Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಅಂಕಣಗಳು
  4. ಕಾಲಂ 9
  5. ಮತ್ತೊಮ್ಮೆ ಕಾವೇರಿ ವಿವಾದ: ಅಂಬೇಡ್ಕರ್...

ಮತ್ತೊಮ್ಮೆ ಕಾವೇರಿ ವಿವಾದ: ಅಂಬೇಡ್ಕರ್ ಒದಗಿಸುವ ಪರಿಹಾರಗಳನ್ನು ಮತ್ತೊಮ್ಮೆ ಪರಿಶೀಲಿಸೋಣವೇ?

ಶಿವಸುಂದರ್ಶಿವಸುಂದರ್5 Aug 2026 10:21 AM IST
share
ಮತ್ತೊಮ್ಮೆ ಕಾವೇರಿ ವಿವಾದ: ಅಂಬೇಡ್ಕರ್ ಒದಗಿಸುವ ಪರಿಹಾರಗಳನ್ನು ಮತ್ತೊಮ್ಮೆ ಪರಿಶೀಲಿಸೋಣವೇ?

ಅಂಬೇಡ್ಕರ್ ಅವರ ಅಂತರ್‌ರಾಜ್ಯ ನದಿ ನೀರು ನಿಗಮ ಮತ್ತು ಹಂಚಿಕೆಯ ಯೋಜನೆಗಳೂ ಈ ಆರ್ಥಿಕ ಸಾಮಾಜಿಕ ನ್ಯಾಯದ ಚೌಕಟ್ಟಿನಲ್ಲೇ ಹುಟ್ಟಿಕೊಂಡಿವೆ. ಅಂಬೇಡ್ಕರ್ ಅವರ ಚಿಂತನೆಯನ್ನು ಅಳವಡಿಸಿಕೊಂಡರೆ ನದಿ ಕಣಿವೆ ಪ್ರದೇಶದಲ್ಲಿ ಭೂ ಮಾಲಕ ಮತ್ತು ಸಣ್ಣ ರೈತರೆಂಬ ವಿಂಗಡನೆ ಇರುವುದಿಲ್ಲ ಹಾಗೂ ತಮಿಳು ಮತ್ತು ಕನ್ನಡ ರೈತರೆಂಬ ವಿಂಗಡನೆಯೂ ಇರುವುದಿಲ್ಲ. ಮೇಲಾಗಿ ಕೃಷಿಯು ರಾಷ್ಟ್ರೀಕರಣವಾಗಿರುತ್ತದಾದ್ದರಿಂದ ಮಳೆ ಕೊರತೆ-ನೀರು ಹರಿವಿನಿಂದ ಆಗುವ ಏರುಪೇರುಗಳು ಅಂತಿಮವಾಗಿ ರೈತನ ಬದುಕನ್ನೇನೂ ಏರುಪೇರು ಮಾಡುವುದಿಲ್ಲ. ಹೀಗಾಗಿ ಸಂಕಷ್ಟ ಮತ್ತು ಲಾಭ ಎರಡನ್ನೂ ಇಡೀ ಕೃಷಿ ಸಮುದಾಯ ಮತ್ತು ದೇಶ ಒಂದು ಘಟಕವಾಗಿ ಎದುರಿಸುತ್ತದೆ.

ಮಳೆ ಕೈಕೊಟ್ಟ ಪ್ರತೀ ವರ್ಷದಲ್ಲೂ ಕಾವೇರಿ ನದಿನೀರು ಹಂಚಿಕೆ ಸಂಬಂಧಿತ ವಿವಾದಗಳಿಗೂ ಬಿಸಿ ಏರತೊಡಗುತ್ತದೆ. ಹಾಗೆಯೇ ಈ ವರ್ಷವೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA)ವು ಮುಂದಿನ 15 ದಿನಗಳ ಕಾಲ ಪ್ರತಿನಿತ್ಯ 3,500 ಕ್ಯೂಸೆಕ್ ಅರ್ಥಾತ್ 4.5 ಟಿಎಂಸಿ ನೀರು ಬಿಡಲೇ ಬೇಕೆಂದು ಆದೇಶ ನೀಡಿದೆ. ಆದರೆ ಈ ವರ್ಷ ಎಲ್ ನಿನೊ ಸಾಗರ ವಿದ್ಯಮಾನ ಮರುಕಳಿಸಿದ್ದು ಮಳೆಯು ಕೈಕೊಟ್ಟಿದೆ. ಹೀಗಾಗಿ ಶೇ. 65ರಷ್ಟು ಮಳೆಯ ಕೊರತೆ ಕಾಣಿಸಿಕೊಂಡಿದೆ. ಇದರಿಂದಾಗಿ ಜೂನ್-ಜುಲೈನಲ್ಲಿ ಸುಪ್ರೀಂ ಅದೇಶದಂತೆ ತಮಿಳುನಾಡಿಗೆ ಹರಿಸಬೇಕಾದ ನೀರಿನಲ್ಲೂ ಶೇ. 65ರಷ್ಟು ಖೋತಾ ಉಂಟಾಗಿದೆ. ಇದಲ್ಲದೆ ಅಮೆರಿಕ-ಇಸ್ರೇಲ್ ಇರಾನ್ ಮೇಲೆ ನಡೆಸುತ್ತಿರುವ ಯುದ್ಧದ ಪರಿಣಾಮಗಳಿಂದಾಗಿಯೂ ರಸಗೊಬ್ಬರಗಳ ಕೊರತೆ ಮತ್ತು ಹಣದುಬ್ಬರ ಹೆಚ್ಚಾಗಿ ಎರಡೂ ರಾಜ್ಯಗಳ ರೈತರ ಗಾಯದ ಮೇಲೆ ಬರೆ ಹಾಕಿದಂತಾಗಿದೆ.

