ಸಾಲುಮರದ ತಿಮ್ಮಕ್ಕ ವಸ್ತು ಸಂಗ್ರಹಾಲಯ ಸ್ಥಾಪನೆ ಕುರಿತು ಪರಿಶೀಲನೆ : ಸಿದ್ದರಾಮಯ್ಯ

ಬೆಳಗಾವಿ (ಸುವರ್ಣಸೌಧ) : ಪದ್ಮಶ್ರೀ ಪುರಸ್ಕೃತೆ, ಶತಾಯುಷಿ ಸಾಲುಮರದ ತಿಮ್ಮಕ್ಕ ಅವರ ನೆನಪಿನಲ್ಲಿ ಹಾಸನ ಜಿಲ್ಲೆಯ ಬೇಲೂರು ವ್ಯಾಪ್ತಿಯಲ್ಲಿ ‘ತಿಮ್ಮಕ್ಕ ವಸ್ತು ಸಂಗ್ರಹಾಲಯ’ ಸ್ಥಾಪನೆ ಮಾಡಬೇಕೆನ್ನುವ ಬೇಡಿಕೆಯನ್ನು ರಾಜ್ಯ ಸರಕಾರ ಪರಿಶೀಲನೆ ನಡೆಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದ್ದಾರೆ.
ಸೋಮವಾರ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆದ ವಿಧಾನಸಭೆಯ ಕಲಾಪದಲ್ಲಿ ಇತ್ತೀಚಿಗೆ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸುವ ನಿರ್ಣಯ ಬೆಂಬಲಿಸಿ ಮಾತನಾಡಿದ ಅವರು, ತಿಮ್ಮಕ್ಕ ಅವರು ಬೇಲೂರಿನಲ್ಲಿ ತಿಮ್ಮಕ್ಕ ವಸ್ತು ಸಂಗ್ರಹಾಲಯವನ್ನು ಮಾಡಬೇಕು ಎಂದು ತಮ್ಮ ಕೊನೆಯ ಆಸೆಯನ್ನು ಪತ್ರ ಮುಖೇನ ತಿಳಿಸಿದ್ದು, ಈ ಬಗ್ಗೆ ಸರಕಾರ ಪರಿಶೀಲಿಸಲಿದೆ ಎಂದು ಹೇಳಿದರು.
ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ಜನಿಸಿದ ತಿಮ್ಮಕ್ಕ ಅವರು, ಮಕ್ಕಳಂತೆ ಮರಗಿಡಗಳನ್ನು ಸಾಕುತ್ತಿದ್ದರು. ಅವರು ನೆಟ್ಟಿರುವ ಮರಗಳು ಇವತ್ತು ಹೆಮ್ಮರವಾಗಿ ಬೆಳೆದು ನಿಂತು ಜನರಿಗೆ ನೆರಳು ನೀಡುತ್ತಿವೆ. ಸುಮಾರು 4,000 ಕ್ಕೂ ಹೆಚ್ಚು ಮರಗಳನ್ನು ಬೆಳೆಸುವ ಮೂಲಕ ಸಾಲುಮರದ ತಿಮ್ಮಕ್ಕ ಎಂದೇ ಹೆಸರು ವಾಸಿಯಾಗಿದ್ದರು ಎಂದು ಅವರು ನುಡಿದರು.
ಅವರು ಬೆಳೆಸಿದ ಮರಗಳು ದಶಕಗಳಷ್ಟು ಹಳೆಯದಾಗಿದ್ದು, ಅವುಗಳು ಪರಿಸರಕ್ಕೆ ಮತ್ತು ಜೀವವೈವಿಧ್ಯಕ್ಕೆ ಅಪಾರ ಕೊಡುಗೆ ನೀಡಿವೆ. ಪರಿಸರವಾದಿಯಾಗಿದ್ದ ತಿಮ್ಮಕ್ಕನವರ ಸೇವೆಯನ್ನು ಪರಿಗಣಿಸಿ ಕೇಂದ್ರ ಸರಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು. ಗಿಡಗಳನ್ನು ಮಕ್ಕಳಂತೆ ಕಂಡು ಪೋಷಿಸಿ ಬೆಳೆಸಿದ್ದ ತಿಮ್ಮಕ್ಕ ಅವರ ಸಾಧನೆಗೆ 1995ರಲ್ಲಿ ರಾಷ್ಟ್ರೀಯ ಪೌರ ಪ್ರಶಸ್ತಿ ಸಂದಿದೆ. 1997ರಲ್ಲಿ ಇಂದಿರಾ ಪ್ರಿಯದರ್ಶಿನಿ ವೃಕ್ಷಮಿತ್ರ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಹಾಗೂ ನಾಡೋಜ ಪ್ರಶಸ್ತಿಗೂ ಭಾಜನರಾಗಿದ್ದಾರೆ ಎಂದೂ ಅವರು ಉಲ್ಲೇಖಿಸಿದರು.
ಪರಿಸರದ ಬಗೆಗಿನ ಇವರ ಅತೀವ ಕಾಳಜಿಯನ್ನು ಪರಿಗಣಿಸಿ ಸರಕಾರವು ಇವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ ಪರಿಸರ ರಾಯಭಾರಿಯನ್ನಾಗಿ ನೇಮಿಸಿತ್ತು. ಅರಣ್ಯ ಇಲಾಖೆಯ ವತಿಯಿಂದ ಪರಿಸರವಾದಿಗಳಿಗೆ ಪ್ರತಿವರ್ಷ ತಿಮ್ಮಕ್ಕನವರ ಹೆಸರಿನಲ್ಲಿ ಪ್ರಶಸ್ತಿಯನ್ನು ಕೊಡುವ ಬಗ್ಗೆ ಈಗಾಗಲೇ ಘೋಷಣೆ ಮಾಡಿದ್ದೇವೆ. ತಿಮ್ಮಕ್ಕ ಅವರ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಸಾವಿನಿಂದ ಉಂಟಾದ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಸಂತಾಪ ಸೂಚಿಸಿದರು.







