ಮೀನುಗಾರಿಕಾ ಕ್ಷೇತ್ರದಲ್ಲಿ ಉದ್ಯೋಗ ಸೃಷ್ಟಿಗಾಗಿಮತ್ಸ್ಯಸಂಪದ ಯೋಜನೆ; ಮೀನುಗಾರಿಕಾ ಸಹಕಾರಿ ಸಂಘಗಳ ಸಿಬ್ಬಂದಿಗೆ ತರಬೇತಿ

ಉಡುಪಿ, ಜು.24: ಮೀನುಗಾರಿಕಾ ಕ್ಷೇತ್ರದಲ್ಲಿ ಉದ್ಯೋಗ ಸೃಷ್ಟಿ, ಉತ್ಪನ್ನ ಗಳ ರಫ್ತು ನಿಟ್ಟಿನಲ್ಲಿ ಕೇಂದ್ರ ಸರಕಾರ ಮಹತ್ವಾಕಾಂಕ್ಷೆಯ ಮತ್ಸ್ಯ ಸಂಪದ ಯೋಜನೆಯನ್ನು ಜಾರಿಗೆ ತಂದು 25,000 ಕೋಟಿ ರೂ. ಅನುದಾನ ವನ್ನು ಇದಕ್ಕಾಗಿ ಮೀಸಲಿಟ್ಟಿದೆ ಎಂದು ಉಡುಪಿ ಶಾಸಕ ಯಶಪಾಲ್ ಎ.ಸುವರ್ಣ ಹೇಳಿದ್ದಾರೆ.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಜಿಲ್ಲಾ ಸಹಕಾರ ಇಲಾಖೆಗಳ ಸಹಯೋಗದಲ್ಲಿ ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಜಗನ್ನಾಥ ಸಭಾಂಗಣದಲ್ಲಿ ಉಡುಪಿ, ಬ್ರಹ್ಮಾವರ ಹಾಗೂ ಕಾಪು ತಾಲೂಕಿನ ಮೀನುಗಾರರ ಸಹಕಾರ ಸಂಘಗಳ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು ಹಾಗೂ ಮುಖ್ಯ ಕಾರ್ಯನಿರ್ವಾಹಕರಿಗೆ ಆಡಳಿತ ನಿರ್ವಹಣೆ ಕುರಿತು ವಿಶೇಷ ತರಬೇತಿ ಕಾರ್ಯಕ್ರಮವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡುತಿದ್ದರು.
ದೇಶದ ಆರ್ಥಿಕತೆಯ ಶಕ್ತಿಯಾದ ಮೀನುಗಾರಿಕಾ ಕ್ಷೇತ್ರದಲ್ಲಿ ತೊಡಗಿಸಿ ಕೊಂಡವರಿಗೆ ಮತ್ಸ್ಯಸಂಪದ ಯೋಜನೆ ಯಿಂದ ಆರ್ಥಿಕತೆ ಭದ್ರತೆ ದೊರೆಯಲಿದೆ ಎಂದ ಯಶಪಾಲ್, ಮತ್ಸ್ಯಸಂಪದ ಯೋಜನೆಯ ಪರಿಣಾಮಕಾರಿ ಅನುಷ್ಠಾನವನ್ನು ಜನ ಸಹಭಾಗಿತ್ವದಲ್ಲಿ ಮಾಡಲು ಮೀನುಗಾರಿಕಾ ಇಲಾಖಾಧಿಕಾರಿಗಳು ಕಟಿಬದ್ಧರಾಗಬೇಕು ಎಂದು ಸಲಹೆ ನೀಡಿದರು.
ಮೀನುಗಾರರಿಗೆ ನಾನಾ ಯೋಜನೆಗಳ ಮಾಹಿತಿ, ತರಬೇತಿ ಸಿಗಬೇಕು. ಯಾಂತ್ರಿಕ ಮೀನುಗಾರಿಕೆ ಮುಂದಿನ ಆ.1ರಿಂದ ಪ್ರಾರಂಭಗೊಳ್ಳಲಿದ್ದು ಮಧ್ಯಪ್ರಾಚ್ಯ ಯುದ್ಧ ಹಿನ್ನೆಲೆಯಲ್ಲಿ ನಾಡದೋಣಿಗಳಿಗೆ ಸೀಮೆ ಎಣ್ಣೆ ಸಹಿತ ಯಾಂತ್ರಿಕ ದೋಣಿಗಳಿಗೆ ಡೀಸೆಲ್ ಕೊರತೆಯಾಗದಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚಿಸಿದರು.
ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಅಲೆವೂರು ಹರೀಶ್ ಕಿಣಿ ಮಾತನಾಡಿ, ಶಿಕ್ಷಣ, ತರಬೇತಿ, ಪ್ರಚಾರವೇ ಯೂನಿಯನ್ ಗುರಿ. ರಾಜ್ಯದಲ್ಲೇ ಯೂನಿಯನ್ ಮುಂಚೂಣಿಯಲ್ಲಿದ್ದು ದೇಶದ ಆಹಾರ, ಆರ್ಥಿಕ ಭದ್ರತೆಗೆ ಕೊಡುಗೆ ನೀಡುತ್ತಿರುವ ಮೀನುಗಾರರಿಗೆ ನಿರಂತರ ತರಬೇತಿ ಜೊತೆಗೆ ಇಲಾಖೆ ಜನಸ್ನೇಹಿ ಆಗಬೇಕು ಎಂದರು.
ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಹೆಚ್. ಗಂಗಾಧರ ಶೆಟ್ಟಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಗಳಾದ ಪ್ರಾಧ್ಯಾಪಕ ಸಂತೋಷ್ ಶೆಟ್ಟಿ ಹಾಗೂ ಮೀನುಗಾರಿಕಾ ಸಹಾಯಕ ನಿರ್ದೇಶಕಿ ರೆನಿಟಾ ಡಿಸೋಜಾ ಉಪಸ್ಥಿರಿದ್ದರು. ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅನುಷಾ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಉಪನ್ಯಾಸ: ಮೀನುಗಾರಿಕಾ ಇಲಾಖೆಯಿಂದ ಸಿಗುವ ಸೌಲಭ್ಯಗಳ ಕುರಿತು ಮಲ್ಪೆ ಮೀನುಗಾರಿಕಾ ಬಂದರು ಯೋಜನಾ ಕಚೇರಿಯ ಮೀನುಗಾರಿಕಾ ಸಹಾಯಕ ನಿರ್ದೇಶಕಿ ರೆನಿಟಾ ಡಿ ಸೋಜಾ ಹಾಗೂ ಒತ್ತಡ ನಿರ್ವಹಣೆ ಮತ್ತು ಸಮಯ ನಿರ್ವಹಣೆ ಕುರಿತು ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಸಂತೋಷ್ ಶೆಟ್ಟಿ ಉಪನ್ಯಾಸ ನೀಡಿದರು.






