ಪತ್ರಕರ್ತ ಜನಾರ್ದನ ಮರವಂತೆ ಅವರಿಗೆ ನುಡಿನಮನ

ಕುಂದಾಪುರ, ಜೂ.26: ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪಂಚಾಯತ್ ರಾಜ್ ತಜ್ಞ, ಹಿರಿಯ ಪತ್ರಕರ್ತ ಎಸ್.ಜನಾರ್ದನ ಮರವಂತೆ ಅವರಿಗೆ ಶ್ರದ್ದಾಂಜಲಿ ಸಭೆ ಹಾಗೂ ನುಡಿ ನಮನ ಕಾರ್ಯಕ್ರಮ ಸಂಘದ ಕಚೇರಿಯಲ್ಲಿ ಶುಕ್ರವಾರ ನಡೆಯಿತು.
ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ ರಾಯಪ್ಪನಮಠ ಮಾತನಾಡಿ, ಜನಾರ್ದನ ಮರವಂತೆ ನಮ್ಮ ಕುಂದಾಪುರ ಸಂಘದ ಹಿರಿಯ ಸದಸ್ಯ ರಾಗಿದ್ದು, ನಮಗೆ ಎಲ್ಲ ರೀತಿಯಿಂದಲೂ ಮಾರ್ಗದರ್ಶನ ನೀಡುತ್ತಿದ್ದರು. ಅನೇಕ ವಿಷಯಗಳಲ್ಲಿ ಪರಿಣತಿಯನ್ನು ಪಡೆದಿದ್ದರು ಎಂದರು.
ಸಂಘದ ಪದಾಧಿಕಾರಿಗಳು, ಪತ್ರಕರ್ತರು ನುಡಿನಮನ ಸಲ್ಲಿಸಿದರು. ಜಿಲ್ಲಾ ಸಂಘದ ಕಾರ್ಯಕಾರಿ ಮಂಡಳಿ ಸದಸ್ಯ ಚಂದ್ರಮ ತಲ್ಲೂರು, ತಾಲೂಕು ಸಂಘದ ಕೋಶಾಧಿಕಾರಿ ಶ್ರೀಕಾಂತ್ ಹೆಮ್ಮಾಡಿ, ಪದಾಧಿಕಾರಿಗಳು, ಸದಸ್ಯರು, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಸಂಘದ ಗೌರವ ಕಾರ್ಯದರ್ಶಿ ಅಕ್ಷತಾ ಗಿರೀಶ್ ಉಪಸ್ಥಿತರಿದ್ದರು. ಜಿಲ್ಲಾ ಸಂಘದ ಕಾರ್ಯಕಾರಿ ಮಂಡಳಿ ಸದಸ್ಯ ರಾಘವೇಂದ್ರ ಪೈ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.




