ಬೈಂದೂರು ಪ.ಪಂ. ವ್ಯಾಪ್ತಿಗೆ ಗ್ರಾಮೀಣ ಪ್ರದೇಶ ಸೇರ್ಪಡೆ ವಿರೋಧಿಸಿ ಪ್ರತಿಭಟನೆ

ಉಡುಪಿ, ಸೆ.17: ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಗೆ ಗ್ರಾಮೀಣ ಭಾಗಗಳನ್ನು ಅವೈಜ್ಞಾನಿಕವಾಗಿ ಸೇರಿಸಿ ರುವುದನ್ನು ವಿರೋಧಿಸಿ ಬೈಂದೂರು ತಾಲೂಕು ರೈತ ಸಂಘದ ನೇತೃತ್ವದಲ್ಲಿ ಗ್ರಾಮಸ್ಥರು ಶುಕ್ರವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಎದುರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.
ಮಣಿಪಾಲದ ಕಾಯಿನ್ ಸರ್ಕಲ್ನಿಂದ ಮೆರವಣಿಗೆಯಲ್ಲಿ ಆಗಮಿಸಿದ ಸಹಸ್ರಾರು ಸಂಖ್ಯೆಯ ರೈತರು, ಜಿಲ್ಲಾಧಿಕಾರಿ ಕಚೇರಿ ಎದುರಿನ ರಸ್ತೆಯಲ್ಲಿ ಕುಳಿತು ಶಾಲನ್ನು ತಿರುಗಿಸುತ್ತ ಘೋಷಣೆಗಳನ್ನು ಕೂಗಿದರು. ಕೆಲವರು ರಸ್ತೆಯಲ್ಲಿಯೇ ಮಲಗಿ ಆಕ್ರೋಶ ವ್ಯಕ್ತಪಡಿಸಿದರು.
ಬಳಿಕ ಜಿಲ್ಲಾಧಿಕಾರಿ ಕಚೇರಿ ಎದುರಿನ ಗೇಟಿನ ಮುಂದೆ ಹಡಿ ಮಂಚ ದಲ್ಲಿ ಭತ್ತದ ತೆನೆಯನ್ನು ಬಡಿದು ತಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಿದರು. ರೈತರು ತಮ್ಮ ಕೈಯಲ್ಲಿ ನೊಗವನ್ನು ಪ್ರದರ್ಶಿಸಿದರು. ಗೇಟನ್ನು ತೆರೆಯು ವಂತೆ ಪಟ್ಟು ಹಿಡಿದ ಪ್ರತಿಭಟನಕಾರರನ್ನು ಪೊಲೀಸರು ತಡೆದರು.
ಮಧ್ಯಾಹ್ನದವರೆಗೆ ಪ್ರತಿಭಟನೆ ನಡೆಸಿದ ರೈತರು, ಬಳಿಕ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅವರಿಗೆ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿದ ಡಿಸಿ, ಈ ಸಂಬಂಧ ಪ್ರತ್ಯೇಕ ಸಮಿತಿ ರಚಿಸಿ ಪುನರ್ ಪರಿಶೀಲನೆ ನಡೆಸಿ ವರದಿಯನ್ನು ಸರಕಾರಕ್ಕೆ ಸಲ್ಲಿಸಲಾಗುವುದು ಎಂದರು. ಪ್ರತಿಭಟನ ಕಾರರು ಸ್ಥಳದಲ್ಲಿ ಗಂಜಿ, ಚಟ್ನಿಯ ಅಡುಗೆ ತಯಾರಿಸಿ ಸೇವಿಸಿದರು.
ಪಕ್ಷದ ಸಭೆಯಲ್ಲಿ ಭಾಗವಹಿಸಲ್ಲ: ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಬೈಂದೂರು ತಾಲೂಕು ರೈತ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಪಟ್ಟಣ ಪಂಚಾಯತ್ ವ್ಯಾಪ್ತಿಯ ಗ್ರಾಮೀಣ ಭಾಗಗಳನ್ನು ಕೈಬಿಡುವಂತೆ ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು, ಜಿಲ್ಲಾಧಿಕಾರಿಗಳು 11 ವಾರ್ಡ್ಗಳಿರುವ ಹೊಸ ಬೈಂದೂರು ಪಟ್ಟಣ ಪಂಚಾಯತ್ ಪ್ರಸ್ತಾಪವನ್ನು ಸರಕಾರಕ್ಕೆ ಸಲ್ಲಿಸಿದ್ದಾರೆ ಎಂದರು.
ಈ ಪ್ರಸ್ತಾಪವನ್ನು ಜಾರಿಗೊಳಿಸಬೇಕು ಮತ್ತು ಉಳಿದ ಗ್ರಾಮೀಣ ಭಾಗಗಳನ್ನು ಕೈಬಿಟ್ಟು ಅವುಗಳನ್ನು ಗ್ರಾಮ ಪಂಚಾಯತ್ಗಳಾಗಿ ಘೋಷಿಸ ಬೇಕು. ಅಲ್ಲಿಯವರೆಗೆ ನಾವು ಯಾವುದೇ ರಾಜಕೀಯ ಪಕ್ಷಗಳ ಸಭೆಯಲ್ಲಿ ಭಾಗವಹಿಸುವುದಿಲ್ಲ. ಅದಕ್ಕೆ ನಾವು ಬದ್ಧರಾಗಿರುತ್ತೇವೆ ಎಂದು ಅವರು ತಿಳಿಸಿದರು.
ಕೆಲವರು ನಮ್ಮ ಹೋರಾಟವನ್ನು ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿ ದ್ದಾರೆ. ಅದಕ್ಕಾಗಿ ಕೆಲವರಿಗೆ ವಿವಿಧ ಆಮಿಷಗಳನ್ನು ಒಡ್ಡುತ್ತಿದ್ದಾರೆ. ಇದು ಯಾವುದಕ್ಕೂ ನಾವು ಬಗ್ಗುವುದಿಲ್ಲ. ನಮ್ಮ ಹೋರಾಟ ಇನ್ನಷ್ಟು ತೀವ್ರಗೊಳಿ ಸಲು ಸೆ.22ರಿಂದ ಬೈಂದೂರಿನಲ್ಲಿ ಅಹೋರಾತ್ರಿ ಅನಿಧಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು ನಡೆಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಸಂಘದ ಮುಖಂಡರಾದ ಅರುಣ್ ಕುಮಾರ್ ಶಿರೂರು, ವೀರಭದ್ರ ಗಾಣಿಗ, ಮ್ಯಾಥ್ಯು, ಕೃಷ್ಣ ದೇವಾಡಿಗ, ಸುಭಾಷ್ ಗಂಗನಾಡು, ನಾಗರಾಜ ಮರಾಠೆ ಮೊದಲಾದವರು ಉಪಸ್ಥಿತರಿದ್ದರು.







