ಶಿಕ್ಷಕರು ಅಜ್ಞಾನದ ಕ್ತತಲೆಯಿಂದ ಸುಜ್ಞಾನದ ಬೆಳಕಿನತ್ತ ಒಯ್ಯುವವರು: ಸಂಸದ ಕೋಟ ಶ್ರೀನಿವಾಸ ಪೂಜಾರಿ
ಉಡುಪಿ ಜಿಲ್ಲಾ ಶಿಕ್ಷಕರ ದಿನಾಚರಣೆ

ಬ್ರಹ್ಮಾವರ, ಸೆ.5: ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ವಿದ್ಯಾರ್ಥಿಗಳನ್ನು ಕರೆದೊಯ್ಯುವವರೇ ಶಿಕ್ಷಕರು. ಸಮಾಜದಲ್ಲಿ ಉತ್ತಮ ವಾತಾವರಣ ಸೃಷ್ಟಿಸುವಲ್ಲಿ ಶಿಕ್ಷಕರು ವಹಿಸುವ ಪಾತ್ರ ಅತ್ಯಮ್ಯೂಲ್ಯವಾದದ್ದು. ಪ್ರತಿಯೊಬ್ಬರಿಗೂ ಶಿಕ್ಷಣದ ಅರಿವು ಮೂಡಿಸಿ ಜ್ಞಾನಾರ್ಜನೆಯನ್ನು ಎರಕ ಹೊಯ್ಯುವ ಶಿಕ್ಷಕರು ಮಕ್ಕಳ ಪಾಲಿಗೆ ದೇವರು ಕೊಟ್ಟ ವರ ಎಂದು ಉಡುಪಿ -ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅಭಿಪ್ರಾಯಪಟ್ಟಿದ್ದಾರೆ.
ಬ್ರಹ್ಮಾವರದ ಶ್ಯಾಮಿಲಿ ಶನಾಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಛೇರಿ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ಬ್ರಹ್ಮಾವರ ವಲಯ, ಡಾ.ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಅಂಬಲಪಾಡಿ ಹಾಗೂ ಗೀತಾನಂದ ಫೌಂಡೇಶನ್ ಕೋಟ ಇವರ ಸಹಯೋಗದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮ ದಿನಾಚರಣೆ ಅಂಗವಾಗಿ ಶನಿವಾರ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಹಾಗೂ ಸಾವಿತ್ರಿ ಬಾಯಿ ಪುಲೆ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡುತ್ತಿದ್ದರು.
ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಚಿಂತನೆಯಂತೆ ಶಿಕ್ಷಕರು ಕೇವಲ ಬೋಧಿಸುವ ಅಧಿಕಾರಿಯಲ್ಲ. ಬದಲಾಗಿ ಎಳೆಯ ಮಕ್ಕಳಲ್ಲಿ ಶಿಕ್ಷಣದ ಮೂಲಕ ರಾಷ್ಟ್ರಪ್ರೇಮ ಬಿತ್ತುವ, ಅವರಲ್ಲಿರುವ ಪ್ರತಿಭೆ ಹೊರಹೊಮ್ಮಲು ಪ್ರೋತ್ಸಾಹಿ ಸುವ ಗುರು. ಮಕ್ಕಳನ್ನು ದೇಶದ ಆಸ್ತಿಯನ್ನಾಗಿ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುವ ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಿರುವ ಶಿಕ್ಷಕರನ್ನು ಗೌರವಿಸಲು ಅವರ ಜನ್ಮದಿನವನ್ನು ಶಿಕ್ಷಕರ ದಿನವನ್ನಾಗಿ ಆಚರಿಸ ಲಾಗುತ್ತಿದೆ ಎಂದರು.
ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ ಗಫೂರ್ ಮಾತನಾಡಿ, ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಪೋಷಕರ ಜೊತೆಯಲ್ಲಿ ಇರುವವರು ಶಿಕ್ಷಕರು. ಶಿಕ್ಷಕರು ಮಕ್ಕಳ ತಪ್ಪುಒಪ್ಪುಗಳನ್ನು ತಿದ್ದಿ, ತೀಡಿ, ಸುಸಂಸ್ಕೃತರ ನ್ನಾಗಿ ಮಾಡುವುದರೊಂದಿಗೆ ಸನ್ನಡತೆಯ ದಾರಿಗೆ ತರುತ್ತಿದ್ದಾರೆ. ದೇವರು ಒಪ್ಪುವ ರೀತಿಯಲ್ಲಿ ಸಮಾಜ ಕಟ್ಟುವ ಕೆಲಸ ಮಾಡುತ್ತಿರುವ ಶಿಕ್ಷಕರಿಗೆ ಗೌರವ ಸಲ್ಲಿಸಲು ಇದೊಂದು ಉತ್ತಮ ದಿನವಾಗಿದೆ ಎಂದರು.
ಶ್ರೀನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜನಾಥ ಪೂಜಾರಿ ಮಾತನಾಡಿ, ಉಡುಪಿ ಜಿಲ್ಲೆ ಶೈಕ್ಷಣಿಕವಾಗಿ ಮುಂಚೂಣಿ ಯಲ್ಲಿದ್ದು, ಇದಕ್ಕೆ ಪೋಷಕರು, ಮಕ್ಕಳು, ಆಡಳಿತ ವರ್ಗ ಜೊತೆಗೆ ಶಿಕ್ಷಕರೇ ಮೂಲ ಕಾರಣ. ಮಹತ್ಮಾಗಾಂಧೀಜಿ ಶಿಕ್ಷಣದಿಂದ ಮಾತ್ರ ದೇಶದಲ್ಲಿ ಬದಲಾವಣೆ ಸಾಧ್ಯ, ಮೂಢನಂಬಿಕೆ ತೊಡೆದು ಹಾಕಲು ಸಾಧ್ಯ ಎಂದಿದ್ದರು. ಅದೇ ರೀತಿ ಶಿಕ್ಷಕರ ಬಗ್ಗೆ ಅತೀವ ಕಾಳಜಿ ಹೊಂದಿದ್ದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರು ಶಿಕ್ಷಕರಿಗೆ ಆದರ್ಶಪ್ರಾಯರು ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಜಿಲ್ಲೆಯ ಶಿಕ್ಷಣ ವ್ಯವಸ್ಥೆ ಯಲ್ಲಿ ನಿರಂತರ ಸುಧಾರಣೆ ಆಗುತ್ತಿರುವುದನ್ನು ನಾವು ಕಾಣುತ್ತಿದ್ದೇವೆ. ಇದಕ್ಕೆ ಶಿಕ್ಷಕರ ಕೊಡುಗೆ ಪ್ರಮುಖ ಕಾರಣ. ಶಿಕ್ಷಕರು ಮಕ್ಕಳಿಗೆ ಶಿಕ್ಷಣದ ಜೊತೆಗೆ ಜೀವನದ ಮೌಲ್ಯಗಳು, ಹೊಸ ಚಿಂತನೆಗಳು, ಅವರ ಆಲೋಚನೆಗಳಿಗೆ ಜೀವ ತುಂಬಬೇಕು. ರಾಜ್ಯಕ್ಕೆ ಮಾದರಿಯಾಗಿ ಜಿಲ್ಲೆಯ ಶಿಕ್ಷಕರು ತಮ್ಮ ಕೆಲಸ ನಿರ್ವಸುತ್ತಿದ್ದಾರೆ. ಸಮಾಜ ದಲ್ಲಿ ಬದಲಾವಣೆ ನಿರಂತರ ಪ್ರಕ್ರಿಯೆಯಾಗಿದ್ದು, ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಮೂಡಿಸುವ ಕೆಲಸವನ್ನು ಶಿಕ್ಷಕರು ಮಾಡಬೇಕು ಎಂದರು.
