ನಾಲ್ಕು ತಿಂಗಳೊಳಗೆ ತ್ರಾಸಿ - ಮರವಂತೆ ಬೀಚ್ ಅಭಿವೃದ್ಧಿ ಪೂರ್ಣ: ಪ್ರವಾಸೋದ್ಯಮ ಸಚಿವ ಕೆ.ಜೆ ಜಾರ್ಜ್ ಭರವಸೆ

ಮರವಂತೆ (ಕುಂದಾಪುರ), ಸೆ.7: ಕಳೆದ ಕೆಲವು ವರ್ಷಗಳಿಂದ ನಡೆಯುತ್ತಿರುವ ತ್ರಾಸಿ-ಮರವಂತೆ ಬೀಚ್ ಅಭಿವೃದ್ಧಿ ಕಾಮಗಾರಿಗೆ ವೇಗ ನೀಡಿ ಮುಂದಿನ ಮೂರ್ನಾಲ್ಕು ತಿಂಗಳೊಳಗೆ ಪೂರ್ಣಗೊಳಿಸಿ ಪ್ರವಾಸಿಗರ ಬಳಕೆಗೆ ಅವಕಾಶ ಮಾಡಿಕೊಡಲಾಗುವುದು ಎಂದು ರಾಜ್ಯ ಇಂಧನ ಮತ್ತು ಪ್ರವಾಸೋದ್ಯಮ ಇಲಾಖೆಯ ಸಚಿವ ಕೆ.ಜೆ.ಜಾರ್ಜ್ ಭರವಸೆ ನೀಡಿದ್ದಾರೆ.
ಅರಬಿಸಮುದ್ರ ಮತ್ತು ನದಿಯ ನಡುವೆ ರಾಷ್ಟ್ರೀಯ ಹೆದ್ದಾರಿ 66 ಹಾದು ಹೋಗುವ ಅದ್ಭುತ ಪ್ರಾಕೃತಿಕ ಸೌಂದರ್ಯಕ್ಕೆ ವಿಶ್ವ ಪ್ರಸಿದ್ಧಿ ಪಡೆದಿರುವ ತ್ರಾಸಿ- ಮರವಂತೆ ಬೀಚ್ಗೆ ಇಂದು ಭೇಟಿ ನೀಡಿ ಅಲ್ಲಿನ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಿದ ಬಳಿಕ ಅವರು ಈ ವಿಷಯ ತಿಳಿಸಿದರು.
ತ್ರಾಸಿ-ಮರವಂತೆ ಬೀಚ್ನಲ್ಲಿ ಪಾಕಿರ್ಂಗ್, ಫುಡ್ಕೋರ್ಟ್, ಸೈಕಲ್ ಟ್ರ್ಯಾಕ್, ಬಯಲು ರಂಗಮಂದಿರ ವನ್ನೊಳಗೊಂಡ ಆ್ಯಂಪಿ ಥಿಯೇಟರ್ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಸುಮಾರು 9.95 ಕೋಟಿ ರೂ. ವೆಚ್ಚದಲ್ಲಿ ಕಳೆದ 2 ವರ್ಷಗಳಿಂದ ನಡೆಯುತ್ತಿದ್ದು, ಕಾಮಗಾರಿಗೆ ವೇಗ ನೀಡುವುದರೊಂದಿಗೆ ತ್ವರಿತಗತಿಯಲ್ಲಿ ಪೂರ್ಣಗೊಳಿಸಲಾಗುವುದು ಎಂದರು.
ಇದನ್ನು ಜಿಲ್ಲೆಯ ಪ್ರಮುಖ ಪ್ರವಾಸೋದ್ಯಮ ತಾಣವಾಗಿ ಅಭಿವೃಧ್ಧಿ ಗೊಳಿಸಲಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿ 66ರ ಒಂದು ಬದಿಯಲ್ಲಿರುವ ಪ್ರವಾಸೋದ್ಯಮ ಇಲಾಖೆಗೆ ಸೇರಿದ ಹೊಟೇಲ್ ಹಾಗೂ ಬೀಚ್ಗೆ ನೇರ ಸಂಪರ್ಕ ಕಲ್ಪಿಸಲು ಹೆದ್ದಾರಿಗೆ ಅಡ್ಡಲಾಗಿ ಸ್ಕೈವಾಕ್ ನಿರ್ಮಾಣಕ್ಕೆ ನಿರ್ಧರಿ ಸಲಾಗಿದ್ದು, ಇದಕ್ಕಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದೊಂದಿಗೆ ಮಾತುಕತೆ ನಡೆಸಲಾಗುವುದು ಎಂದರು.
