ಉಪಮುಖ್ಯಮಂತ್ರಿ ಆದರೆ ಸಂವಿಧಾನದ ಆಶಯದಂತೆ ಕೆಲಸ ಮಾಡುವೆ : ಝಮೀರ್ ಅಹ್ಮದ್

ಬಿ.ಝಡ್.ಝಮೀರ್ ಅಹ್ಮದ್ ಖಾನ್
ಚಿತ್ರದುರ್ಗ : ನಿಮ್ಮೆಲ್ಲರ ಆಶೀರ್ವಾದದಿಂದ ನಾನು ರಾಜ್ಯದ ಉಪಮುಖ್ಯಮಂತ್ರಿ ಆದರೆ ಸಂವಿಧಾನದ ಆಶಯದಂತೆ ಕೆಲಸ ಮಾಡುತ್ತೇನೆ ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ವಸತಿ ಸಚಿವ ಬಿ.ಝಡ್.ಝಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
ಶುಕ್ರವಾರ ನಗರಕ್ಕೆ ಆಗಮಿಸಿದ್ದ ವೇಳೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ನಾನು ಮಂತ್ರಿಯಾಗಿದ್ದೇನೆಂದರೆ ಅದಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ಕಾರಣ. ರಾಜ್ಯದಲ್ಲಿ ನನಗೆ ಉಪ ಮುಖ್ಯಮಂತ್ರಿಯಾಗುವ ಅವಕಾಶ ಸಿಕ್ಕರೆ ದಲಿತರು, ಶೋಷಿತರು, ಅಲ್ಪಸಂಖ್ಯಾತರು, ದಮನಿತರ ಪರವಾಗಿ ಕೆಲಸ ಮಾಡುತ್ತೇನೆ. ಸಂವಿಧಾನದ ಆಶಯದಂತೆ ಸರ್ವರಿಗೂ ಸಾಮಾಜಿಕ ನ್ಯಾಯ ಒದಗಿಸಬೇಕೆಂಬುದು ನನ್ನ ಬಯಕೆ ಎಂದರು.
ಕರ್ನಾಟಕ ದಲಿತ ಸಂಘರ್ಷ ಸಮಿತಿ(ಎಂ.ಎಸ್.ಬಣ)ಯ ರಾಜ್ಯ ಪ್ರಧಾನ ಕಾರ್ಯದರ್ಶಿ ಬಾಳೆಕಾಯಿ ಶ್ರೀನಿವಾಸ್ ಮಾತನಾಡಿ, ಸಚಿವ ಝಮೀರ್ ಅಹ್ಮದ್ ಅವರು ಸರ್ವಧರ್ಮದ ನಾಯಕ. ಬಡವರು, ದಲಿತರು, ಶೋಷಿತರು, ಧ್ವನಿಯಿಲ್ಲದವರ ಬಗ್ಗೆ ಅಪಾರ ಕಾಳಜಿ ಇಟ್ಟುಕೊಂಡಿದ್ದಾರೆ. 2023ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 135 ಸೀಟುಗಳನ್ನು ಪಡೆದು ಅಧಿಕಾರಕ್ಕೆ ಬಂದಿದೆಯೆಂದರೆ ಅದಕ್ಕೆ ಮುಸ್ಲಿಮರು, ದಲಿತರು ಕಾರಣ ಎನ್ನುವುದನ್ನು ಸಿಎಂ ಸಿದ್ದರಾಮಯ್ಯನವರು ಮರೆಯಬಾರದು. ನಿಜವಾಗಿಯೂ ಕಾಂಗ್ರೆಸ್ ನಾಯಕರಿಗೆ ಬದ್ಧತೆ, ಮುಸ್ಲಿಮರ ಬಗ್ಗೆ ಗೌರವವಿದ್ದರೆ ಝಮೀರ್ ಅಹ್ಮದ್ ಅವರನ್ನು ರಾಜ್ಯದ ಉಪ ಮುಖ್ಯಮಂತ್ರಿಯನ್ನಾಗಿ ಮಾಡಬೇಕು. ಇಲ್ಲವಾದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ದಲಿತರು ಪಾದಯಾತ್ರೆ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್ಪೀರ್, ವಕ್ಫ್ ಬೋರ್ಡ್ ಮಾಜಿ ಚೇರ್ಮನ್ ಎಂ.ಸಿ.ಒ. ಬಾಬು, ವಕ್ಫ್ ಮಂಡಳಿ ರಾಜ್ಯ ಸಮಿತಿ ಸದಸ್ಯ ಕೆ. ಅನ್ವರ್ಪಾಷ, ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಮಹಲಿಂಗಪ್ಪ ಕುಂಚಿಗನಹಾಳ್, ಕೆ.ರಾಜಣ್ಣ, ಕಣುಮೇಶ್ ಜಾಲಿಕಟ್ಟೆ, ವೆಂಕಟೇಶ್ ಕವಾಡಿಗರಹಟ್ಟಿ ಹಾಗೂ ಅನೇಕ ದಲಿತ ಮುಖಂಡರು ಉಪಸ್ಥಿತರಿದ್ದರು.







