ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತರಿಗೆ ಶೇ.15 ಮೀಸಲಾತಿ | ಕೇಂದ್ರದ ಮಾದರಿ ಅನುಸರಿಸಿದ್ದೇವೆ : ಝಮೀರ್ ಅಹ್ಮದ್ ಖಾನ್

ಝಮೀರ್ ಅಹ್ಮದ್ ಖಾನ್
ಬೆಂಗಳೂರು : ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಶೇ.15ರಷ್ಟು ಮೀಸಲು ನಿರ್ಧಾರ ಈಗ ಕೈಗೊಂಡ ತೀರ್ಮಾನವಲ್ಲ. 2019ರಲ್ಲಿ ಸಮ್ಮಿಶ್ರ ಸರಕಾರದಲ್ಲಿ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಯಾಗಿದ್ದಾಗ ರಚಿಸಿದ್ದ ಸಂಪುಟ ಉಪ ಸಮಿತಿ ಶಿಫಾರಸು ಮಾಡಿತ್ತು ಎಂದು ವಸತಿ ಹಾಗೂ ಅಲ್ಪಸಂಖ್ಯಾತ ರ ಕಲ್ಯಾಣ ಸಚಿವ ಝಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ
ಈ ಕುರಿತು ಹೇಳಿಕೆ ನೀಡಿರುವ ಅವರು, ಸಾಚಾರ್ ಸಮಿತಿ ವರದಿ ಪ್ರಕಾರ ಕೇಂದ್ರ ಸರಕಾರದಲ್ಲಿ ಈಗಾಗಲೇ ವಸತಿ ಯೋಜನೆಗಳಲ್ಲಿ ಶೇ.15 ರಷ್ಟು ಮೀಸಲಾತಿ ಅಲ್ಪಸಂಖ್ಯಾತ ಸಮುದಾಯಕ್ಕೆ ಇದೆ. ಅದೇ ರೀತಿ ರಾಜ್ಯದಲ್ಲೂ ನೀಡಬೇಕು ಎಂಬ ಬೇಡಿಕೆ ಇತ್ತು. ಹೀಗಾಗಿ ಕೇಂದ್ರದ ಮಾದರಿಯನ್ನೇ ಅನುಸರಿಸಲಾಗಿದೆ ಎಂದು ತಿಳಿಸಿದ್ದಾರೆ.
2019ರಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಸಮ್ಮಿಶ್ರ ಸರಕಾರದಲ್ಲಿ ಮುಖ್ಯಮಂತ್ರಿಯಾಗಿದ್ದಾಗ ರಚಿಸಿದ್ದ ಸಂಪುಟ ಉಪ ಸಮಿತಿ ಶಿಫಾರಸು ಮಾಡಿತ್ತು. ಇದೀಗ ಸಂಪುಟದ ಮುಂದೆ ಬಂದು ಒಪ್ಪಿಗೆ ದೊರೆತಿದೆ. ಈಗಾಗಲೇ ಇದ್ದ ಶೇ.10 ರಷ್ಟು ಮೀಸಲಾತಿ ಪ್ರಮಾಣ ಶೇ.15 ಕ್ಕೆ ಹೆಚ್ಚಿಸಲಾಗಿದೆ. ಅಲ್ಪಸಂಖ್ಯಾತ ಸಮುದಾಯದಲ್ಲಿ ಹೆಚ್ಚಿನ ಬಡ ಕುಟುಂಬಗಳಿದ್ದು ವಸತಿ ರಹಿತರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಮೀಸಲಾತಿ ಪ್ರಮಾಣ ಹೆಚ್ಚಿಸುವ ಬೇಡಿಕೆ ಇತ್ತು ಎಂದು ತಿಳಿಸಿದ್ದಾರೆ.
2021 ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗವು ಸಹ ಶೇ.15 ರಷ್ಟು ಮೀಸಲಾತಿ ಜಾರಿಗೊಳಿಸಬೇಕು ಎಂದು ತಿಳಿಸಿತ್ತು. ಇದೆಲ್ಲ, ವಾಸ್ತವ ಅಂಶ ತಿಳಿಯದೆ ಪ್ರತಿಪಕ್ಷ ಗಳು ಅನಗತ್ಯ ಟೀಕೆ ಗಳು ಮಾಡುತ್ತಿರುವುದು ಶೋಭೆ ತರುವುದಿಲ್ಲ ಎಂದು ಹೇಳಿದ್ದಾರೆ.







