ಕಡಲ್ಕೊರೆತದಿಂದ ಪ್ರವಾಸೋದ್ಯಮ ಅಭಿವೃದ್ಧಿ, ಚಟುವಟಿಕೆಗೆ ಸಮಸ್ಯೆ; ಶೀಘ್ರ ಮೀನುಗಾರಿಕಾ ಇಲಾಖೆಯೊಂದಿಗೆ ಜಂಟಿ ಸಭೆ: ಕೆ.ಜೆ.ಜಾರ್ಜ್
ಪಡುಬಿದ್ರಿ ಬ್ಲೂಫ್ಲ್ಯಾಗ್ ಬೀಚ್ಗೆ ಭೇಟಿ; ಪರಿಶೀಲನೆ

ಪಡುಬಿದ್ರಿ, ಸೆ.7: ಕರಾವಳಿ ಭಾಗದಲ್ಲಿ ನಿರಂತರವಾಗಿ ಎದುರಾಗುತ್ತಿರುವ ಕಡಲ್ಕೊರೆತ ಸಮಸ್ಯೆಯಿಂದ ಇಲ್ಲಿನ ಪ್ರವಾಸೋದ್ಯಮದ ಅಭಿವೃದ್ಧಿಗೆ ಹಾಗೂ ಚಟುವಟಿಕೆಗಳಿಗೆ ತೊಂದರೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮೀನುಗಾರಿಕಾ ಇಲಾಖೆ ಹಾಗೂ ಉಸ್ತುವಾರಿ ಸಚಿವರೊಂದಿಗೆ ಜಂಟಿ ಸಭೆ ನಡೆಸಿ ಕಡಲ್ಕೊರೆತ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಕುರಿತು ತೀರ್ಮಾನಿಸಲಾಗಿದೆ ಎಂದು ರಾಜ್ಯ ಇಂಧನ ಮತ್ತು ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.
ಪಡುಬಿದ್ರಿಯ ಬ್ಲೂಫ್ಲಾಗ್ ಬೀಚ್ಗೆ ಸೋಮವಾರ ಬೆಳಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವರು, ಬೀಚ್ ಪ್ರದೇಶದ ಮೂಲಸೌಕರ್ಯ ಹಾಗೂ ಪ್ರವಾಸಿಗರಿಗೆ ಅಗತ್ಯವಿರುವ ಸೌಲಭ್ಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿಗಳನ್ನು ಪಡೆದುಕೊಂಡರು.
ಬ್ಲೂಫ್ಲಾಗ್ ಬೀಚ್ ಸೇರಿದಂತೆ ಕರಾವಳಿ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವುದ ರೊಂದಿಗೆ ಪ್ರವಾಸಿಗರಿಗೆ ಸುರಕ್ಷಿತ ಹಾಗೂ ಉತ್ತಮ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾ ಗುವುದು ಎಂದು ನುಡಿದ ಅವರು, ಕಡಲ್ಕೊರೆತ ನಿಯಂತ್ರಣ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಬಂಧಿಸಿದ ವಿಷಯಗಳನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಪಡುಬಿದ್ರಿಯ ಬ್ಲೂಫ್ಲಾಗ್ ಬೀಚ್ ರಸ್ತೆಯಲ್ಲಿರುವ ವಿದ್ಯುತ್ ತಂತಿಗಳಿಗೆ ಇನ್ಸುಲೇಟೆಡ್ ಕೇಬಲ್ ಅಳವಡಿಸುವ ನಿಟ್ಟಿನಲ್ಲಿ ಇಂಧನ ಇಲಾಖೆಯ ಮೂಲಕ ಅಂದಾಜು ಪಟ್ಟಿ ತಯಾರಿಸುವಂತೆ ಅವರು ಮೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು. ಇದಕ್ಕಾಗಿ ಇಂಧನ ಇಲಾಖೆಯ ಮೂಲಕ 50ಲಕ್ಷ ರೂ.ಗಳನ್ನು ತಕ್ಷಣ ಬಿಡುಗಡೆಗೊಳಿಸಲಾಗುವುದು ಎಂದರು.
