ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ | ಇನ್ಫೊಸಿಸ್ನವರು ಬೃಹಸ್ಪತಿಗಳೇ? : ಸಿಎಂ ಸಿದ್ದರಾಮಯ್ಯ

ಬೆಂಗಳೂರು : "ಇನ್ಫೋಸಿಸ್ ಸಂಸ್ಥೆಯವರು ಅಂದರೆ ಅವರು ಬೃಹಸ್ಪತಿಗಳೇ ? ಸರಕಾರ ಮಾಡುತ್ತಿರುವುದು ಹಿಂದುಳಿದವರ ಸಮೀಕ್ಷೆಯಲ್ಲ ಎಂದು ಈಗಾಗಲೇ ಹೇಳಿದೆ. ಇದು ಎಲ್ಲಾ ಜನಸಂಖ್ಯೆಯನ್ನು ಒಳಗೊಂಡಂತೆ ಮಾಡುತ್ತಿರುವ ಸಮೀಕ್ಷೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಇನ್ಫೋಸಿಸ್ ಸಂಸ್ಥೆಯ ಮುಖ್ಯಸ್ಥರಾದ ಸುಧಾಮೂರ್ತಿ ಹಾಗೂ ನಾರಾಯಣಮೂರ್ತಿ ಅವರು ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಮಾಹಿತಿ ನೀಡುವುದಿಲ್ಲ, ನಾವು ಹಿಂದುಳಿದ ಜಾತಿಯವರಲ್ಲ ಎಂದು ದೃಢೀಕರಣ ಪತ್ರ ನೀಡಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಶಕ್ತಿ ಯೋಜನೆಯನ್ನು ಬಡವರು, ಮೇಲ್ಜಾತಿಯವರು ಎಲ್ಲರೂ ಬಳಸಿಕೊಳ್ಳುತ್ತಾರೆ. ಈ ಬಗ್ಗೆ ತಪ್ಪು ಮಾಹಿತಿ ಹೋಗಿದೆ. ಸರಕಾರ ಈ ಬಗ್ಗೆ ಜಾಹೀರಾತು, ಸಚಿವರು ಹಾಗೂ ಮುಖ್ಯಮಂತ್ರಿಗಳ ಸಂದೇಶಗಳನ್ನು ಜನರಿಗೆ ತಲುಪಿಸಿದೆ ಎಂದರು.
ಸಮೀಕ್ಷೆಯನ್ನು ಹಿಂದುಳಿದವರ ಸಮೀಕ್ಷೆಯೆಂದು ಭಾವಿಸುವುದು ತಪ್ಪು. ಮುಂದಿನ ದಿನಗಳಲ್ಲಿ ಕೇಂದ್ರ ಸರಕಾರವೂ ಜಾತಿಗಣತಿಯನ್ನು ಮಾಡುತ್ತದೆ, ಆಗಲೂ ಇವರು ಸಹಕರಿಸುವುದಿಲ್ಲವೇ? ಅವರಿಗಿರುವ ತಪ್ಪು ಮಾಹಿತಿಯಿಂದಾಗಿ ಈ ರೀತಿ ಅಸಹಕಾರ ತೋರುತ್ತಿರಬಹುದು. ರಾಜ್ಯದಲ್ಲಿ ಸುಮಾರು 7 ಕೋಟಿ ಜನಸಂಖ್ಯೆಯಿದ್ದು, ಈ ಜನರ ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಸಮೀಕ್ಷೆಯಾಗಿದೆ ಎಂದರು.
ಬಿಹಾರ ಚುನಾವಣೆಯಲ್ಲಿ ಇಂಡಿಯಾ ಬ್ಲಾಕ್ ಗೆಲ್ಲಲಿದೆ : ಸಿಎಂ ವಿಶ್ವಾಸ
ಬಿಹಾರ ರಾಜ್ಯದ ಚುನಾವಣೆಯಲ್ಲಿ ಇಂಡಿಯಾ ಬ್ಲಾಕ್ ಗೆಲ್ಲಲಿದೆ. ಜನ ಬದಲಾವಣೆ ಬಯಸುತ್ತಿದ್ದಾರೆ. ಬದಲಾವಣೆ ಆಗುತ್ತದೆ ಎಂಬ ನಂಬಿಕೆ ಇದೆ . ರಾಹುಲ್ ಗಾಂಧಿಯವರ ಪಾದಯಾತ್ರೆಯ ಸಂದರ್ಭದಲ್ಲಿ ಜನರಿಂದ ಅಭೂತಪೂರ್ವ ಪ್ರತಿಕ್ರಿಯೆ ಲಭಿಸಿದ್ದು, ಗೆಲುವು ನಮ್ಮದಾಗಲಿದೆ ಎಂದರು.