ಧಾರಾಕಾರವಾಗಿ ಮಳೆ ಸುರಿದಾಗ ಕಾವೇರಿ ಸುದ್ದಿಯಾಗುವುದಿಲ್ಲ. ಆದರೆ ಮಳೆ ಕೈಕೊಟ್ಟು ಅಭಾವ ಏರ್ಪಟ್ಟಾಗ ಉದ್ಭವವಾಗುವ ಸಂಕಷ್ಟಗಳನ್ನು ಕೂಡ ಪ್ರಜಾತಾಂತ್ರಿಕವಾಗಿ ಹಂಚಿಕೊಳ್ಳುವುದರಲ್ಲೇ ಎಲ್ಲಾ ತಕರಾರುಗಳೂ ಹುಟ್ಟಿಕೊಳ್ಳುತ್ತವೆ.

ವಾಸ್ತವದಲ್ಲಿ ಕಾವೇರಿ ವಿವಾದದಲ್ಲಿ ಸರಿಯಾದ ಸಂಕಷ್ಟ ಹಂಚಿಕೆ ಸೂತ್ರವೇ ರೂಪುಗೊಳ್ಳದಿರುವುದು ಪರಿಹಾರವನ್ನು ಜಟಿಲಗೊಳಿಸಿದೆ.

ಐತಿಹಾಸಿಕ ತಾರತಮ್ಯಗಳು ಹಾಗೂ ವರ್ತಮಾನದ ರೈತ ಬದುಕಿನ ಒತ್ತಡಗಳು ಹಾಗೂ ಮುತ್ಸದ್ದಿತನವಿಲ್ಲದ ಸ್ಪರ್ಧಾತ್ಮಕ ಅವಕಾಶವಾದಿ ರಾಜಕಾರಣ ಕಾವೇರಿ ವಿವಾದವನ್ನು ಹೆಚ್ಚೆಚ್ಚು ಕಗ್ಗಂಟಾಗಿಸುತ್ತಾ ಬಂದಿದೆ. ಹೀಗಾಗಿ ನದಿ ನೀರು ಹಂಚಿಕೆಯಂತಹ ವಿಷಯಗಳನ್ನು ನಿಭಾಯಿಸಲು ವೈಜ್ಞಾನಿಕ ಮತ್ತು ಪ್ರಜಾತಾಂತ್ರಿಕ ದೃಷ್ಟಿಕೋನವುಳ್ಳ ಹಾಗೂ ಮುತ್ಸದ್ದಿತನ ಮತ್ತು ದೂರದೃಷ್ಟಿಗಳುಳ್ಳ ರಾಜಕೀಯ ಹಾಗೂ ವೈಜ್ಞಾನಿಕ ಪರಿಹಾರದ ಅಗತ್ಯವಿದೆ. ಅದನ್ನು ಹಾಲಿ ರಾಜಕೀಯ ಪ್ರಭುತ್ವ ಕೊಡುವುದು ಕನಸಿನ ಮಾತು.

ಆದರೆ ಅಂಬೇಡ್ಕರ್ ಅವರು ಅಂತರ್‌ರಾಜ್ಯ ನದಿ ನೀರು ಹಂಚಿಕೆ ವಿವಾದಗಳಂಥ ಜಟಿಲ ಪ್ರಶ್ನೆಗಳನ್ನು ನಿವಾರಿಸುವ ಬಗ್ಗೆಯೂ 1942-44ರಲ್ಲಿ ವೈಸರಾಯ್ ಕೌನ್ಸಿಲ್ ಸದಸ್ಯರಾಗಿದ್ದಾಗ ಅತ್ಯಂತ ವೈಜ್ಞಾನಿಕ ಹಾಗೂ ಪ್ರಜಾತಾಂತ್ರಿಕ ಪರಿಹಾರವನ್ನು ಒದಗಿಸಿದ್ದಲ್ಲದೆ ಅದನ್ನು ಅನುಷ್ಠಾನಕ್ಕೂ ತಂದಿದ್ದರು ಎಂಬುದು ಈ ಕಾಲದ ಯುವ ಪೀಳಿಗೆಗೆ ಗೊತ್ತಿರಲಾರದು.

ಈ ಲೇಖನದಲ್ಲಿ ಅಂತರ್‌ರಾಜ್ಯ ನದಿ ನೀರು ಹಂಚಿಕೆಯ ಬಗ್ಗೆ ಅಂಬೇಡ್ಕರ್ ಮುಂದಿಟ್ಟ ದೃಷ್ಟಿಕೋನದ ಪರಿಚಯವನ್ನು ಮಾಡಿಕೊಡುವ ಪ್ರಯತ್ನ ಮಾಡಲಾಗಿದೆ.

ಅಂಬೇಡ್ಕರ್ ಮತ್ತು ಸಂಪನ್ಮೂಲಗಳ ಪ್ರಜಾತಾಂತ್ರಿಕ ಮರುಹಂಚಿಕೆ

ನದಿ ನೀರು ಹಂಚಿಕೆಯಂಥ ಸಮಸ್ಯೆಗಳು ಸಾರಾಂಶದಲ್ಲಿ ಸೀಮಿತ ಸಂಪನ್ಮೂಲಗಳ ಪ್ರಜಾತಾಂತ್ರಿಕ ಮರುಹಂಚಿಕೆಯ ಸಮಸ್ಯೆಯಾಗಿದೆ. ಅದರಲ್ಲೂ ನೀರಿನ ಸಂಪನ್ಮೂಲ ದಿನೇದಿನೇ ಕುಸಿಯುತ್ತಿದ್ದರೂ ಅದರ ಮೇಲಿನ ರೈತಾಪಿಗಳ ಅವಲಂಬನೆ ತೀವ್ರಗತಿಯಲ್ಲಿ ಹೆಚ್ಚುತ್ತಿರುವಾಗ ನೀರಿನ ಹಂಚಿಕೆಯ ರೈತಾಪಿಗಳ ಜೀವನ್ಮರಣದ ಪ್ರಶ್ನೆಯಾಗಿಬಿಡುತ್ತಿದೆ. ಅದೇ ಅವಕಾಶವಾದಿ ರಾಜಕಾರಣಿಗಳ ರಾಜಕೀಯಕ್ಕೆ ಮೇವನ್ನೂ ಒದಗಿಸುತ್ತಿದೆ.

