ಆರೋಗ್ಯ ವೃದ್ಧಿಗೆ ದೈಹಿಕ ಅರಿವು ಮುಖ್ಯ: ಬಿ.ರಾಜೀವ ಶೆಟ್ಟಿ

ಉಡುಪಿ, ಜು.15: ಮನುಷ್ಯನಿಗೆ ಇಂದು ಸಾಷ್ಟು ಸವಲತ್ತುಗಳು ಇರುವುದರಿಂದ ದೈಹಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಪ್ರತಿಯೊಬ್ಬರೂ ದೇಹದ ಅಂಗಾಂಗಗಳ ರಚನೆ ಮತ್ತು ಕಾರ್ಯ ನಿರ್ವಹಣೆಯ ಬಗ್ಗೆ ತಿಳಿದುಕೊಳ್ಳುವುದು ಅತೀ ಮುಖ್ಯ. ಈ ದೃಷ್ಟಿಯಿಂದ ಆರೋಗ್ಯ ಮಾಹಿತಿ ಶಿಬಿರಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಭಾರತೀಯ ರೆಡ್ಕ್ರಾಸ್ ಸಂಸ್ಥೆಯ ರಾಜ್ಯ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ ಹೇಳಿದ್ದಾರೆ.
ಕುಂಜಿಬೆಟ್ಟಿನ ಓಕುಡೆ ಡಯಾಗ್ನೋಸ್ಟಿಕ್ ಸೆಂಟರ್ನಲ್ಲಿ, ಓಕುಡೆ ಡಯಾಗ್ನೋಸ್ಟಿಕ್ ಸೆಂಟರ್ ಉಡುಪಿ, ಭಾರತೀಯ ರೆಡ್ಕ್ರಾಸ್ ಸಂಸ್ಥೆ ಉಡುಪಿ ಹಾಗೂ ಲಯನ್ಸ್ ಕ್ಲಬ್ ಉಡುಪಿ ಮಿಡ್ಟೌನ್ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಉಚಿತ ಫ್ಯಾಟಿ ಲಿವರ್ - ನೇತ್ರ ತಪಾಸಣೆ ಮತ್ತು ಮಾಹಿತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ರೆಡ್ಕ್ರಾಸ್ ಸಭಾಪತಿ ಡಾ. ಅಶೋಕ್ ಕುಮಾರ್ ವೈ.ಜಿ ಫ್ಯಾಟಿ ಲಿವರ್ ಸಮಸ್ಯೆ ಗಳ ಕುರಿತು ವಿವರಣೆ ನೀಡಿದರು. ಸಂಪನ್ಮೂಲ ವ್ಯಕ್ತಿಗಳಾದ ಡಾ. ಅಭಿನಯ್ ಕಣ್ಣಿನ ಆರೋಗ್ಯದ ಕುರಿತು ಹಾಗೂ ಕೃಷಿ ತಜ್ಞ ಮುರಳೀಧರ್ ಭಟ್ ಆರೋಗ್ಯ ಮತ್ತು ಪ್ರಕೃತಿ ನಡುವಿನ ಸಂಬಂಧದ ಕುರಿತು ವಿವರಿಸಿದರು.
ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಉಡುಪಿ ಮಿಡ್ಟೌನ್ ಅಧ್ಯಕ್ಷ ಪುರುಷೋತ್ತಮ ನಾಯಕ್, ನಿಯೋಜಿತ ಅಧ್ಯಕ್ಷ ರಾಮಚಂದ್ರ ಪಾಟ್ಕರ್, ಕಾರ್ಯದರ್ಶಿ ಜೀವನ್ ಶೆಟ್ಟಿ, ವಿಠ್ಠಲ್ ಕಾಂಚನ್ ಉಪಸ್ಥಿತರಿದ್ದರು.
ರೆಡ್ಕ್ರಾಸ್ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರೆ, ಲಯನ್ಸ್ ಖಜಾಂಚಿ ಸುಬ್ರಹ್ಮಣ್ಯ ಶೇರಿಗಾರ್ ವಂದಿಸಿದರು.






