ರಾಜ್ಯಾದ್ಯಂತ ಅಕ್ರಮ ಮರಳುಗಾರಿಕೆ ತಡೆಗಟ್ಟಲು ಬಿಗಿ ಕ್ರಮ : ಸಚಿವ ಚಲುವರಾಯಸ್ವಾಮಿ

ಎನ್.ಚಲುವರಾಯಸ್ವಾಮಿ
ಬೆಂಗಳೂರು, ಆ.19 : ರಾಜ್ಯಾದ್ಯಂತ ಅಕ್ರಮ ಮರಳುಗಾರಿಕೆ ತಡೆಗಟ್ಟಲು ಜಿಪಿಎಸ್ ಅಳವಡಿಕೆ ಹಾಗೂ ಸ್ಕ್ವಾಡ್ ತಂಡವನ್ನು ಬಿಗಿಗೊಳಿಸಲಾಗುವುದು ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಮಂಗಳವಾರ ವಿಧಾನಪರಿಷತ್ತಿನ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯೆ ಹೇಮಾಲತ ನಾಯಕ್ ಅವರ ಪ್ರಶ್ನೆಗೆ ತೋಟಗಾರಿಕೆ ಸಚಿವರ ಪರವಾಗಿ ಉತ್ತರಿಸಿದ ಎನ್.ಚಲುವರಾಯಸ್ವಾಮಿ, ಅಕ್ರಮ ಮರಳುಗಾರಿಕೆ ತಡೆಗಟ್ಟುವುದು ಸರಕಾರದ ಮೊದಲ ಆದ್ಯತೆ ಎಂದರು.
ಮರಳುಗಾರಿಕೆ ನಡೆಯುವ ಕಡೆಗಳಲ್ಲಿ ಜಿಪಿಎಸ್ ಅಳವಡಿಕೆ ಮತ್ತು ಈಗಿರುವ ಸ್ಕ್ವಾಡ್ ತಂಡವನ್ನು ಮತ್ತಷ್ಟು ಬಲಪಡಿಸಲಾಗುವುದು. ಅಕ್ರಮ ಮರಳುಗಾರಿಕೆ ತಡೆಗಟ್ಟಲು ಜಿಲ್ಲಾಧಿಕಾರಿಗಳು, ತಹಸೀಲ್ದಾರ್ ಸೇರಿದಂತೆ ಮತ್ತಿತರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದರು.
ರಾಜ್ಯ ಸರಕಾರದ ಬೊಕ್ಕಸಕ್ಕೆ ನಷ್ಟ ಉಂಟಾಗದಂತೆ ಬಿಗಿಯಾದ ಕಾನೂನು ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಸರಕಾರಕ್ಕೆ ಬರಬೇಕಾದ ರಾಜಸ್ವವನ್ನು ಸಂಗ್ರಹಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸೂಚಿಸಲಾಗಿದೆ. ಎಲ್ಲದರೂ ನಿರ್ದಿಷ್ಟ ಪ್ರಕರಣಗಳಿದ್ದರೆ ಸರಕಾರ ಕಾನೂನು ಕ್ರಮ ತೆಗೆದುಕೊಳ್ಳಲಿದೆ ಎಂದು ಎನ್.ಚಲುವರಾಯಸ್ವಾಮಿ ಆಶ್ವಾಸನೆ ನೀಡಿದರು.