ಇಂಥ ಸಮಸ್ಯೆಗಳನ್ನು ಭಾವನಾತ್ಮಕ ನೆಲೆಯಿಂದಲೋ, ತತ್‌ಕ್ಷಣದ ರಾಜೀ ಸೂತ್ರಗಳಿಂದಲೋ ಬಗೆಹರಿಸಲು ಸಾಧ್ಯವಿಲ್ಲ. ಅದಕ್ಕೆ ಸಂಪನ್ಮೂಲಗಳ ಮರುಹಂಚಿಕೆಗಳ ಬಗ್ಗೆ ಪ್ರಬಲವಾದ ಪ್ರಜಾತಾಂತ್ರಿಕ ಮೌಲ್ಯಗಳ ನೆಲೆಗಟ್ಟು ಹಾಗೂ ನೀರು ಮತ್ತು ಕೃಷಿಗಳ ಬಗ್ಗೆ ವೈಜ್ಞಾನಿಕ ಹಾಗೂ ಪ್ರಜಾತಾಂತ್ರಿಕ ದೂರಗಾಮಿತ್ವ ಎರಡೂ ಬೇಕಾಗುತ್ತದೆ. ಆದರೆ ಸ್ಪರ್ಧಾತ್ಮಕ ಅವಕಾಶವಾದಿ ರಾಜಕಾರಣದಲ್ಲಿ ಇವುಗಳ ಅತ್ಯಂತ ದೊಡ್ಡ ಕೊರತೆಯನ್ನು ದೇಶ ಅನುಭವಿಸುತ್ತಿದೆ.

ಆದರೆ ಸೀಮಿತ ಸಂಪನ್ಮೂಲಗಳ ಪ್ರಜಾತಾಂತ್ರಿಕ ಮರುಹಂಚಿಕೆಯ ಬಗ್ಗೆ ಭಾರತ ಅಂಬೇಡ್ಕರ್ ಮುಂದಿಟ್ಟ ಸೂತ್ರಗಳಿಂದ ಕಲಿಯಬೇಕಾದದ್ದು ಬಹಳಷ್ಟಿದೆ. ಅದು ನದಿನೀರು ಹಂಚಿಕೆಯಲ್ಲೂ ಹೌದು, ರಾಜಕೀಯ-ಆರ್ಥಿಕ-ಸಾಮಾಜಿಕ ಸಂಪನ್ಮೂಲಗಳ ಹಂಚಿಕೆಯಲ್ಲೂ ಹೌದು.

ಆದರೆ ಅವಕಾಶವಾದಿ ರಾಜಕಾರಣದಿಂದಾಗಿ ಪ್ರಜಾತಾಂತ್ರಿಕ ಹಾಗೂ ವೈಜ್ಞಾನಿಕ ಹಂಚಿಕೆಗೆ ಪೂರಕವಾಗಬಹುದಾದ ಸಾಧನಗಳ ಬಗ್ಗೆಯೂ ಸಕಾರಣ ಅನುಮಾನ ಹುಟ್ಟಿಕೊಂಡಿದೆ. ಉದಾಹರಣೆಗೆ ನದಿನೀರಿನ ಹಂಚಿಕೆಯಲ್ಲಿ ರಾಜ್ಯಗಳ ಪಾಲಿನ ನಿಗದಿ ಮಾಡುವ ಬಗ್ಗೆ ನಡೆಯುವ ರಾಜಕಾರಣವು, ರಾಜ್ಯಗಳ ಎಲ್ಲೆಯನ್ನು ಮೀರಿ ಇಡೀ ನದಿ ಜಲಾನಯನ ಪ್ರದೇಶವನ್ನು ಒಂದು ಘಟಕವಾಗಿ ತೆಗೆದುಕೊಂಡು ಬೆಳೆ, ರೈತಾಪಿಗಳ ಅಗತ್ಯ ಇತ್ಯಾದಿಗಳನ್ನು ಆಧರಿಸಿ ವೈಜ್ಞಾನಿಕ ಹಂಚಿಕೆ ಮಾಡುವ ಸಾಧ್ಯತೆಯನ್ನು ಮರೆಮಾಚುತ್ತದೆ. ಆದರೆ ಎರಡೂ ರಾಜ್ಯಗಳ ನಡುವೆ ಐತಿಹಾಸಿಕ ತಾರತಮ್ಯ, ಕೇಂದ್ರ ಸರಕಾರದ ಮಲತಾಯಿ ಧೋರಣೆ ಹಾಗೂ ರಾಜ್ಯಗಳಲ್ಲಿನ ಅವಕಾಶವಾದಿ ರಾಜಕಾರಣಗಳಿದ್ದಾಗ ರೈತರ, ಕೃಷಿಯ ಮತ್ತು ದೇಶದ ಹಿತಾಸಕ್ತಿಗಳು ಹೇಗೆ ಮೂಲೆಗುಂಪಾಗುತ್ತವೆ ಎಂಬುದಕ್ಕೆ ಕಾವೇರಿ ವಿವಾದವೂ ಒಂದು ಜೀವಂತ ಸಾಕ್ಷಿ.

ಕಾವೇರಿ-ನಿರಂತರ ಅವಕಾಶವಾದ, ಮುಗಿಯದ ವಿವಾದ

2018ರಲ್ಲಿ ಸುಪ್ರೀಂ ಕೋರ್ಟ್ ಕಾವೇರಿ ವಿವಾದದ ಬಗ್ಗೆ ತನ್ನ ಅಂತಿಮ ಆದೇಶವನ್ನು ನೀಡುತ್ತಾ ಕಾವೇರಿ ನದಿ ನೀರಿನಲ್ಲಿ ರಾಜ್ಯದ ಪಾಲನ್ನು ಹೆಚ್ಚಿಸಿ ಕಾವೇರಿ ನಿರ್ವಹಣಾ ಪ್ರಾಧಿಕಾರವನ್ನು ಸ್ಥಾಪಿಸುವ ಆದೇಶವನ್ನು ನೀಡಿದೆ. ಅದರಂತೆ ಕಾವೇರಿ ನೀರು ನಿಯಂತ್ರಣಾ ಸಮಿತಿ (CWRC) ಮತ್ತು ಅದರ ಉಸ್ತುವಾರಿಗೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಗಳು (CWMA) ಸ್ಥಾಪನೆಯಾಗಿವೆೆ.

