ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ: ಮಾಹಿತಿ ಕಾರ್ಯಕ್ರಮ

ಉಡುಪಿ, ಸೆ.10: ಉಡುಪಿ ಜಿಲ್ಲಾಸ್ಪತ್ರೆಯ ಮನೋರೋಗ ವಿಭಾಗ, ಮುಂಬೈ ಕಮಲ ಎ.ಬಾಳಿಗ ಚಾರಿಟೇಬಲ್ ಟ್ರಸ್ಟ್, ಉಡುಪಿ ಡಾ.ಎ.ವಿ. ಬಾಳಿಗ ಮೆಮೋರಿಯಲ್ ಆಸ್ಪತ್ರೆ, ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಉಡುಪಿ ಕರಾವಳಿ ಹಾಗೂ ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನದ ಅಂಗವಾಗಿ ಮಾಹಿತಿ ಕಾರ್ಯಕ್ರಮವನ್ನು ಗುರುವಾರ ಉಡುಪಿ ಡಾ.ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆಯಲ್ಲಿ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲ ನಿತ್ಯಾನಂದ ವಿ.ಗಾವ್ಕರ್ ಉದ್ಘಾಟಿಸಿದರು. ಜಿಲ್ಲಾಸ್ಪತ್ರೆಯ ನಿವಾಸಿ ವೈದ್ಯಾಧಿಕಾರಿ ಡಾ.ವಾಸುದೇವ್, ಐಎಂಎ ಅಧ್ಯಕ್ಷ ಡಾ.ಅಶೋಕ್ ಕುಮಾರ್, ಜಿಲ್ಲಾ ಆಸ್ಪತ್ರೆಯ ಮನೋವೈದ್ಯ ಡಾ.ಸುನಿಲ್ ಕುಮಾರ್ ಮಾತನಾಡಿದರು.
ಅಧ್ಯಕ್ಷತೆಯನ್ನು ಬಾಳಿಗಾ ಆಸ್ಪತ್ರೆಯ ನಿರ್ದೇಶಕ ಡಾ.ಪಿ.ವಿ.ಭಂಡಾರಿ ವಹಿಸಿದ್ದರು. ನಂತರ ಮನಶ್ಶಾಸ್ತ್ರಜ್ಞರು ಗಳಾದ ನಾಗರಾಜ ಮೂರ್ತಿ, ಡಾ.ದೀಪಕ್ ಮಲ್ಯ, ಡಾ.ಮನಸಾ ಹಾಗೂ ಸೌಜನ್ಯ ಶೆಟ್ಟಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ವಿಶೇಷ ಉಪನ್ಯಾಸ ನೀಡಿದರು.
ಪದ್ಮಾ ರಾಘವೇಂದ್ರ ಸ್ವಾಗತಿಸಿದರು. ಶ್ರೀಜಾ ಹಾಗೂ ಕೀರ್ತಿ ಕಾರ್ಯಕ್ರಮ ನಿರೂಪಿಸಿದರು. ಸೌಮ್ಯ ವಂದಿಸಿ ದರು. ಕಾರ್ಯಕ್ರಮದಲ್ಲಿ ತೆಂಕನಿಡಿಯೂರು, ಉಡುಪಿ, ಕುಮುದ ನರ್ಸಿಂಗ್ ಕಾಲೇಜು, ದಾವಣಗೆರೆ ಹಾಗೂ ಸರಕಾರಿ ನರ್ಸಿಂಗ್ ಕಾಲೇಜು, ಕಾರ್ಕಳದ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.