ಆರೆಸ್ಸೆಸ್ ಸೇರಿದಂತೆ ಇತರೆ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ನಿರ್ಬಂಧ :
ಶಾಲಾ ಆವರಣದಲ್ಲಿ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ನಿರ್ಬಂಧ ಹೇರುವ ಬಗ್ಗೆ 2013 ರಲ್ಲಿ ಜಗದೀಶ್ ಶೆಟ್ಟರ್ ಅವರು ಮುಖ್ಯಮಂತ್ರಿಗಳಿದ್ದ ಸಂದರ್ಭದಲ್ಲಿ ಸರಕಾರಿ ಆದೇಶ ಹೊರಡಿಸಿರುವ ಬಗ್ಗೆ ಮಾತನಾಡಿ, ಕೇವಲ ಆರೆಸ್ಸೆಸ್ ಚಟುವಟಿಕೆಗಳಿಗೆ ಮಾತ್ರವಲ್ಲ, ಎಲ್ಲಾ ಸಂಘ ಸಂಸ್ಥೆಗಳ ಚಟುವಟಿಕೆಗಳ ಮೇಲೂ ಸರಕಾರಿ ಆದೇಶ ಅನ್ವಯವಾಗುತ್ತದೆ. ಸರಕಾರಿ ಶಾಲೆ, ಆಟದ ಮೈದಾನ, ಸರಕಾರಿ ಸ್ಥಳಗಳು, ಉದ್ಯಾನವನಗಳಲ್ಲಿ , ಸರಕಾರಿ ಅನುದಾನಿತ ಶಾಲೆಗಳಲ್ಲಿ ಚಟುವಟಿಕೆಗಳಿಗೆ ನಿರ್ಬಂಧ ಹೇರಲಾಗಿದೆ ಎಂದರು.
ಬಂಡವಾಳ ಹೂಡಿಕೆ ಸಮಾವೇಶದಲ್ಲಿ ಕರ್ನಾಟಕಕ್ಕೆ ಪ್ರಥಮ ಸ್ಥಾನ :
ಆಂಧ್ರಪ್ರದೇಶದಲ್ಲಿ ವಿದೇಶಿ ಕಂಪನಿಗಳು ಹೂಡಿಕೆ ಮಾಡುತ್ತಿರುವ ಬಗ್ಗೆ ಆಂಧ್ರದ ಸಚಿವರೊಬ್ಬರು ಟ್ವೀಟ್ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, ಹೂಡಿಕೆದಾರರು ತಮಗೆ ಅನುಕೂಲಕರವಾದ ಪ್ರದೇಶಗಳಲ್ಲಿ ಬಂಡವಾಳ ಹೂಡುತ್ತಾರೆ. ಕರ್ನಾಟಕದಲ್ಲಿ ಬಹಳಷ್ಟು ಹೂಡಿಕೆದಾರರು ಬಂಡವಾಳ ಈಗಾಗಲೇ ಹೂಡಿಕೆ ಮಾಡಿದ್ದು, ಅವರಿಗೆ ಮೂಲಭೂತ ಸೌಕರ್ಯಗಳ ಕೊರತೆಯಾಗಿರುವ ಬಗ್ಗೆ ದೂರಿದ್ದಾರೆಯೇ? ಐಫೋನ್ ತಯಾರಿಕೆಯ ದೊಡ್ಡ ಹೂಡಿಕೆ ಕರ್ನಾಟಕದಲ್ಲಿಯೇ ಆಗಿದೆ. ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಭಾರತದಲ್ಲಿ ಹೂಡಿಕೆಯಲ್ಲಿ ಕರ್ನಾಟಕ ಪ್ರಥಮ ಸ್ಥಾನದಲ್ಲಿದೆ ಎಂದರು.
ಸರಕಾರದ ವಿರುದ್ಧ ಉದ್ದೇಶಪೂರ್ವಕ ಆರೋಪ :
ಗುತ್ತಿಗೆದಾರರ ಸಂಘದ ಅಧ್ಯಕ್ಷರು ಕಾಂಗ್ರೆಸ್ ಸರಕಾರದಲ್ಲಿಯೂ ಕಮೀಷನ್ ದಂಧೆ ನಡೆಯುತ್ತಿದೆ ಎಂದು ಆರೋಪಿಸಿರುವ ಬಗ್ಗೆ ಉತ್ತರಿಸುತ್ತಾ, ಆರೋಪ ಮಾಡುತ್ತಿರುವವರು ನ್ಯಾಯಾಲಯದ ಮೊರೆ ಹೋಗಲಿ. ಸರಕಾರದ ವಿರುದ್ಧ ಉದ್ದೇಶಪೂರ್ವಕವಾಗಿ ಆರೋಪಿಸಲಾಗುತ್ತಿದೆ ಎಂದರು.