ಈ ಪ್ರಾಧಿಕಾರ/ಸಮಿತಿ ಇಡೀ ಕಾವೇರಿ ಕಣಿವೆಯ ಎಲ್ಲಾ ಅಣೆಕಟ್ಟುಗಳನ್ನೂ ತನ್ನ ಸುಪರ್ದಿಗೆ ತೆಗೆದುಕೊಂಡು ಕಾವೇರಿ ನ್ಯಾಯಮಂಡಳಿಯು ಕೊಟ್ಟಿರುವ ಅಂತಿಮ ಆದೇಶದಂತೆ ನೀರು ಹಂಚಿಕೆ ಮತ್ತು ಬಳಕೆಯಾಗುವಂತೆ ನೋಡಿಕೊಳ್ಳುತ್ತದೆ. ಆಗ ತಮ್ಮ ತಮ್ಮ ರಾಜ್ಯಗಳಲ್ಲಿ ಹರಿದುಹೋಗುವ ನದಿ ನೀರಿನ ಮೇಲೆ ಯಾವ ರಾಜ್ಯವೂ ಅಂತಿಮ ಪರಮಾಧಿಕಾರವನ್ನು ಚಲಾಯಿಸಲು ಸಾಧ್ಯವಿಲ್ಲ.

ಮೇಲಾಗಿ ಕಾವೇರಿ ನಿರ್ವಹಣಾ ಮಂಡಳಿಯು ಕಾವೇರಿ ನ್ಯಾಯಮಂಡಳಿಯ ಅಂತಿಮ ಆದೇಶವನ್ನು ಚಾಚೂ ತಪ್ಪದೆ ಅನುಷ್ಠಾನಕ್ಕೆ ತರಲಿರುವ ಮಂಡಳಿಯೇ ವಿನಃ ಅದರಲ್ಲಾಗಿರುವ ಅನ್ಯಾಯವನ್ನು ಸರಿಪಡಿಸಬಲ್ಲ ವೇದಿಕೆಯಲ್ಲ. ಹೀಗಾಗಿ ಹಾಲಿ ವ್ಯವಸ್ಥೆಯಲ್ಲಿ ಹಾಗೂ ಐತಿಹಾಸಿಕ ತಾರತಮ್ಯಗಳು ಮುಂದುವರಿಯುತ್ತಿರುವ ಸಂದರ್ಭದಲ್ಲಿ ಕಾವೇರಿ ಪ್ರಾಧಿಕಾರದ ಪಾತ್ರ ಯಥಾಸ್ಥಿತಿಯನ್ನು ಕಾಯುತ್ತದೆಯೇ ವಿನಃ ಪರಿಹಾರ ಒದಗಿಸುವುದಿಲ್ಲ.

ಈ ಹಿನ್ನೆಲೆಯಲ್ಲೇ ಮಳೆ ಕೈಕೊಟ್ಟಿರುವ ಈ ವರ್ಷದಲ್ಲಿ ಕಾವೇರಿ ನದಿ ನೀರು ಹಂಚಿಕೆಯ ಪ್ರಶ್ನೆ ಎರಡು ರಾಜ್ಯಗಳಲ್ಲಿ ಮತ್ತೊಮ್ಮೆ ಉದ್ರಿಕ್ತತೆಯನ್ನು ಹೆಚ್ಚಿಸುತ್ತಿದೆ.

ಆದರೆ ಒಂದು ಅಂತರ್‌ರಾಜ್ಯ ನದಿ ನೀರಿನ ಹಂಚಿಕೆಯಲ್ಲಿ ಅಂತರ್‌ರಾಜ್ಯ ನದಿ ನಿರ್ವಹಣಾ ಮಂಡಳಿಗೆ ಒಂದು ವೈಜ್ಞಾನಿಕ ಪಾತ್ರವಿರುವುದಿಲ್ಲವೇ?

ಸದ್ಯದ ಅನ್ಯಾಯದ ವಿರುದ್ಧ ಹೋರಾಡುತ್ತಿರುವಾಗ ಶಾಶ್ವತವನ್ನು ಅಲಕ್ಷಿಸುವ ಒಂದು ದುಡುಕು ಮತ್ತು ಕುರುಡು ಸಾಮಾನ್ಯವಾಗಿ ಎಲ್ಲಾ ಬಗೆಯ ಹೋರಾಟಗಳನ್ನೂ ಆವರಿಸುತ್ತದೆ. ಅಂಥ ಕುರುಡು ಹುಟ್ಟಿಸುವ ವಾದ ಮತ್ತು ತರ್ಕಗಳು ಕೆಲವೊಮ್ಮೆ ಅಪ್ರಜಾತಾಂತ್ರಿಕ ಹಾಗೂ ದೀರ್ಘಕಾಲೀನವಾಗಿ ನಷ್ಟವನ್ನುಂಟು ಮಾಡುವ ಸಾಧ್ಯತೆಯನ್ನು ಹೊಂದಿರುತ್ತದೆ.

ನದಿನೀರು ಹಂಚಿಕೆ-ಅಂಬೇಡ್ಕರ್ ಪರಿಹಾರೋಪಾಯಗಳು

ಈ ಹಿನ್ನೆಲೆಯಲ್ಲಿ ನೋಡಿದಾಗ ಅಂತರರಾಜ್ಯ ನದಿ ನೀರು ಹಂಚಿಕೆಯ ವಿಷಯದಲ್ಲಿ ಅಂತರ್‌ರಾಜ್ಯ ನದಿ ನೀರು ನಿರ್ವಹಣಾ ಮಂಡಳಿಗಳ ಪಾತ್ರದ ಬಗ್ಗೆ ಅಂಬೇಡ್ಕರ್‌ರವರ ದೃಷ್ಟಿಕೋನ ಒಂದು ಸ್ಪಷ್ಟ ಜನಪರ ಮತ್ತು ರಾಷ್ಟ್ರೀಯ ತಿಳಿವಳಿಕೆಯನ್ನು ನೀಡುತ್ತದೆ.

