ಬಜೆ ಅಣೆಕಟ್ಟಿನಲ್ಲಿ ಕಳೆದ ವರ್ಷಕ್ಕಿಂತ ನೀರಿನ ಲಭ್ಯತೆ ಕಡಿಮೆ: ಯಶ್ಪಾಲ್ ಸುವರ್ಣ

ಉಡುಪಿ: ವಾರಾಹಿ ಯೋಜನೆಯ ಮೂಲಕವೂ ನಗರಕ್ಕೆ ನೀರು ಸರಬ ರಾಜಾಗುತ್ತಿದ್ದು, ಬಜೆ ಅಣೆಕಟ್ಟಿನಲ್ಲಿ ಕಳೆದ ವರ್ಷಕ್ಕಿಂತ ನೀರಿನ ಲಭ್ಯತೆ ಕಡಿಮೆ ಇದ್ದು, ಉಡುಪಿ ನಗರ ಭಾಗಕ್ಕೆ ನಿರಂತರ ನೀರು ಪೂರೈಕೆಗೆ ಸಮಸ್ಯೆ ಯಾಗದಂತೆ ಕ್ರಮ ವಹಿಸಲಾಗುತ್ತದೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ.
ಉಡುಪಿ ನಗರಸಭೆಯ ಕುಡಿಯುವ ನೀರಿನ ಬಜೆ ಅಣೆಕಟ್ಟು ಪ್ರದೇಶಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ನೀರಿನ ಸಂಗ್ರಹ ಮಟ್ಟವನ್ನು ಪರಿಶೀಲಿಸಿ ಅವರು ಮಾತನಾಡುತಿದ್ದರು.
ಬಜೆ ಅಣೆಕಟ್ಟು ನೀರಿನ ಸಂಗ್ರಹ ಸಾಮರ್ಥ್ಯ, ಒಳಹರಿವು ಬಗ್ಗೆ ಚರ್ಚೆ ನಡೆಸಿ ಉಡುಪಿ ನಗರದ ಜನತೆಗೆ ನಿರಂತರ ನೀರು ಸರಬರಾಜಿಗೆ ಯಾವುದೇ ಯಾವುದೇ ಸಮಸ್ಯೆಯಾಗದಂತೆ ಈಗಿನಿಂದಲೇ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ನೀರು ಶುದ್ಧೀಕರಣ ಘಟಕಕ್ಕೆ ಭೇಟಿ ನೀಡಿ ಕಾರ್ಯ ಚಟುವಟಿಕೆಗಳ ಬಗ್ಗೆ ಅಧಿಕಾರಿಗಳೊಡನೆ ಸಮಾಲೋಚನೆ ನಡೆಸಿ, ಘಟಕವನ್ನು ಉತ್ತಮವಾಗಿ ನಿರ್ವಹಿಸಿ ಉಡುಪಿ ಜನತೆಗೆ ನಿರಂತರ ಶುದ್ಧ ಕುಡಿಯುವ ನೀರು ಸರಬರಾಜಿಗೆ ವಿಶೇಷ ಆದ್ಯತೆ ನೀಡುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಪೌರಾಯುಕ್ತ ಮಹಾಂತೇಶ್ ಹಂಗರಗಿ, ನಗರಸಭೆ ನಿಕಟಪೂರ್ವ ಅಧ್ಯಕ್ಷ ಪ್ರಭಾಕರ ಪೂಜಾರಿ, ನಗರಸಭಾ ಮಾಜಿ ಸದಸ್ಯರಾದ ಗಿರೀಶ್ ಅಂಚನ್, ನಗರಸಭೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ದುರ್ಗಾ ಪ್ರಸಾದ್, ಸಹಾಯಕ ಅಭಿಯಂತರ ಚೇತನ್, ವಾರಾಹಿ ಯೋಜನೆಯ ಆರ್ಕೇಶ್ ಗೌಡ ಮೊದಲಾದವರು ಉಪಸ್ಥಿತರಿದ್ದರು.






