ಸರಕಾರಿ ಕಾಲೇಜುಗಳ ಅಭಿವೃದ್ಧಿಯಲ್ಲಿ ಹಳೆ ವಿದ್ಯಾರ್ಥಿಗಳ ಪಾತ್ರ ಪ್ರಮುಖ: ಯಶ್ಪಾಲ್ ಸುವರ್ಣ

ಉಡುಪಿ, ಮೇ 27: ಸರಕಾರಿ ಕಾಲೇಜುಗಳ ಅಭಿವೃದ್ಧಿಯಲ್ಲಿ ಹಳೆ ವಿದ್ಯಾರ್ಥಿಗಳ ಪಾತ್ರ ಅತ್ಯಂತ ಪ್ರಮುಖವಾ ದುದ್ದು. ಕಾಲೇಜಿನ ಅಭಿವೃದ್ಧಿಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಮತ್ತಷ್ಟು ಚಟುವಟಿಕೆಗಳು ಸಾಗಿ ಬರಬೇಕು ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಹೇಳಿದ್ದಾರೆ.
ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಹಳೆ ವಿದ್ಯಾರ್ಥಿ ಸಂಘದ ಸ್ನೇಹ ಸಮ್ಮಿಲನ ಕಾರ್ಯಕ್ರಮ ಬೆಸುಗೆ -2026ನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಮುಖ್ಯ ಅತಿಥಿಯಾಗಿ ಎಸ್ಕೆಪಿ ಗ್ರೂಪ್ನ ವ್ಯವಸ್ಥಾಪಕ ನಿರ್ದೇಶಕ ಸಂಪತ್ ಕುಮಾರ್ ಶೆಟ್ಟಿ ಮಾತನಾಡಿ, ಕನಸು ಕಾಣಬೇಕು ಕಂಡ ಕನಸನ್ನು ಪರಿಶ್ರಮದ ಮೂಲಕ ನನಸು ಮಾಡಿಕೊಂಡಾಗ ಮಾತ್ರ ಯಶಸ್ಸು ಸಾಧ್ಯ ಎಂದು ತಿಳಿಸಿದರು.
ವಿಶೇಷ ಆಹ್ವಾನಿತರಾಗಿ ಗಿಚ್ ಗಿಲಿಗಿಲಿ ಮತ್ತು ಕಾಮಿಡಿ ಕಿಲಾಡಿ ಖ್ಯಾತಿಯ ದೀಕ್ಷಾ ಬ್ರಹ್ಮಾವರ ಮಾತನಾಡಿದರು. ಕಾಲೇಜಿನ ಹಳೆ ವಿದ್ಯಾರ್ಥಿಗಳಾದ ಉಡುಪಿ ಡಾ.ಜಿ.ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕಿ ಸುಚಿತ್ರಾ ಟಿ. ಮತ್ತು ಹಾವೇರಿ ಕೆಎಲ್ಇ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕ ಡಾ.ಶಮಂತ್ ಕುಮಾರ್ ಕೆ.ಎಸ್. ಅತಿಥಿಗಳಾಗಿದ್ದರು.
ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ನಿತ್ಯಾನಂದ ಗಾಂವಕರ್ ವಹಿಸಿದ್ದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಶಾಲಿನಿ ಯು.ಬಿ., ಕಾರ್ಯದರ್ಶಿ ಮುನಾವರ್ ಕೆ., ಕೋಶಾಧಿಕಾರಿ ನೈನಾ ಜೆ.ಶೆಟ್ಟಿ ಸಂಚಾಲಕ ಸುಷ್ಮಾ ಟಿ., ನಿಕಟಪೂರ್ವ ಅಧ್ಯಕ್ಷರಾದ ಗಣೇಶ್ ಪ್ರಸಾದ್ ನಾಯಕ್, ಸಂತೋಷ್ ಸುವರ್ಣ ಉಪಸ್ಥಿತರಿದ್ದರು.
ಹಳೆ ವಿದ್ಯಾರ್ಥಿ ಸಂಘದ ಸಂಚಾಲಕ ಡಾ.ರೋಷನ್ ಕುಮಾರ್ ಶೆಟ್ಟಿ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿ ದರು. ಶಮಿತಾ ಮತ್ತು ಸುಹಾಸ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷೆ ಲೀಲಾವತಿ ವಂದಿಸಿದರು. ತದನಂತರ ಕಲಾ ಚಿಗುರು ತಂಡದಿಂದ ಹಾಸ್ಯ ಕಾರ್ಯಕ್ರಮ ಮತ್ತು ಹಳೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.






