ಕೆಪಿಎಸ್ಸಿ ಹಗರಣ, ಬಿಡದಿ ಟೌನ್ಶಿಪ್ ಯೋಜನೆ ಕುರಿತು ಸದನದಲ್ಲಿ ಚರ್ಚೆ : ವಿಜಯೇಂದ್ರ

ಬೆಂಗಳೂರು : ರಾಜ್ಯ ಲೋಕಸೇವಾ ಆಯೋಗ(ಕೆಪಿಎಸ್ಸಿ)ದಲ್ಲಿ ನಡೆದಿರುವ ಹಗರಣ ಹಾಗೂ ಬಿಡದಿ ಟೌನ್ಶಿಪ್ ಯೋಜನೆ ವಿಚಾರವನ್ನು ಮುಂಬರುವ ವಿಧಾನಮಂಡಲದ ಅಧಿವೇಶನದಲ್ಲಿ ಚರ್ಚಿಸಲು ಕೋರ್ ಕಮಿಟಿ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.
ರವಿವಾರ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಕೋರ್ ಕಮಿಟಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರಕಾರಿ ಉದ್ಯೋಗ ಪಡೆಯುವ ಕನಸಿನೊಂದಿಗೆ ವರ್ಷಾನುಗಟ್ಟಲೆ ಓದಿ ಶ್ರಮ ಹಾಕಿದ ವಿದ್ಯಾರ್ಥಿಗಳಿಗೆ ಕೆಪಿಎಸ್ಸಿಯಿಂದ ದೊಡ್ಡ ಅನ್ಯಾಯವಾಗಿದೆ. ಕೆಪಿಎಸ್ಸಿ ನೇಮಕಾತಿಯಲ್ಲಿ ನಡೆದಿರುವ ಹಗರಣದ ಬಗ್ಗೆ ಸದನದಲ್ಲಿ ಚರ್ಚೆ ನಡೆಸಲಾಗುವುದು ಎಂದು ಹೇಳಿದರು.
ಬಿಡದಿ ಟೌನ್ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ವತಿಯಿಂದ ನಡೆಸಲು ಉದ್ದೇಶಿಸಿರುವ ಪಾದಯಾತ್ರೆ ವಿಚಾರದಲ್ಲಿ ಯಾವುದೆ ಗೊಂದಲಗಳು ಇಲ್ಲ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಮಾತನಾಡಿದ್ದೇನೆ. ಅವರು ಪಾದಯಾತ್ರೆಗೆ ದಿನಾಂಕ ಘೋಷಣೆ ಮಾಡಿದ್ದಾರೆ. ಸದನದಲ್ಲಿ ಬಿಡದಿ ಟೌನ್ಶಿಪ್ ವಿಚಾರವಾಗಿ ಧ್ವನಿ ಎತ್ತುತ್ತೇವೆ ಎಂದು ವಿಜಯೇಂದ್ರ ತಿಳಿಸಿದರು.
ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ ಭೀಕರ ಬರವಿದೆ. ಆದರ ಬಗ್ಗೆ ಗಮನ ಹರಿಸಬೇಕಾದ ರಾಜ್ಯ ಸರಕಾರ ಕೈಕಟ್ಟಿ ಕೂತಿದೆ. ಸರಿಯಾದ ಪ್ರಮಾಣದಲ್ಲಿ ಮಳೆಯಾಗದೆ ರೈತರಿಗೆ ತೊಂದರೆಯಾಗಿದೆ. ಮುಂಬರುವ ಅಧಿವೇಶನದಲ್ಲಿ ನಾಡಿನ ರೈತರ ಒಳಿತಿಗಾಗಿ ಬಿಜೆಪಿ ಹೋರಾಡಲಿದೆ ಎಂಧು ಅವರು ಹೇಳಿದರು.
ಸದನದ ಕಲಾಪವನ್ನು ಹೇಗೆ ಸದ್ಬಳಕೆ ಮಾಡಿಕೊಳ್ಳಬೇಕು, ರೈತರ ಧ್ವನಿಯಾಗಿ ಯಾವ ವಿಚಾರಗಳನ್ನು ಮಂಡನೆ ಮಾಡಬೇಕು ಎಂಬ ವಿಷಯಗಳ ಕುರಿತು ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಸದನದ ಒಳಗೆ ಮತ್ತು ಹೊರಗೆ ಬಿಜೆಪಿ ರಾಜ್ಯದ ಜನತೆ ಪರವಾಗಿ ಹೋರಾಡಲಿದೆ ಎಂದು ವಿಜಯೇಂದ್ರ ತಿಳಿಸಿದರು.
ವಿಧಾನಪರಿಷತ್ ಚುನಾವಣೆ: ವಿಧಾನಪರಿಷತ್ ಚುನಾವಣೆ ಸಂಬಂಧವೂ ಮಾತುಕತೆ ನಡೆಸಲಾಯಿತು. ಮುಂದಿನ ಅಕ್ಟೋಬರ್ ನಲ್ಲಿ ವಿಧಾನ ಪರಿಷತ್ತಿನ ನಾಲ್ಕು ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಈಗಾಗಲೇ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿ ಘೋಷಣೆ ಮಾಡಲಾಗಿದೆ. ಇನ್ನು ಒಂದು ಕ್ಷೇತ್ರಕ್ಕೆ ಜೆಡಿಎಸ್ ಜೊತೆ ಸಮಾಲೋಚನೆ ಮಾಡಿ ಘೋಷಣೆ ಮಾಡಲಾಗುವುದು. ಯಾರನ್ನು ಕಣಕ್ಕಿಳಿಸಬೇಕು ಎಂದು ತೀರ್ಮಾನ ಮಾಡಲಾಗುವುದು ಎಂದು ಅವರು ಹೇಳಿದರು.






