‘ಅತ್ಯುತ್ತಮ ನಟ’ ರಾಜ್ಯ ಪ್ರಶಸ್ತಿ ನಿರಾಕರಿಸಿದ ಸುದೀಪ್

ನಟ ಕಿಚ್ಚ ಸುದೀಪ್
ಬೆಂಗಳೂರು : 2019ರ ಕ್ಯಾಲೆಂಡರ್ ವರ್ಷದ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿಯನ್ನು ರಾಜ್ಯ ಸರಕಾರವು ಘೋಷಿಸಿದ್ದು, ಕಿಚ್ಚ ಸುದೀಪ್ ಅವರು ʼಅತ್ಯುತ್ತಮ ನಟ’ ಪ್ರಶಸ್ತಿಗೆ ಭಾಜನರಾಗಿದ್ದರು. ಆದರೆ ʼಪೈಲ್ವಾನ್’ ಚಿತ್ರಕ್ಕಾಗಿ ತಮಗೆ ಘೋಷಣೆಯಾಗಿದ್ದ ʼಅತ್ಯುತ್ತಮ ನಟʼ ಪ್ರಶಸ್ತಿಯನ್ನು ನಟ ಕಿಚ್ಚ ಸುದೀಪ್ ನಿರಾಕರಿಸಿದ್ದಾರೆ.
ʼಪೈಲ್ವಾನ್’ ಸಿನಿಮಾದಲ್ಲಿನ ತಮ್ಮ ನಟನೆಯನ್ನು ಗುರುತಿಸಿದ್ದಕ್ಕಾಗಿ ಅವರು ಜ್ಯೂರಿಗಳಿಗೆ ಮತ್ತು ರಾಜ್ಯ ಸರಕಾರಕ್ಕೆ ಧನ್ಯವಾದ ತಿಳಿದಿದ್ದಾರೆ. ಅಲ್ಲದೆ, ತಮ್ಮ ಬದಲು ಬೇರೆ ಕಲಾವಿದರಿಗೆ ಈ ಪ್ರಶಸ್ತಿ ಸಲ್ಲಬೇಕು ಎಂದು ಸುದೀಪ್ ಹೇಳಿದ್ದಾರೆ.
ಈ ಸಂಬಂಧ ಎಕ್ಸ್ನಲ್ಲಿ ನಟ ಸುದೀಪ್ ಸುದೀರ್ಘ ಪೋಸ್ಟ್ವೊಂದನ್ನು ಹಂಚಿಕೊಂಡಿದ್ದಾರೆ.
‘ಕರ್ನಾಟಕ ಸರಕಾರ ಹಾಗೂ ಜೂರಿ ಸದಸ್ಯರೇ, ಅತ್ಯುತ್ತಮ ನಟ ವಿಭಾಗದಲ್ಲಿ ರಾಜ್ಯ ಪ್ರಶಸ್ತಿ ಘೋಷಣೆಯಾಗಿರುವುದು ನಿಜಕ್ಕೂ ಒಂದು ಭಾಗ್ಯ. ಈ ಗೌರವಕ್ಕಾಗಿ ಗೌರವಾನ್ವಿತ ತೀರ್ಪುಗಾರರಿಗೆ ನನ್ನ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಅದಾಗ್ಯೂ, ನಾನು ಹಲವು ವರ್ಷಗಳಿಂದ ಪ್ರಶಸ್ತಿಗಳನ್ನು ಪಡೆಯುವುದನ್ನು ನಿಲ್ಲಿಸಿದ್ದೇನೆ. ವೈಯಕ್ತಿಕ ಕಾರಣಗಳಿಂದಾಗಿ ಈ ನಿರ್ಧಾರ ಕೈಗೊಂಡಿದ್ದು, ಅದನ್ನು ಮುಂದುವರಿಸುತ್ತಿದ್ದೇನೆ’ ಎಂದಿದ್ದಾರೆ.
