ಪರಿಷತ್ನಲ್ಲಿ ‘ವಾರ್ತಾಭಾರತಿ’ ವರದಿ ಉಲ್ಲೇಖ; ಸರಕಾರದ ಗಮನ ಸೆಳೆದ ಸದಸ್ಯ ತಿಪ್ಪಣ್ಣಪ್ಪ ಕಮಕನೂರ

ಬೆಂಗಳೂರು : ‘ರಾಜ್ಯದಲ್ಲಿ ದಲಿತರ ಮೇಲಿನ ದೌರ್ಜನ್ಯ, ಹತ್ಯೆ ಹಾಗೂ ಅತ್ಯಾಚಾರ ಪ್ರಕರಣಗಳು ಆತಂಕಕಾರಿ ಪ್ರಮಾಣದಲ್ಲಿ ಮುಂದುವರಿದಿದ್ದು, ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕಲು ಸರಕಾರ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು’ ಎಂದು ಆಡಳಿತ ಪಕ್ಷದ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ‘ವಾರ್ತಾಭಾರತಿ’ ಪತ್ರಿಕೆಯಲ್ಲಿನ ವಿಶೇಷ ವರದಿಯನ್ನು ಉಲ್ಲೇಖಿಸಿ ಸರಕಾರದ ಗಮನ ಸೆಳೆದಿದ್ದಾರೆ.
ಮಂಗಳವಾರ ಪರಿಷತ್ ಶೂನ್ಯವೇಳೆಯಲ್ಲಿ ‘ವಾರ್ತಾಭಾರತಿ’ ಪತ್ರಿಕೆಯ ಮುಖಪುಟದಲ್ಲಿ ಪ್ರಕಟವಾದ ವರದಿಯನ್ನು ಉಲ್ಲೇಖಿಸಿ ಮಾತನಾಡಿದ ಅವರು, ‘ರಾಜ್ಯದಲ್ಲಿ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವುದು ಗಂಭೀರ ವಿಚಾರವಾಗಿದೆ. ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸಲು ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸುವ ಅಗತ್ಯವಿದೆ ಎಂದು ಆಗ್ರಹಿಸಿದರು.
ದಲಿತರ ಮೇಲಿನ ದೌರ್ಜನ್ಯ ತಡೆಗೆ ಜಾರಿಯಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಕಾಯ್ದೆಯಡಿ ದಾಖಲಾಗುವ ದೂರುಗಳ ತನಿಖೆಯನ್ನು ಯಾವುದೇ ವಿಳಂಬವಿಲ್ಲದೆ ಪೂರ್ಣಗೊಳಿಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಅವರು ಒತ್ತಾಯಿಸಿದರು.
ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ಸರಕಾರದಿಂದ ದೊರೆಯಬೇಕಾದ ಪರಿಹಾರ, ಕಾನೂನು ನೆರವು ಹಾಗೂ ರಕ್ಷಣೆಯನ್ನು ಸಮಯಕ್ಕೆ ಸರಿಯಾಗಿ ಒದಗಿಸಬೇಕು. ಪ್ರಕರಣಗಳ ತನಿಖೆ ಮತ್ತು ವಿಚಾರಣೆಯಲ್ಲಿ ವಿಳಂಬವಾಗದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಬೇಕಾಗಿದೆ ಎಂದು ಅವರು ಹೇಳಿದರು.
ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳ ಮೇಲ್ವಿಚಾರಣೆಗೆ ಜಿಲ್ಲಾ ಮಟ್ಟದಲ್ಲಿ ರಚಿಸಲಾಗಿರುವ ಸಂಬಂಧಪಟ್ಟ ಸಮಿತಿಗಳ ಸಭೆಗಳನ್ನು ನಿಯಮಿತವಾಗಿ ನಡೆಸಬೇಕು. ಪ್ರಕರಣಗಳ ತನಿಖೆ, ನ್ಯಾಯಾಲಯದ ವಿಚಾರಣೆ, ಸಂತ್ರಸ್ತರಿಗೆ ಪರಿಹಾರ ಹಾಗೂ ಕಾನೂನು ನೆರವು ಸೇರಿದಂತೆ ಪ್ರತಿಯೊಂದು ಹಂತದ ಪ್ರಗತಿಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಬೇಕು ಎಂದು ಅವರು ಮನವಿ ಮಾಡಿದರು.