ವಿಶೇಷ ಉಪನ್ಯಾಸ ನೀಡಿ ಮಾತನಾಡಿದ ನಿವೃತ್ತ ಪ್ರಾಂಶುಪಾಲ ಬಿ. ಬಾಲಕೃಷ್ಣ ಶೆಟ್ಟಿ ಮೊಳಹಳ್ಳಿ, ಮಕ್ಕಳನ್ನು ಸತ್ಪ್ರಜೆಗಳಾಗಿ ರೂಪಿಸುವಲ್ಲಿ ಪೋಷಕರೊಂದಿಗೆ ಶಿಕ್ಷಕರ ಹೊಣೆಗಾರಿಯೂ ದೊಡ್ಡದಿದೆ. ಶಿಕ್ಷಕ ಎಂದರೆ ಜ್ಞಾನ, ಕೌಶಲ್ಯ ಮತ್ತು ಮೌಲ್ಯಗಳನ್ನು ಇತರರಿಗೆ ಕಲಿಸುವ ಅಥವಾ ಮಾರ್ಗದರ್ಶನ ನೀಡುವ ವ್ಯಕ್ತಿ. ಅವರ ಮಾರ್ಗದರ್ಶ ನವನ್ನು ಮಕ್ಕಳು ಸದಾ ಪಾಲಿಸುತ್ತಾರೆ. ಶಿಕ್ಷಕರು ವಿದ್ಯಾರ್ಥಿಗಳಿಗೆ ಜ್ಞಾನ ನೀಡುವ ಜತೆಗೆ, ಅವರ ವ್ಯಕ್ತಿತ್ವ ವಿಕಸನಕ್ಕೂ ಸಹಾಯ ಮಾಡುತ್ತಾರೆ. ಶಿಕ್ಷಕರು ಕಾಲಕ್ಕೆ ತಕ್ಕಂತೆ ಬದಲಾಗಬೇಕು. ಹೊಸತನವನ್ನು ರೂಢಿಸಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಕಿರಿಯ ಪ್ರಾಥಮಿಕ ಶಾಲೆ, ಹಿರಿಯ ಪ್ರಾಥಮಿಕ ಶಾಲೆ, ಪ್ರೌಢ ಶಾಲೆಗಳ ಸನ್ಮಾನಿಸಲಾಯಿತು. ಇವರೊಂದಿಗೆ ವಯೋನಿವೃತ್ತಿ ಹೊಂದಿದ ಶಿಕ್ಷಕರನ್ನು ಸಹ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಎಸ್.ಎಸ್. ಕಾದ್ರೋಳ್ಳಿ, ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪನಿರ್ದೇಶಕ ಡಾ. ಅಶೋಕ್ ಕಾಮತ್, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ನ ಶಾಲಿನಿ ಜಿ.ಶಂಕರ್, ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್, ಎಲ್ಲಾ ತಾಲೂಕು ಶಿಕ್ಷಕ ಸಂಘಟನೆಗಳ ಅಧ್ಯಕ್ಷರು ಹಾಗೂ ಇತರರು ಉಪಸ್ಥಿತರಿದ್ದರು.
ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಲೋಕೇಶ್ ಸಿ ಪ್ರಾಸ್ತಾವಿಕ ವಾಗಿ ಮಾತನಾಡಿ ಸ್ವಾಗತಿಸಿದರೆ, ಮಂಜುಳಾ ಜಯಕರ್ ಹಾಗೂ ಸತೀಶ್ ಚಂದ್ರ ಶೆಟ್ಟಿ ಚಿತ್ರಪಾಡಿ ಕಾರ್ಯಕ್ರಮ ನಿರೂಪಿಸಿದರು. ಬ್ರಹ್ಮಾವರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಉಮಾ ಪಿ ವಂದಿಸಿದರು.






