ಸಕಾರಾತ್ಮಕ ಚಿಂತನೆ ಬದುಕು ರೂಪಿಸುವ ಮನೋಧರ್ಮ: ವಿವೇಕ್ ರೈ

ಉಡುಪಿ, ಜೂ.5: ನಕಾರಾತ್ಮಕ ಚಿಂತೆಯನ್ನು ಬಿಟ್ಟು ಸಕಾರಾತ್ಮಕವಾಗಿ ಚಿಂತನೆ ಮಾಡುವುದು ಅತೀ ಮುಖ್ಯ. ಇದು ನಮ್ಮ ಬದುಕಿನಲ್ಲಿ ರೂಪಿಸಿ ಕೊಳ್ಳಬೇಕಾದ ಮನೋಧರ್ಮ. ಈ ಮೂಲಕ ಬದುಕು ಕಟ್ಟಿಕೊಂಡರೆ ಶ್ರೇಯಸ್ಸು ಪಡೆಯಲು ಸಾಧ್ಯ ಎಂದು ಹಿರಿಯ ವಿದ್ವಾಂಸ, ವಿಶ್ರಾಂತ ಕುಲಪತಿ ಡಾ.ಬಿ.ಎ.ವಿವೇಕ ರೈ ಹೇಳಿದ್ದಾರೆ.
ಉಡುಪಿ ಯಕ್ಷಗಾನ ಕಲಾರಂಗದ ವತಿಯಿಂದ ಕಲಾರಂಗದ ಐವೈಸಿ ಸಭಾಭವನದಲ್ಲಿ ಶುಕ್ರವಾರ ಆಯೋಜಿಸ ಲಾದ ತಲ್ಲೂರು ಕನಕಾ ಅಣ್ಣಯ್ಯ ಶೆಟ್ಟಿ ಸ್ಮರಣಾರ್ಥ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ ಪ್ರದಾನ ಸಮಾರಂಭದಲ್ಲಿ ಅವರು ಅಭಿನಂದನಾ ಭಾಷಣ ಮಾಡಿದರು.
ಯುವಜನತೆ ಫೇಸ್ಬುಕ್ಗಳಂತಹ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ ಮಾಡುತ್ತ ಭ್ರಮಲೋಕದಲ್ಲಿ ಕಾಲ ಕಳೆಯುತ್ತಿದ್ದಾರೆ. ಆ ಬದುಕಿನ ಭ್ರಮ ಲೋಕದಿಂದ ಯುವಜನತೆ ಹೊರ ಬಂದು, ಯಕ್ಷಗಾನದಂತಹ ಕಲೆಗಳ ಮೂಲಕ ಭ್ರಮಲೋಕವನ್ನು ಸೃಷ್ಠಿಮಾಡಬೇಕು. ಆ ಕಲೆ ನಮ್ಮನ್ನು ಕಾಪಾಡುತ್ತದೆ ಎಂದರು.
ಹಿರಿಯ ವಿದ್ವಾಂಸ ಡಾ.ಚಂದ್ರಶೇಖರ ದಾಮ್ಲೆ ಅವರಿಗೆ ಹೊರನಾಡು ಶ್ರೀಅನ್ನಪೂರ್ಣೇಶ್ವರೀ ದೇವಸ್ಥಾನ ಧರ್ಮ ಕರ್ತೃ ಡಾ.ಜಿ. ಭೀಮೇಶ್ವರ ಜೋಶಿ ಪ್ರಶಸ್ತಿ ಪ್ರದಾನ ಮಾಡಿದರು. ಅಧ್ಯಕ್ಷತೆಯನ್ನು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ವಹಿಸಿದ್ದರು.
ಇದೇ ಸಂದರ್ಭದಲ್ಲಿ ಯಕ್ಷಗಾನದ ಯುವ ಕಲಾವಿದರಿಗೆ ಆಯೋಜಿಸಿದ್ದ ನಾಲ್ಕು ದಿನಗಳ ಸನಿವಾಸ ಯಕ್ಷಗಾನ ಮಾರ್ಗದರ್ಶಿ ಶಿಬಿರದ ಸಮಾರೋಪ ಸಮಾರಂಭ ನಡೆಯಿತು. ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸ ಲಾಯಿತು. ಶಿಬಿರದ ನಿರ್ದೇಶಕ ಪವನ್ ಕಿರಣ್ಕೆರೆ ಅವರನ್ನು ಗೌರವಿಸ ಲಾಯಿತು.
ಸಂಸ್ಥೆಯ ಅಧ್ಯಕ್ಷ ಎಂ.ಗಂಗಾಧರ ರಾವ್ ಸ್ವಾಗತಿಸಿದರು. ನಾರಾಯಣ ಎಂ.ಹೆಗಡೆ ಪ್ರಶಸ್ತಿ ಪುರಸ್ಕೃತರ ಪರಿಚಯ ಮಾಡಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಕಾರ್ಯಕ್ರಮ ನಿರೂಪಿಸಿದರು.






