Tumakur | ಗೌಜಗಲ್ಲು ಗ್ರಾಮದಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ : ಗ್ರಾಮಸ್ಥರಲ್ಲಿ ಆತಂಕ

ಕೊರಟಗೆರೆ: ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಗೌಜಗಲ್ಲು ಗ್ರಾಮದಲ್ಲಿ ಕಳೆದ ಒಂದು ತಿಂಗಳಿನಿಂದ ಚಿರತೆಯ ಹಾವಳಿ ಮುಂದುವರಿದಿದ್ದು, ಗ್ರಾಮಸ್ಥರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮಂಗಳವಾರ ಸಂಜೆ ಚಿರತೆಯೊಂದು ನಾಯಿಯನ್ನು ಬೇಟೆಯಾಡಲು ಹೊಂಚು ಹಾಕುತ್ತಿದ್ದ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಗ್ರಾಮಸ್ಥರ ಭಯ ಮತ್ತಷ್ಟು ಹೆಚ್ಚಿಸಿದೆ.
ಮಂಗಳವಾರ ಸಂಜೆ ಆಹಾರ ಅರಸಿ ಗ್ರಾಮಕ್ಕೆ ಬಂದಿದ್ದ ಚಿರತೆಯು ನಾಯಿಯೊಂದರ ಮೇಲೆ ದಾಳಿ ನಡೆಸಲು ಸಜ್ಜಾಗಿದ್ದ ವೇಳೆ, ಕೊರಟಗೆರೆ ಕಡೆಯಿಂದ ಕಾರಿನಲ್ಲಿ ಮನೆಗೆ ಬರುತ್ತಿದ್ದ ಸ್ಥಳೀಯ ಯುವಕರು ಅದನ್ನು ಗಮನಿಸಿದ್ದಾರೆ. ಈ ವೇಳೆ ಚಿರತೆಯ ಚಲನವಲನಗಳನ್ನು ಮೊಬೈಲ್ನಲ್ಲಿ ಚಿತ್ರೀಕರಿಸಿದ್ದು, ವಿಡಿಯೋ ಇದೀಗ ಗ್ರಾಮದಲ್ಲಿ ಚರ್ಚೆಗೆ ಕಾರಣವಾಗಿದೆ.
ಗ್ರಾಮಸ್ಥರ ಮಾಹಿತಿಯ ಪ್ರಕಾರ, ಮೂರು ದಿನಗಳ ಹಿಂದೆ ಗೌಜಗಲ್ಲು ಗ್ರಾಮದ ರೈತ ಗೋವಿಂದರಾಜು ಅವರಿಗೆ ಸೇರಿದ ಮೂರು ಮೇಕೆಗಳನ್ನು ಇದೇ ಚಿರತೆ ಬೇಟೆಯಾಡಿತ್ತು. ಇದಕ್ಕೂ ಮುನ್ನ ಸುಮಾರು 20 ದಿನಗಳ ಹಿಂದೆ ಕುರಿ ಹಾಗೂ ಮೇಕೆಗಳ ಮೇಲೂ ದಾಳಿ ನಡೆಸಿದ್ದರಿಂದ ಗ್ರಾಮಸ್ಥರು ನಿರಂತರ ಭೀತಿಯಲ್ಲಿ ದಿನ ಕಳೆಯುತ್ತಿದ್ದಾರೆ.
ಕಳೆದ 20 ದಿನಗಳಿಂದ ಚಿರತೆಯನ್ನು ಸೆರೆಹಿಡಿಯಲು ಅರಣ್ಯ ಇಲಾಖೆ ಪ್ರಯತ್ನ ನಡೆಸುತ್ತಿದ್ದರೂ ಇದುವರೆಗೆ ಯಶಸ್ಸು ಸಿಕ್ಕಿಲ್ಲ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾಡಂಚಿನ ಗ್ರಾಮಗಳ ಜನರ ಸಮಸ್ಯೆಗಳಿಗೆ ಸಮರ್ಪಕ ಸ್ಪಂದನೆ ದೊರೆಯುತ್ತಿಲ್ಲ ಎಂಬ ಆರೋಪವೂ ಕೇಳಿಬಂದಿದೆ.
ಸಿದ್ದರಬೆಟ್ಟ ಅರಣ್ಯ ಪ್ರದೇಶದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಚಿರತೆ, ಕರಡಿ, ಕಾಡುಹಂದಿ ಸೇರಿದಂತೆ ವಿವಿಧ ಕಾಡುಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು, ಸಾಕುಪ್ರಾಣಿಗಳ ಜೀವಹಾನಿ ಹಾಗೂ ಬೆಳೆ ನಷ್ಟ ನಿರಂತರವಾಗಿ ಸಂಭವಿಸುತ್ತಿದೆ. ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಚಿರತೆಯನ್ನು ಶೀಘ್ರ ಸೆರೆಹಿಡಿದು ಅಗತ್ಯ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.