ರಾಷ್ಟ್ರೀಯ ಹೆದ್ದಾರಿ 66ರಿಂದ ಪಡುಬಿದ್ರಿ ಬೀಚ್ಗೆ ಸಂಪರ್ಕ ಕಲ್ಪಿಸುವ ಸುಮಾರು ಮೂರು ಕಿ.ಮೀ. ರಸ್ತೆಯ ವಿಸ್ತರಣೆ, ಕಾಂಕ್ರೀಟ್ ಕಾಮಗಾರಿ ಹಾಗೂ ಎಂಡ್ಪಾಯಿಂಟ್ ರಸ್ತೆಯ ಕಾಮಿನಿ ಹೊಳೆಯ ಹೂಳೆತ್ತುವಿಕೆ ಕಾಮಗಾರಿಗೆ ಸಂಬಂಧಿಸಿ ಬಂದರು ಮತ್ತು ಮೀನುಗಾರಿಕಾ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಸರಕಾರಿ ಜಾಗ ಒತ್ತುವರಿ ಮಾಡಿ ಕಟ್ಟಡ ನಿರ್ಮಾಣ ಆಗುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅಧಿಕಾರಿಗಳ ಗಮನಕ್ಕೆ ಬಂದಲ್ಲಿ ಪರಿಶೀಲಿಸಿ, ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
ಹೆಜಮಾಡಿ ಹಾಗೂ ಪಡುಬಿದ್ರಿಯನ್ನು ಸಂಪರ್ಕಿಸುವ ರೀತಿಯಲ್ಲಿ ತೂಗು ಸೇತುವೆ ನಿರ್ಮಿಸುವುದು ಹಾಗೂ ಎಂಡ್ಪಾಯಿಂಟ್ ದ್ವೀಪಕ್ಕೆ ತೂಗು ಸೇತುವೆ ನಿರ್ಮಿಸುವಂತೆ ಸಚಿವರಿಗೆ ಮನವಿ ಸಲ್ಲಿಸಲಾಯಿತು
ರಸ್ತೆ ನಿರ್ವಹಣೆ ಮುಖ್ಯ: ಬೀಚ್ ಅಭಿವೃದ್ಧಿಗೊಂಡ ಬಳಿಕ ಇಲ್ಲಿಗೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ ರಸ್ತೆ ವ್ಯವಸ್ಥೆ ಸರಿಯಾಗಿಲ್ಲ. ಬೀಚ್ ರಸ್ತೆಯನ್ನು ಇನ್ನಷ್ಟು ವಿಸ್ತರಿಸಿ ಅಭಿವೃದ್ಧಿ ಪಡಿಸಬೇಕು ಎಂದು ಈ ಸಂದರ್ಭದಲ್ಲಿ ಸ್ಥಳೀಯರು ಆಗ್ರಹಿಸಿದರು. ಇದಕ್ಕೆ ಉತ್ತರಿಸಿದ ಸಚಿವರು ರಸ್ತೆ ವಿಸ್ತರಿಸುವ ಬದಲು ಇದ್ದ ರಸ್ತೆಯ ನಿರ್ವಹಣೆ ಮಾಡುವುದು ಮುಖ್ಯ ಎಂದರು.
ರಾಜ್ಯ ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ.ಗಫೂರ್, ಎಡಿಸಿ ಅಬೀದ್ ಗದ್ಯಾಳ್, ಪ್ರವಾಸೋದ್ಯಮ ಇಲಾಖೆಯ ರಾಜ್ಯ ಕಾರ್ಯದರ್ಶಿ ರಾಮಪ್ರಸಾತ್ ಮನೋಹರ್, ಇಲಾಖೆಯ ಜಿಲ್ಲಾ ಸಹಾಯಕ ನಿರ್ದೇಶಕಿ ವಿಂಧ್ಯಾ ಎನ್.ಎಮ್., ಕೆಪಿಸಿಟಿಎಲ್ನ ಎಎ ಪ್ರಶಾಂತ್, ಮೆಸ್ಕಾಂ ಚೇರ್ಮೆನ್ ಹರೀಶ್ ಕುಮಾರ್, ಮೆಸ್ಕಾಂ ಎಂಡಿ ಹರೀಶ್, ಮೆಸ್ಕಾಂ ಅಧೀಕ್ಷಕ ಇಂಜಿನಿಯರ್ ರಾಕೇಶ್, ಬ್ಲೂ ಫ್ಲ್ಯಾಗ್ ಬೀಚ್ ಮ್ಯಾನೇಜರ್ ವಿಜಯ ಶೆಟ್ಟಿ, ಮಾಜಿ ಶಾಸಕ ಜೆ.ಆರ್.ಲೋಬೋ, ಉಡುಪಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೈ.ಸುಕುಮಾರ್, ಅಬ್ದುಲ್ ಅಝೀಝ್ ಹೆಜಮಾಡಿ, ವಿಶ್ವಾಸ್ ವಿ.ಅಮೀನ್, ರಮೀಝ್ ಹುಸೈನ್, ಅಶೋಕ್ ಸಾಲ್ಯಾನ್, ನವೀನ್ ಎನ್.ಶೆಟ್ಟಿ, ನಿಯಾಝ್, ಗಣೇಶ್ ಕೋಟ್ಯಾನ್, ಅಬ್ದುಲ್ ಅಝೀಝ್, ಪ್ರಬೋದ್ಚಂದ್ರ ಹೆಜ್ಮಾಡಿ, ಜ್ಯೋತಿ ಮೆನನ್, ಕರುಣಾಕರ್ ಉಪಸ್ಥಿತರಿದ್ದರು.






