ಬಿಜೆಪಿ-ಜೆಡಿಎಸ್ ನಡೆಸುತ್ತಿರುವ ಮೈಸೂರು ಪಾದಯಾತ್ರೆ ಗಮನ ಬೇರೆಡೆ ಹೋಗುತ್ತಿದೆ : ಎಸ್.ಆರ್.ವಿಶ್ವನಾಥ್

PC : x/@SRVishwanathBJP
ಬೆಂಗಳೂರು : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಎಚ್.ಡಿ.ಕುಮಾರಸ್ವಾಮಿ ನಡುವಿನ ವೈಯಕ್ತಿಕ ಟೀಕೆಗಳಿಗೆ ಹೆಚ್ಚು ಒತ್ತು ನೀಡುತ್ತಿರುವ ಕಾರಣದಿಂದಾಗಿ ಬಿಜೆಪಿ-ಜೆಡಿಎಸ್ ಪಕ್ಷಗಳು ನಡೆಸುತ್ತಿರುವ ಮೈಸೂರು ಚಲೋ ಪಾದಯಾತ್ರೆ ಗಮನ ಬೇರೆಡೆ ಹೋಗುತ್ತಿದೆ ಎಂದು ಬಿಜೆಪಿಯ ಯಲಹಂಕ ಕ್ಷೇತ್ರದ ಶಾಸಕ ಎಸ್.ಆರ್.ವಿಶ್ವನಾಥ್ ಹೇಳಿದ್ದಾರೆ.
ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಾದಯಾತ್ರೆಯ ಉದ್ದೇಶ ವಾಲ್ಮೀಕಿ ಮತ್ತು ಮುಡಾ ಹಗರಣದ ಕುರಿತು ಜನರಿಗೆ ತಿಳಿಸುವುದು. ಆದರೆ, ಎರಡು ದಿನಗಳಿಂದ ವೈಯಕ್ತಿಕ ಟೀಕೆಗಳು ಹೆಚ್ಚಾಗಿವೆ. ಇದರಿಂದ ಕಾರ್ಯಕರ್ತರ ಹುಮ್ಮಸ್ಸು ಕಡಿಮೆಯಾಗುತ್ತಿದೆ ಎಂದು ನನಗೆ ಅನಿಸುತ್ತಿದೆ ಎಂದರು.
ನಮ್ಮ ಗುರಿ ಇರುವುದು ಮುಖ್ಯಮಂತ್ರಿ ಸಿದ್ದರಾಮಯ್ಯರ ರಾಜೀನಾಮೆ. ನಿರಂತರವಾಗಿ ಅದಕ್ಕೆ ಒತ್ತು ಕೊಡಬೇಕು. ಅದು ಅಲ್ಲದೆ, ಬಿ.ವೈ.ವಿಜಯೇಂದ್ರ, ಬಿ.ಎಸ್.ಯಡಿಯೂರಪ್ಪ ಅವರ ಹಗರಣಗಳನ್ನೂ ಬಿಚ್ಚಿಡುತ್ತೇನೆ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದು, ಈ ರೀತಿ ಹೇಳಿ ಜನರ ಗಮನ ಬೇರೆ ಕಡೆ ಸೆಳೆಯುತ್ತಿದ್ದಾರೆ ಅಷ್ಟೇ ಎಂದು ತಿಳಿಸಿದರು.