ಕರಾವಳಿ ಭಾಗದಲ್ಲಿ ಬೀಚ್ಗಳನ್ನು ಅಭಿವೃದ್ಧಿಗೊಳಿಸಿ, ಕುಡಿಯವ ನೀರು, ಬೆಳಕಿನ ವ್ಯವಸ್ಥೆ, ಸುಸಜ್ಜಿತ ಶೌಚಗೃಹ, ವಾಹನಗಳ ಪಾರ್ಕಿಂಗ್ಗೆ ಸೂಕ್ತ ವ್ಯವಸ್ಥೆ, ಆಸನದ ವ್ಯವಸ್ಥೆ ಸೇರಿದಂತೆ ಅತ್ಯಾಧುನಿಕ ಸೌಲಭ್ಯಗಳನ್ನು ಪ್ರವಾಸಿ ಗರಿಗೆ ಕಲ್ಪಿಸಿದ್ದಲ್ಲಿ ಪ್ರವಾಸೋದ್ಯಮ ಕ್ಷೇತ್ರಕ್ಕೆ ಇನ್ನಷ್ಟು ಬಲ ದೊರೆತು ಪ್ರವಾಸಿಗರ ಸಂಖ್ಯೆ ಹೆಚ್ಚುವುದರೊಂದಿಗೆ ಸ್ಥಳೀಯ ಉದ್ಯೋಗಾವಕಾಶ ಗಳಿಗೂ ಉತ್ತೇಜನ ಸಿಗಲಿದೆ ಎಂದ ಅವರು ಮುಂದಿನ ಕಾಮಗಾರಿ ವೇಳೆ ಇದಕ್ಕೆ ಒತ್ತು ನೀಡಲಾಗುವುದು ಎಂದರು.
ಕರಾವಳಿ ಜಿಲ್ಲೆಗಳಲ್ಲಿ ಪ್ರವಾಸೋದ್ಯಮದ ಅಭಿವೃದ್ಧಿಗೆ ವಿಪುಲ ಅವಕಾಶಗಳಿವೆ. ಹಾಗೆಂದು ಅಭಿವೃದ್ಧಿ ಕಾಮಗಾರಿ ಗಳಿಗೆ ಅನಗತ್ಯ ವೆಚ್ಚ ಮಾಡದೇ ಸಾರ್ವಜನಿಕರು ಹಾಗೂ ಪ್ರವಾಸಿಗರ ಅಗತ್ಯಕ್ಕೆ ಅನುಗುಣವಾಗಿ ಕಾಮಗಾರಿ ಗಳನ್ನು ಕೈಗೊಳ್ಳಲಾಗುವುದು ಎಂದವರು ಭರವಸೆ ನೀಡಿದರು.
ಕಡಲು ಮತ್ತು ನದಿ ಮಧ್ಯೆ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು 1.5 ಕಿ.ಮೀ. ಉದ್ದವಿರುವ ತ್ರಾಸಿ ಮತ್ತು ಮರವಂತೆ ಬೀಚ್ನಲ್ಲಿ ತಡೆಬೇಲಿ ಇಲ್ಲದೇ ಇರುವುದರಿಂದ ಪ್ರವಾಸಿಗರು ಹೆದ್ದಾರಿ ಬದಿಗಳಲ್ಲಿ ಎಲ್ಲೆಂದರಲ್ಲಿ ವಾಹನವನ್ನು ನಿಲ್ಲಿಸಿ ಬೀಚ್ಗೆ ಇಳಿಯುತ್ತಾರೆ. ಈ ಬಗ್ಗೆ ನಿಗಾ ವಹಿಸಲು ಹಾಗೂ ಸುರಕ್ಷತಾ ದೃಷ್ಟಿಯಿಂದ ಸ್ಥಳೀಯ ಜೀವರಕ್ಷಕರನ್ನು ಅಗತ್ಯ ತರಬೇತಿ ನೀಡಿ ನೇಮಕ ಮಾಡಲಾಗುವುದು ಎಂದರು.
ಜಿಲ್ಲೆಯಲ್ಲಿ ‘ಟೆಂಪಲ್ ಟೂರಿಸಂ’ನ್ನು ಅಭಿವೃದ್ಧಿ ಪಡಿಸಲು ಉತ್ತಮ ಅವಕಾಶಗಳಿವೆ. ತಿರುಪತಿಯಂತೆ ಇದನ್ನು ವ್ಯವಸ್ಥಿತವಾಗಿ ನಡೆಸಲು ಬೇಕಾದ ಯೋಜನೆಯನ್ನು ರೂಪಿಸಲು ಅವರು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ಗಳನ್ನು ನೀಡಿದರು. ಜಿಲ್ಲೆಯ ಶ್ರೀಕೃಷ್ಣ ಮಠ, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ, ಕಮಲಶಿಲೆ, ಮಾರಮಕಟ್ಟೆ ಸೇರಿದಂತೆ ವಿವಿಧ ಧಾರ್ಮಿಕ ಕ್ಷೇತ್ರಗಳಿಗೆ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಹಾಗೂ ಭಕ್ತರು ಆಗಮಿಸು ತ್ತಾರೆ. ಇದನ್ನು ಬಳಸಿಕೊಂಡು ಈ ಎಲ್ಲಾ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ಪೂರಕವಾಗಿ ವ್ಯವಸ್ಥಿತ ಮೂಲಸೌಕರ್ಯ ಒದಗಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಗೋಪಾಲ ಪೂಜಾರಿ, ಜೆ.ಆರ್.ಲೋಬೊ, ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್, ಜಿಲ್ಲಾ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ಕುಮಾರ್ ಕೊಡವೂರು, ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ರಾಮ್ಪ್ರಸಾತ್ ಮನೋಹರ್, ಎಡಿಸಿ ಅಬೀದ್ ಗದ್ಯಾಳ, ಪ್ರವಾಸೋದ್ಯಮ ಇಲಾಖೆಯ ಜಿಲ್ಲಾ ಸಹಾಯಕ ನಿರ್ದೇಶಕಿ ವಿಂಧ್ಯಾ ಎನ್.ಎಮ್ ಮತ್ತಿತರರು ಉಪಸ್ಥಿತರಿದ್ದರು.