ನಮಗೆಲ್ಲಾ ತಿಳಿದಿರುವಂತೆ ಅಂಬೇಡ್ಕರ್ ಅವರು 1943-45ರ ಅವಧಿಯ ಬ್ರಿಟಿಷ್ ಮಂತ್ರಿಮಂಡಲದಲ್ಲಿ ಕಾರ್ಮಿಕ ಲೋಕೋಪಯೋಗಿ ಮತ್ತು ನೀರಾವರಿ ಇಲಾಖೆಗಳ ಮುಖ್ಯಸ್ಥರಾಗಿದ್ದರು. ಆನಂತರದಲ್ಲಿ ಭಾರತ ಸಂವಿಧಾನ ರಚನಾ ಸಭೆಯ ಕರಡು ರಚನೆಯ ಮುಖ್ಯಸ್ಥರಾಗಿದ್ದು ಮಾತ್ರವಲ್ಲದೆ 1951ರ ತನಕ ಕಾನೂನು ಮಂತ್ರಿಯೂ ಆಗಿದ್ದರು. ಎಲ್ಲಕ್ಕಿಂತ ವಿಶೇಷವಾಗಿ ಇಡೀ ದೇಶ ಕೇವಲ ಬ್ರಿಟಿಷರಿಂದ ಪಡೆಯಬೇಕಾದ ರಾಜಕೀಯ ಸ್ವಾತಂತ್ರ್ಯದ ಬಗ್ಗೆ ಮಾತ್ರ ಮಾತಾಡುತ್ತಿದ್ದಾಗ ದೇಶದೊಳಗೆ ದಮನಿತ ಜನಕ್ಕೆ ಬೇಕಾದ ಜಾತಿ ಮತ್ತು ವರ್ಗ ದಮನಗಳಿಂದ ಸ್ವಾತಂತ್ರ್ಯದ ಬಗ್ಗೆ ಸಮಾನತೆಯಿಂದ ಕೂಡಿದ ನೈಜ ಸ್ವಾತಂತ್ರ್ಯದ ಬಗ್ಗೆ ಹೋರಾಡುತ್ತಿದ್ದರು. ದೇಶದ ಹಲವು ಪ್ರಮುಖ ನೀರಾವರಿ ಯೋಜನೆ, ಹಣಕಾಸು ಯೋಜನೆ ಮತ್ತು ಆರ್ಥಿಕ ವ್ಯವಸ್ಥೆ, ಶಿಕ್ಷಣ ನೀತಿ, ಕಾರ್ಮಿಕ ನೀತಿ ಇವೆಲ್ಲವುಗಳಲ್ಲಿ ಸಮಪಾಲು ಮತ್ತು ಸಮಬಾಳಿನ ಗುರಿಯನ್ನು ಸ್ಥಾಪಿಸಲು ಶ್ರಮಿಸಿದವರು.

ಹೀಗಾಗಿ ನದಿನೀರು ಹಂಚಿಕೆಯ ಬಗ್ಗೆ ಅಂಬೇಡ್ಕರ್ ಅವರ ಚಿಂತನೆ ಕೇವಲ ನೀರಾವರಿ ತಜ್ಞರ ಅಥವಾ ನೀರು ಹಂಚಿಕೆಯ ಪರಿಣತಿಯ ದೃಷ್ಟಿಕೋನ ಮಾತ್ರವಾಗಿರಲಿಲ್ಲ. ನೀರಾವರಿ ಮತ್ತು ನದಿ ನೀರು ಹಂಚಿಕೆಯ ಬಗ್ಗೆ ಅವರ ಯೋಜನೆ, ಸಲಹೆ ಮತ್ತು ಮಾರ್ಗದರ್ಶನದ ಮಾನದಂಡಗಳು 1943-49ರ ನಡುವೆ ಅವರು ಮಾಡಿದ ಭಾಷಣ, ಬರಹ ಮತ್ತು ನೀಡಿದ ಮಾರ್ಗದರ್ಶನಗಳಲ್ಲಿ ದಕ್ಕುತ್ತದೆ.

ಅದರಲ್ಲೂ ವಿಶೇಷವಾಗಿ ದಾಮೋದರ್ ಕಣಿವೆ, ಸೋನ್ ನದಿ ಯೋಜನೆ ಮತ್ತು ಮಹಾನದಿ ಯೋಜನೆಗಳನ್ನು ರೂಪಿಸುವಲ್ಲಿ ಅವರು ರೂಪಿಸಿದ ತಾತ್ವಿಕತೆ ಮತ್ತು ಮಾರ್ಗದರ್ಶನಗಳು ಮತ್ತು ಸ್ವಾತಂತ್ರ್ಯಾನಂತರದಲ್ಲೂ ಅವರ ಮಾರ್ಗದರ್ಶನದಲ್ಲಿ ರೂಪುಗೊಂಡ ಅಂತರ್‌ರಾಜ್ಯ ಜಲ ವಿವಾದ ಕಾಯ್ದೆ, ಅಂತರ್‌ರಾಜ್ಯ ಜಲ ನಿಗಮ ಕಾಯ್ದೆ ಮತ್ತು ಆರ್ಟಿಕಲ್ 262 - ಇವುಗಳಲ್ಲಿ ಅಂತರ ರಾಜ್ಯ ನದಿ ನೀರು ಹಂಚಿಕೆ ಮತ್ತು ನಿರ್ವಹಣೆಗಳಲ್ಲಿ ಅಂಬೇಡ್ಕರ್ ಅವರ ಚಿಂತನೆಗಳೇನಿದ್ದವು ಎಂಬುದನ್ನು ಎತ್ತಿ ತೋರಿಸುತ್ತವೆ.

