ಯಾಭಿವೃದ್ಧಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ(ಸಂಜೀವಿನಿ) ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿರುವ ರಾಷ್ಟ್ರಮಟ್ಟದ ‘ನಮ್ಮ ಸರಸ್ ಮೇಳ’ವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸೊಸೈಟಿ ಮೂಲಕ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳಿಗೆ ಸುಲಭ ಸಾಲ ಒದಗಿಸಿ, ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಬಲ ತುಂಬಲಾಗುವುದು ಎಂದರು.
ಮಹಿಳೆಯರ ಸಬಲೀಕರಣ ಮತ್ತು ಆರ್ಥಿಕ ಸ್ವಾವಲಂಬನೆಯಿಂದ ಮಾತ್ರ ಸಮಾಜದಲ್ಲಿ ನೈಜ ಬದಲಾವಣೆ ತರಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ದೇಶಾದ್ಯಂತ ಇರುವ ಸ್ವಸಹಾಯ ಸಂಘಗಳು ತಯಾರಿಸುವ ವೈವಿಧ್ಯಮಯ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ ಕಲ್ಪಿಸುವ ಉದ್ದೇಶದಿಂದ ಈ ಮೇಳವನ್ನು ಆಯೋಜಿಸಲಾಗಿದೆ. ಸಂಘದ ಸದಸ್ಯರಿಗೆ ಯಾವುದೇ ಶುಲ್ಕವಿಲ್ಲದೆ ಉಚಿತ ಮಳಿಗೆಗಳು, ಊಟ ಹಾಗೂ ವಸತಿ ಸೌಲಭ್ಯಗಳನ್ನು ಒದಗಿಸಿ, ಅವರು ತಮ್ಮ ಉತ್ಪನ್ನಗಳನ್ನು ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದರು.
ಹಿಂದನ ಬಾರಿ ಮಂಗಳೂರಿನಲ್ಲಿ ರಾಜ್ಯಮಟ್ಟದ ಮೇಳ ನಡೆಸಲಾಗಿತ್ತು. ಈ ವರ್ಷ ಬೆಂಗಳೂರಿನಲ್ಲಿ ರಾಷ್ಟ್ರಮಟ್ಟದ ಮೇಳದ ಜೊತೆಗೆ ಮೈಸೂರು ಸೇರಿದಂತೆ ಇನ್ನು ಎರಡು ಸ್ಥಳಗಳಲ್ಲಿ ರಾಜ್ಯಮಟ್ಟದ ‘ಸರಸ್ ಮೇಳ' ಆಯೋಜಿಸಲಾಗುವುದು. ಸಮಾಜದಲ್ಲಿ ಗ್ರಾಮೀಣ ಮಹಿಳೆಯರು ಸ್ವಾವಲಂಬಿಗಳಾಗಿ ಮತ್ತು ಗೌರವದಿಂದ ತಮ್ಮ ಕಾಲ ಮೇಲೆ ತಾವು ನಿಲ್ಲಲು ನಗರದ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಸರಸ್ ಮೇಳಕ್ಕೆ ಭೇಟಿ ನೀಡಿ, ಇಲ್ಲಿನ ಸ್ಥಳೀಯ ಉತ್ಪನ್ನಗಳನ್ನು ಖರೀದಿಸುವ ಮೂಲಕ ನೆರವಾಗಬೇಕು ಎಂದು ಅವರು ಕರೆ ಕೊಟ್ಟರು.
‘ಬೆಂಗಳೂರು ಸಂತೆ’ ಆರಂಭ: ಮಹಿಳಾ ಸ್ವಸಹಾಯ ಸಂಘಗಳ ಉತ್ಪನ್ನಗಳ ನಿರಂತರ ಮಾರಾಟಕ್ಕಾಗಿ ರೊಟೇಷನ್ ಮಾದರಿಯಲ್ಲಿ ಮಳಿಗೆಗಳನ್ನು ಒದಗಿಸುವ ‘ಬೆಂಗಳೂರು ಸಂತೆ’ ಎಂಬ ಕಾಯಂ ಮಾರುಕಟ್ಟೆ ವ್ಯವಸ್ಥೆಯನ್ನು ಮುಂದಿನ ಒಂದು ತಿಂಗಳಲ್ಲಿ ಬೆಂಗಳೂರಿನಲ್ಲಿ ಲೋಕಾರ್ಪಣೆ ಮಾಡಲಾಗುವುದು ಎಂದು ಡಾ. ಶರಣಪ್ರಕಾಶ್ ಪಾಟೀಲ್ ಮಾಹಿತಿ ನೀಡಿದರು.
ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗ ಸುಬೋಧ್ ಯಾದವ್ ಮಾತನಾಡಿ, ಕರ್ನಾಟಕ ಹಾಗೂ ಇತರೆ ರಾಜ್ಯಗಳ ಜಿಐ ಮಾನ್ಯತೆ ಪಡೆದ ಉತ್ಪನ್ನಗಳು ಗ್ರಾಮೀಣ ಮಹಿಳಾ ಉದ್ಯಮಿಗಳ ಕರಕುಶಲ, ಕೈಮಗ್ಗ, ಅಲಂಕಾರಿಕ ಗೃಹ ಉಪಯೋಗಿ ಉತ್ಪನ್ನಗಳನ್ನು ಒಟ್ಟು 150 ಮಳಿಗೆಗಳಲ್ಲಿ ಪ್ರದರ್ಶನಕ್ಕೆ ಇಡಲಾಗಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಸಮಾರಂಭದಲ್ಲಿ ರಾಷ್ಟ್ರೀಯ ಜೀವನೋಪಾಯ ಅಭಿಯಾನ ಅಭಿಯಾನ ನಿರ್ದೇಶಕರಾದ ವಾಸಿರೆಡ್ಡಿ ವಿಜಯ ಜ್ಯೋತ್ಸ್ನ, ಉದ್ಯೋಗ ಹಾಗೂ ಕೈಗಾರಿಕಾ ತರಬೇತಿ ಇಲಾಖೆಯ ಆಯುಕ್ತರಾದ ಶಿಲ್ಪ ಎಂ, ಸೇರಿದಂತೆ ಇತರೆ ಹಿರಿಯ ಅಧಿಕಾರಿಗಳು ಸ್ವಸಹಾಯ ಗುಂಪುಗಳ ಸದಸ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಗ್ಯಾರಂಟಿ ಯೋಜನೆಗಳ ಸಿಂಹಪಾಲು ಮಹಿಳೆಯರಿಗೆ: ‘ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಶಕ್ತಿ, ಅನ್ನಭಾಗ್ಯ ಸೇರಿದಂತೆ ಪ್ರಮುಖ ಯೋಜನೆಗಳ ಸಿಂಹಪಾಲು ಮಹಿಳೆಯರಿಗೆ ಮೀಸಲಾಗಿದೆ. ಮಹಿಳೆಯರ ಕೈಗೆ ಹಣ ತಲುಪಿದರೆ ಅದು ಕುಟುಂಬದ ಏಳಿಗೆ, ಮಕ್ಕಳ ಪೌಷ್ಟಿಕತೆ ಹಾಗೂ ಶಿಕ್ಷಣಕ್ಕೆ ಸದ್ವಿನಿಯೋಗವಾಗುತ್ತದೆ ಎಂಬುದು ಸರಕಾರದ ದೃಢ ವಿಶ್ವಾಸವಾಗಿದೆ’
-ಡಾ.ಶರಣಪ್ರಕಾಶ್ ಪಾಟೀಲ್, ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ






