ದೇಶದಲ್ಲಿ ಅರಾಜಕತೆ ಸೃಷ್ಟಿ ಆರೋಪ: ಬಿಜೆಪಿ ಪ್ರತಿಭಟನೆ

ಉಡುಪಿ, ಜು.28: ‘ಕಾಕ್ರೋಚ್’ ಹಾಗೂ ಕಾಂಗ್ರೆಸ್ ಬೆಂಬಲಿತರು ದೇಶದಲ್ಲಿ ಅರಾಜಕತೆ ಸೃಷ್ಟಿಸಿ, ಗೂಂಡಾ ಸಂಸ್ಕೃತಿ ಮತ್ತು ದೇಶವಿರೋಧಿ ನೀತಿಯನ್ನು ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಹಳೆಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಮಂಗಳವಾರ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.
ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಮಾಜಿ ಸಚಿವ ವಿ. ಸುನಿಲ್ ಕುಮಾರ್, ಚಳವಳಿಯ ಹೆಸರಿನಲ್ಲಿ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕೆಲವರು ಪ್ರಯತ್ನಿಸುತ್ತಿದ್ದು, ‘ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಹಿಂದೂ ಧರ್ಮದ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸುವ ಮೂಲಕ ದೇಶವನ್ನು ಅವಮಾನಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.
ಶಾಸಕರಾದ ಯಶ್ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಎ.ಕಿರಣ್ ಕುಮಾರ್ ಕೊಡ್ಗಿ, ಗುರುರಾಜ ಗಂಟಿಹೊಳೆ, ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಮುಖಂಡರಾದ ಮಟ್ಟಾರು ರತ್ನಾಕರ್ ಹೆಗ್ಡೆ, ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯ ಶೆಟ್ಟಿ, ಶ್ರೀಕಾಂತ್ ನಾಯಕ್ ಅಲೆವೂರು, ದಿನಕರ್ ಬಾಬು, ಸುರೇಶ್ ನಾಯಕ್ ಕುಯಿಲಾಡಿ, ಲಾಲಾಜಿ ಆರ್.ಮೆಂಡನ್, ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಶ್ಯಾಮಲ್ ಎಸ್. ಕುಂದರ್ ಉಪಸ್ಥಿತರಿದ್ದರು.
ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಹಾಗೂ ಕಾಕ್ರೋಚ್’ ಪಾರ್ಟಿ ವಿರುದ್ಧ ಘೋಷಣೆಗಳನ್ನು ಕೂಗಿ, ವಿಪಕ್ಷ ನಾಯಕರ ‘ಜಿರಲೆ’ ಭಾವಚಿತ್ರಕ್ಕೆ ರಾಸಾಯನಿಕ ಸಿಂಪಡಿಸಿ, ಕಲ್ಲಿನಿಂದ ಜಜ್ಜುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.