ಈ ಎಲ್ಲಾ ಬರಹಗಳಲ್ಲಿ ಹರಿದಿರುವ ಅಂಬೇಡ್ಕರ್ ಚಿಂತನೆಗಳಲ್ಲಿ ನದಿ ನೀರು ಹಂಚಿಕೆಯ ಬಗ್ಗೆ ಅವರು ನೀಡಿರುವ ಸಲಹೆಗಳನ್ನು ಹೀಗೆ ಸಾರಾಂಶೀಕರಿಸಬಹುದು:

1. ನೀರು ಮತ್ತು ನದಿ ಒಂದು ಅಪೂರ್ವವಾದ ಮತ್ತು ಎಲ್ಲರಿಗೂ ಸೇರಬೇಕಾದ ಸಂಪನ್ಮೂಲ ಮತ್ತು ಒಂದು ಕೃಷಿ ಆಧಾರಿತ ದೇಶದಲ್ಲಿ ಅದರ ಸಂಪೂರ್ಣ ಮತ್ತು ಸದ್ಬಳಕೆ ಅತ್ಯಗತ್ಯ.

2. ನೀರು ಬಳಕೆಯ ಕುರಿತಾದ ನೀತಿ ಪ್ರಧಾನವಾಗಿ ಈ ದೇಶದ ಅತ್ಯಂತ ಕೆಳಗಿನ ಹಂತದಲ್ಲಿರುವ ಜನತೆಯ ಜೀವನ ಮಟ್ಟವನ್ನು ಸುಧಾರಿಸುವುದೇ ಆಗಿರಬೇಕು.

3. ಅಂತರ್‌ರಾಜ್ಯ ನದಿಗಳ ಬಗ್ಗೆ ಯೋಜನೆಯನ್ನು ರೂಪಿಸುವಾಗ ನೀರಾವರಿ, ವಿದ್ಯುತ್ ಮತ್ತು ಜಲಮಾರ್ಗ ಅಭಿವೃದ್ಧಿ ಎಂಬ ಬಹು ಉಪಯೋಗಿ ನದಿ ಯೋಜನೆಗಳನ್ನು ರೂಪಿಸಬೇಕು.

4. ಅಂತರ್‌ರಾಜ್ಯ ನದಿ ನೀರು ಹಂಚಿಕೆ ಮಾಡಿಕೊಳ್ಳುವಾಗ ಇಡೀ ನದಿ ಕಣಿವೆಯನ್ನು ಒಂದು ಸಮಗ್ರ ಏಕ ಜಲಘಟಕವನ್ನಾಗಿ ಪರಿಗಣಿಸಿ ಯೋಜನೆಯನ್ನು ರೂಪಿಸಿಕೊಳ್ಳಬೇಕು.

5. ಅದಕ್ಕಾಗಿ ಅಂತರ್‌ರಾಜ್ಯ ನದಿ ನೀರಿನ ಬಳಕೆಯ ಬಗ್ಗೆ ಸ್ಥಳೀಯ (local) ದೃಷ್ಟಿಕೋನವನ್ನು ತೊರೆದು, ಪ್ರಾದೇಶಿಕ (regional) ಅರ್ಥಾತ್ ನದಿ ನೀರು ಹರಿವ ಅಷ್ಟೂ ರಾಜ್ಯಗಳ ಪ್ರದೇಶವನ್ನು ಒಂದು ಪ್ರಾದೇಶಿಕ ಘಟಕವನ್ನಾಗಿ ಭಾವಿಸುವ ಧೋರಣೆಯನ್ನು ಬೆಳೆಸಿಕೊಳ್ಳಬೇಕು.

6. ಅಂಥ ನದಿ ನೀರಿನ ನಿರ್ವಹಣೆ, ಬಳಕೆ ಇತ್ಯಾದಿಗಳನ್ನು ಗಮನಿಸಿಕೊಳ್ಳಲು ಒಂದು ಪ್ರಾದೇಶಿಕ ನದಿ ನೀರು ನಿರ್ವಹಣಾ ನಿಗಮವನ್ನು ರಚಿಸಿಕೊಳ್ಳಬೇಕು.

7. ಅದಕ್ಕೆ ಬೇಕಿರುವ ತಾಂತ್ರಿಕ ಪರಿಣತಿ, ಇತ್ಯಾದಿಗಳನ್ನು ಕೇಂದ್ರವೇ ಒದಗಿಸಬೇಕು.

8. ಇದರಿಂದ ಆಗುವ ಅಭಿವೃದ್ಧಿಯ ಫಲವು ಅಗ್ಗದ ನೀರು, ಧಾನ್ಯ, ವಿದ್ಯುತ್ ಜಲಮಾರ್ಗಗಳ ರೂಪದಲ್ಲಿ ದೇಶದ ಕಟ್ಟಕಡೆಯ ಜನರಿಗೆ ದಕ್ಕಬೇಕು.

ಇವಿಷ್ಟೂ ಅಂಬೇಡ್ಕರ್ ಅವರು ನದಿ ನೀರು ಬಳಕೆ ಮತ್ತು ಹಂಚಿಕೆಯ ಕುರಿತು ರೂಪಿಸಿದ ಸೂತ್ರಗಳು. ಈ ಸೂತ್ರದನ್ವಯ ದೇಶದಲ್ಲೇ ಪ್ರಥಮವಾಗಿ ರಚಿತವಾದ ದಾಮೋದರ್ ಕಣಿವೆ ನಿಗಮ ಈಗಲೂ ಬಿಹಾರ, ಬಂಗಾಲಗಳ ನೆರೆ ಭೀತಿಯನ್ನು ತಗ್ಗಿಸಿ ಸಾಕಷ್ಟು ಪ್ರಾದೇಶಿಕ ಅಭಿವೃದ್ಧಿಗೆ ಕಾರಣವಾಗಿದೆ. ಹಾಗೆಯೇ ಮಹಾನದಿಗೆ ಅಡ್ಡವಾಗಿ ಕಟ್ಟಲಾದ ಹಿರಾಕುಡ್ ಅಣೆಕಟ್ಟು ಸಹ.