‘ಕಲೆಗೆ ತಮ್ಮನ್ನು ಸಮರ್ಪಿಸಿದ ಅನೇಕ ಅರ್ಹ ಕಲಾವಿದರಿದ್ದಾರೆ. ಈ ಪ್ರತಿಷ್ಠಿತ ಮನ್ನಣೆಯನ್ನು ಅವರು ಹೆಚ್ಚು ಪ್ರಶಂಸಿಸುತ್ತಾರೆ. ಅವರಲ್ಲಿ ಒಬ್ಬರು ಪ್ರಶಸ್ತಿ ಪಡೆಯುವುದನ್ನು ನೋಡೋದು ನನಗೆ ಖುಷಿ ನೀಡುತ್ತದೆ. ಪ್ರಶಸ್ತಿಗಳ ನಿರೀಕ್ಷೆಯಿಲ್ಲದೇ ಜನರನ್ನು ಮನರಂಜಿಸುವುದರಲ್ಲಿ ನನ್ನನ್ನು ಸಮರ್ಪಿಸಿಕೊಂಡಿದ್ದೇನೆ. ತೀರ್ಪುಗಾರರ ಈ ನಿರ್ಧಾರ ಶ್ರೇಷ್ಠತೆಗಾಗಿ ಶ್ರಮಿಸುವುದನ್ನು ಮುಂದುವರಿಸಲು ನನಗೆ ಉತ್ತೇಜನ ನೀಡುತ್ತದೆ’ ಎಂದು ಸುದೀಪ್ ತಿಳಿಸಿದ್ದಾರೆ.
‘ನನ್ನನ್ನು ಆಯ್ಕೆ ಮಾಡಿದ್ದಕ್ಕಾಗಿ ನಾನು ಪ್ರತೀ ಜೂರಿ(ತೀರ್ಪುಗಾರರು) ಸದಸ್ಯರಿಗೂ ಕೃತಜ್ಞನಾಗಿದ್ದೇನೆ. ಏಕೆಂದರೆ, ಈ ಮನ್ನಣೆಯೇ ನನ್ನ ಕೆಲಸದ ಪ್ರತಿಫಲ. ನನ್ನ ನಿರ್ಧಾರ ನಿಮಗೆ ನಿರಾಶೆಯಾಗಬಹುದು, ತೀರ್ಪುಗಾರ ತಂಡ'ದ ಸದಸ್ಯರು ಮತ್ತು ರಾಜ್ಯ ಸರಕಾರದಲ್ಲಿ ಕ್ಷಮೆಯಾಚಿಸುತ್ತೇನೆ ಎಂದು ಸುದೀಪ್ ಪೋಸ್ಟ್ನಲ್ಲಿ ಉಲ್ಲೇಖಿಸಿದ್ದಾರೆ,
‘ನೀವು ನನ್ನ ನಿರ್ಧಾರವನ್ನು ಗೌರವಿಸುತ್ತೀರಿ ಮತ್ತು ನಾನು ಆಯ್ಕೆ ಮಾಡಿದ ಹಾದಿಯಲ್ಲಿ ಮುನ್ನಡೆಯಲು ನನ್ನನ್ನು ಬೆಂಬಲಿಸುತ್ತೀರಿ ಎಂದು ನಾನು ನಂಬುತ್ತೇನೆ. ಮತ್ತೊಮ್ಮೆ, ನನ್ನ ಕೆಲಸವನ್ನು ಗುರುತಿಸಿ ಈ ಪ್ರಶಸ್ತಿಗೆ ಪರಿಗಣಿಸಿದ್ದಕ್ಕಾಗಿ ಗೌರವಾನ್ವಿತ ತೀರ್ಪುಗಾರ ಸದಸ್ಯರು ಮತ್ತು ರಾಜ್ಯ ಸರ್ಕಾರಕ್ಕೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ' ಎಂದು ಸುದೀಪ್ ಬರೆದುಕೊಂಡಿದ್ದಾರೆ.