ಒಂದು ನದಿ ಕಣಿವೆಯನ್ನು ಒಂದೇ ಜಲಘಟಕವನ್ನಾಗಿ ಮತ್ತು ಇಡೀ ಪ್ರದೇಶವನ್ನು ಒಂದೇ ಪ್ರಾದೇಶಿಕ ಘಟಕವನ್ನಾಗಿ ಪರಿಗಣಿಸಿ ಯೋಜನೆಯನ್ನು ರೂಪಿಸುವ ಮೂಲಕ ಪ್ರತಿ ಹನಿ ನೀರಿನ ಗರಿಷ್ಠ ಪ್ರಯೋಜನ ಸಾಧ್ಯವಾಗುತ್ತದೆ. ಆಯಾ ಪ್ರದೇಶದ ಭೂಮಿ, ಸಾರ, ಹವಾಮಾನಗಳನ್ನು ಆಧರಿಸಿ ಮತ್ತು ಲಭ್ಯವಿರುವ ನೀರಿನ ಗರಿಷ್ಠ ಬಳಕೆಯ ಸಾಧ್ಯತೆಯನ್ನು ಗಮನದಲ್ಲಿರಿಸಿಕೊಂಡು ಬೆಳೆ ಮತ್ತು ಕೃಷಿ ಪದ್ಧತಿಯನ್ನೂ ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ.

ಕೃಷಿಯು ಅಂದಿಗಿಂತ ಇನ್ನೂ ಅತ್ಯಂತ ಸಂಕೀರ್ಣವಾದ ಬಳಕೆ, ತಾಳಿಕೆ ಸಮಸ್ಯೆಗಳನ್ನು ಎದುರಿಸುತ್ತಿರುವ ಇಂದಿನ ಸಂದರ್ಭದಲ್ಲೂ ಈ ಪರಿಕಲ್ಪನೆ ಅತ್ಯುತ್ತಮ ಮಾದರಿಯಾಗಿದೆ.

ಕೃಷಿ ಕಾರ್ಪೊರೇಟೀಕರಣದ ಕಾಲದಲ್ಲಿ ನದಿ ಪ್ರಾಧಿಕಾರಗಳು ಪರಿಹಾರದ ಭಾಗವಾಗಬಲ್ಲವೇ?

ಆದರೆ ಅಂಬೇಡ್ಕರ್ ಅವರ ಜಲನೀತಿ ಮತ್ತು ನದಿನೀರು ಹಂಚಿಕೆ ನೀತಿಗಳನ್ನು ಅವರ ಕೃಷಿ ಮತ್ತು ಆರ್ಥಿಕ ನೀತಿಗಳಿಂದ ಹೊರಗಿಟ್ಟೂ ನೋಡಲು ಸಾಧ್ಯವಿಲ್ಲ. ಅವರ ಇತರ ಆರ್ಥಿಕ ಬರಹಗಳಲ್ಲಿ ಅವರು ದೇಶದ ಕೃಷಿ ಸಮಸ್ಯೆ ಬಗೆಹರಿಯಬೇಕೆಂದರೆ ಕೃಷಿಯ ರಾಷ್ಟ್ರೀಕರಣವಾಗಬೇಕೆಂದು ಪ್ರತಿಪಾದಿಸುತ್ತಾರೆ. ಅದಿಲ್ಲದೆ ದೊಡ್ಡ ಭೂ ಮಾಲಕ ಮತ್ತು ಸಣ್ಣ ರೈತರು ಕೂಡಿರುವ ಗ್ರಾಮಗಳ ಕೃಷಿ ಘಟಕವು ದಿನೇದಿನೇ ಸಣ್ಣ ರೈತರನ್ನು ಹಾಗೆಯೇ ಕೃಷಿ ರಂಗವನ್ನು ದಿವಾಳಿ ಎಬ್ಬಿಸುತ್ತದೆ ಎಂದೂ ಅವರು ಪ್ರತಿಪಾದಿಸಿದ್ದರು. ಭಾರತದ ಆರ್ಥಿಕತೆಯ ಗುರಿ ಆರ್ಥಿಕ ಪುನರುಜ್ಜೀವನವೇ ಆದರೂ ಅದು ಸಂಪತ್ತಿನ ಸಮಾನ ಹಂಚಿಕೆಯ ಜೊತೆಜೊತೆಗೆ ಆಗಬೇಕೆಂಬುದು ಮತ್ತು ದೇಶದ ಕೀಲಕ ಆರ್ಥಿಕ ಕ್ಷೇತ್ರಗಳಲ್ಲಿ ಪ್ರಭುತ್ವವು ಪ್ರಧಾನ ಜವಾಬ್ದಾರಿಯನ್ನು ಹೊತ್ತುಕೊಂಡು ಈ ಗುರಿಯನ್ನು ಸಾಧಿಸಬೇಕೆಂಬುದು ಪ್ರತಿಪಾದಿಸಿದ್ದರು.

ಅಂಬೇಡ್ಕರ್ ಅವರ ಅಂತರ್‌ರಾಜ್ಯ ನದಿ ನೀರು ನಿಗಮ ಮತ್ತು ಹಂಚಿಕೆಯ ಯೋಜನೆಗಳೂ ಈ ಆರ್ಥಿಕ ಸಾಮಾಜಿಕ ನ್ಯಾಯದ ಚೌಕಟ್ಟಿನಲ್ಲೇ ಹುಟ್ಟಿಕೊಂಡಿವೆ. ಅಂಬೇಡ್ಕರ್ ಅವರ ಚಿಂತನೆಯನ್ನು ಅಳವಡಿಸಿಕೊಂಡರೆ ನದಿ ಕಣಿವೆ ಪ್ರದೇಶದಲ್ಲಿ ಭೂ ಮಾಲಕ ಮತ್ತು ಸಣ್ಣ ರೈತರೆಂಬ ವಿಂಗಡನೆ ಇರುವುದಿಲ್ಲ ಹಾಗೂ ತಮಿಳು ಮತ್ತು ಕನ್ನಡ ರೈತರೆಂಬ ವಿಂಗಡನೆಯೂ ಇರುವುದಿಲ್ಲ. ಮೇಲಾಗಿ ಕೃಷಿಯು ರಾಷ್ಟ್ರೀಕರಣವಾಗಿರುತ್ತದಾದ್ದರಿಂದ ಮಳೆ ಕೊರತೆ-ನೀರು ಹರಿವಿನಿಂದ ಆಗುವ ಏರುಪೇರುಗಳು ಅಂತಿಮವಾಗಿ ರೈತನ ಬದುಕನ್ನೇನೂ ಏರುಪೇರು ಮಾಡುವುದಿಲ್ಲ. ಹೀಗಾಗಿ ಸಂಕಷ್ಟ ಮತ್ತು ಲಾಭ ಎರಡನ್ನೂ ಇಡೀ ಕೃಷಿ ಸಮುದಾಯ ಮತ್ತು ದೇಶ ಒಂದು ಘಟಕವಾಗಿ ಎದುರಿಸುತ್ತದೆ.

ಆದರೆ ಕೃಷಿಯು ಇಂದು ರಾಷ್ಟ್ರೀಕರಣವಾಗುವುದಿರಲಿ, ಕಾರ್ಪೊರೇಟೀಕರಣವಾಗುತ್ತಿದೆ. ನದಿ ನೀರಿನ ಆಸರೆ ಹೆಚ್ಚಿರುವ ಕಡೆಗಳಲ್ಲೇ ಕಾರ್ಪೊರೇಟ್ ಕೃಷಿ ಹಿತಾಸಕ್ತಿಗಳು ಡೇರೆ ಹಾಕುತ್ತಿವೆ. ದೊಡ್ಡ ಮಟ್ಟದಲ್ಲಿ ಸಣ್ಣ ಹಿಡುವಳಿದಾರರು ಕೃಷಿಯಿಂದ ಒಕ್ಕಲೇಳುತ್ತಿದ್ದಾರೆ. ಇಂಥಾ ಕಾಲಘಟ್ಟದಲ್ಲಿ ನದಿ ಪ್ರಾಧಿಕಾರಗಳು ಅಂಬೇಡ್ಕರ್ ಸೂಚಿಸಿದ ಪರಿಹಾರವನ್ನು ಒದಗಿಸುವುದಿಲ್ಲ.

ಜೊತೆಗೆ ಇಂದಿನ ಭಾರತದಲ್ಲಿ ನದಿನೀರು ಅತ್ಯಂತ ಗರಿಷ್ಠ ಮಟ್ಟದಲ್ಲಿ ಬಳಕೆಯಲ್ಲಿರುವ ಕಾವೇರಿಯಂಥ ನದಿ ಕಣಿವೆಗಳಲ್ಲಿ ಕೃಷಿಯ ಕಾರ್ಪೊರೇಟೀಕರಣವು ಹಾಗೂ ದೊಡ್ಡ ದೊಡ್ಡ ಅಣೆಕಟ್ಟುಗಳ ಯೋಜನೆಯ ಹಿಂದಿನ ಕಾರ್ಪೊರೇಟ್ ಹಿತಾಸಕ್ತಿಗಳು ಸಾಮಾನ್ಯ ರೈತಾಪಿಗೆ ಮತ್ತು ಸಾಮಾನ್ಯ ಜನರಿಗೆ ಕಾವೇರಿಯ ಲಭ್ಯತೆಯನ್ನು ಇನ್ನಷ್ಟು ಸೀಮಿತಗೊಳಿಸಲಿದೆ. ಇವು ಈಗಾಗಲೇ ಪ್ರದೇಶ-ಪ್ರದೇಶಗಳ ನಡುವೆ, ಒಂದು ಪ್ರದೇಶದ ವರ್ಗ ಮತ್ತು ಜಾತಿಗಳ ನಡುವೆ ಇರುವ ಸಂಪನ್ಮೂಲ ತಾರತಮ್ಯಗಳನ್ನು ಇನ್ನಷ್ಟು ಹೆಚ್ಚಿಸಲಿದೆ.

ಹೀಗಾಗಿ ಅಂಬೇಡ್ಕರ್ ಪ್ರತಿಪಾದಿಸಿದ ಭೂಮಿ, ಸಂಪತ್ತು, ರಾಜಕೀಯ ಅವಕಾಶಗಳ ಪ್ರಜಾತಾಂತ್ರೀಕರಣ, ರಾಷ್ಟ್ರೀಕರಣ ಮತ್ತು ಸಮಾಜವಾದೀಕರಣ ವಾಗದಿದ್ದರೆ, ಅಂತರ್‌ರಾಜ್ಯ ನದಿ ನೀರು ನಿರ್ವಹಣಾ ಮಂಡಳಿಯಾಗಿರುವ ಕಾವೇರಿ ಪ್ರಾಧಿಕಾರವೂ ಸಹ ಪರಿಹಾರದ ಭಾಗಕ್ಕಿಂತ ಸಮಸ್ಯೆಯ ಭಾಗವಾಗುವ ಅವಕಾಶವೇ ಹೆಚ್ಚು.

ಆದ್ದರಿಂದ ಆರ್ಥಿಕತೆಯಲ್ಲಿ ಮತ್ತು ರಾಜಕೀಯದಲ್ಲಿ ಅಂಬೇಡ್ಕರ್ ಕನಸಿದ ಬುಡಮಟ್ಟದ ಪ್ರಜಾತಾಂತ್ರೀಕರಣವಾದರೆ ಜೊತೆಜೊತೆಗೆ ಕಾವೇರಿಯಂಥ ಅಂತರ್‌ರಾಜ್ಯ ಜಲವಿವಾದಗಳ ಪರಿಹಾರವೂ ಸಾಧ್ಯವಾಗಬಲ್ಲದು. ಅಲ್ಲವೇ?

Tags

KaveriAmbedkar
share
ಶಿವಸುಂದರ್
ಶಿವಸುಂದರ್
Next Story
X